ಹುಬ್ಬಳ್ಳಿ:ಯಾವುದೇ ಷರತ್ತಿಲ್ಲದೆ ಕಟ್ಟಿದ ಪಕ್ಷಕ್ಕೆ ವಾಪಸ್ ಬಂದಿದ್ದೇನೆ. ಹೈಕಮಾಂಡ್ ಸೂಚಿಸಿದರೆ ಧಾರವಾಡ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲು ನಾನು ಸಿದ್ಧ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ಬಿಜೆಪಿಗೆ ಮರು ಸೇರ್ಪಡೆಗೊಂಡ ನಂತರ ಇದೇ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ಅವರಿಗೆ ಪಕ್ಷದ ಕಾರ್ಯಕರ್ತರು ಭವ್ಯ ಸ್ವಾಗತ ನೀಡಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಷ್ಟ್ರೀಯ ನಾಯಕರ ಅಭಿಮತದ ಮೇರೆಗೆ ಪಕ್ಷಕ್ಕೆ ಬಂದಿದ್ದೇನೆ. ಸ್ಥಳೀಯರ ವೈಯಕ್ತಿಕ ಅಭಿಪ್ರಾಯಗಳಿಗೆ ಒತ್ತು ಕೊಡುವುದಿಲ್ಲ ಎಂದು ತಿಳಿಸಿದರು.
ಸ್ಥಳೀಯ ಕಾರ್ಯಕರ್ತರಿಂದ ಹಿಡಿದು ರಾಷ್ಟ್ರೀಯ ನಾಯಕರವರೆಗೂ ಪಕ್ಷಕ್ಕೆ ವಾಪಸ್ ಬರುವಂತೆ ಒತ್ತಡಗಳಿದ್ದವು. ಬಿ.ವೈ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದ ನಂತರ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಹಾಗೂ ರಾಷ್ಟ್ರೀಯ ನಾಯಕರು ಮಾತುಕತೆ ಮಾಡಿ ಆಹ್ವಾನಿಸಿದ್ದರು. ಮೂರ್ನಾಲ್ಕು ದಶಕಗಳಿಂದ ಕಟ್ಟಿದ ನನ್ನ ಮನೆಗೆ ವಾಪಸ್ ಬಂದಿದ್ದೇನೆ. ಮುಂದಿನ ದಿನಗಳಲ್ಲಿ ಹೈಕಮಾಂಡ್ ಸೂಚಿಸುವ ಕಾರ್ಯವನ್ನು ಮಾಡುವುದಾಗಿ ಎಂದರು.
ಕಳೆದ ವಿಧನಾಸಭೆ ಚುನಾವಣೆ ಸಂದರ್ಭದಲ್ಲಿ ನೋವಿನಿಂದ ಮಾತನಾಡಿದ್ದೆ. ಇದೀಗ ಕೆಲ ಬದಲಾವಣೆಯಿಂದ ಈ ನಿರ್ಧಾರ ಕೈಗೊಂಡಿದ್ದೇನೆ. ರಾಷ್ಟ್ರೀಯ ನಾಯಕರು ಹಿಂದೆ ಆಗಿರುವುದನ್ನು ಮರೆತುಬಿಡಿ ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಬಿಡುವಾಗ ಅವರ ವಿರುದ್ಧ ಒಂದೇ ಒಂದು ಮಾತನಾಡಿಲ್ಲ. ಅವರಿಗೆ ಧನ್ಯವಾದಗಳನ್ನು ಹೇಳಿದ್ದೇನೆ. ಜಿಲ್ಲೆಯಲ್ಲಿ ಯಾವುದೇ ಬಣಗಳಿಲ್ಲ. ಕೊನೆಗೆ ಬಿಜೆಪಿ ಪಕ್ಷ ಮಾತ್ರ. ವಾಪಸ್ ಬಂದಿರುವುದಕ್ಕೆ ಸ್ಥಳೀಯ ಕಾರ್ಯಕರ್ತರಿಂದ ಹಿಡಿದು ರಾಷ್ಟ್ರೀಯ ನಾಯಕರಲ್ಲೂ ಒಳ್ಳೆಯ ಭಾವನೆ ಮೂಡಿದೆ ಎಂದು ಶೆಟ್ಟರ್ ತಿಳಿಸಿದರು.
ಐಟಿ, ಇಡಿಗೆ ಭಯಪಟ್ಟು ಬಿಜೆಪಿಗೆ ಬಂದಿಲ್ಲ:ಬಿಜೆಪಿ ಹೈಕಮಾಂಡ್ ಹಾಗೂ ಸ್ಥಳೀಯ ಕಾರ್ಯಕರ್ತರ ಅಪೇಕ್ಷೆಯಂತೆ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಸೇರ್ಪಡೆ ಆಗಿದ್ದಾರೆ. ಪುನಃ ಎಂದಿನಂತೆ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳುವರು ಎಂದು ಜಗದೀಶ್ ಶೆಟ್ಟರ್ ಅವರ ಪುತ್ರ ಸಂಕಲ್ಪ ತಿಳಿಸಿದರು.