ಕರ್ನಾಟಕ

karnataka

ಮಕ್ಕಳ ಮನಸಲ್ಲೂ ಸಂಘರ್ಷ ಉಂಟು ಮಾಡಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲಾಗುತ್ತಿದೆ: ಬಸವರಾಜ ಬೊಮ್ಮಾಯಿ ಕಿಡಿ

By ETV Bharat Karnataka Team

Published : Feb 19, 2024, 1:04 PM IST

Updated : Feb 19, 2024, 1:16 PM IST

ಜ್ಞಾನ ದೇಗುಲವಿದು ಕೈಮುಗಿದು ಬಾ ಎಂಬ ವಾಕ್ಯವನ್ನು ಪ್ರಶ್ನೆ ಮಾಡಿ ಎಂದು ಬದಲಿಸಿರುವ ಕುರಿತು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

basavaraj bommai
ಬಸವರಾಜ ಬೊಮ್ಮಾಯಿ

ಬೆಂಗಳೂರು:ರಾಜ್ಯ ಸರ್ಕಾರ ವಸತಿ ಶಾಲೆಗಳಲ್ಲಿ ಇದುವರೆಗೂ ಇದ್ದ 'ಜ್ಞಾನ ದೇಗುಲವಿದು ಕೈಮುಗಿದು ಬಾ ಎಂಬ' ವಾಕ್ಯವನ್ನು 'ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನೆ ಮಾಡಿ' ಎಂದು ಮಕ್ಕಳ ಮನಸಲ್ಲಿ ಸಂಘರ್ಷ ಮೂಡಿಸುವ ಕೆಲಸ ಮಾಡಿಸುತ್ತಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ವಿಧಾನಸೌಧದ ಬಳಿ ಮಾತನಾಡಿದ ಅವರು, ಈ ಸರ್ಕಾರ ಸಮಾಜದಲ್ಲಿ ಮಕ್ಕಳಿಂದ ಹಿಡಿದು ಎಲ್ಲರಲ್ಲಿಯೂ ಸಂಘರ್ಷ ಉಂಟು ಮಾಡಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ ನೋಡಿ. ಸರ್ಕಾರದ ವಸತಿ ಶಾಲೆಗಳಲ್ಲಿ ಅಕ್ಕಿ ಸಿಗುತ್ತಿಲ್ಲ. ಅದೇ ಕಾರಣಕ್ಕೆ ನಾವು ಖಜಾನೆ ಖಾಲಿ ಇದೆ ಅಂತ ಹೇಳುತ್ತಿದ್ದೇವೆ‌. ಅಭಿವೃದ್ಧಿಗೆ ಹಣ ಕೊಡುವುದಿಲ್ಲ. ಹಸಿವು ಮುಕ್ತ ಕರ್ನಾಟಕ ಅಂತ ಬೋರ್ಡ್ ಹಾಕಿಕೊಂಡಿದ್ದಾರೆ. ಮೊದಲು ಶಾಲಾ ಮಕ್ಕಳಿಗೆ ಅನ್ನ ಕೊಡಿ ವಿದ್ಯೆ ಕೊಡಿ ಎಂದು ಒತ್ತಾಯಿಸಿದರು.

ನರೇಂದ್ರ ಮೋದಿ ಸರ್ಕಾರ ಬಡವರಿಗೆ ಅಕ್ಕಿಯನ್ನು ಕೊಡುತ್ತಿದೆ. ಅದನ್ನೂ ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಅದೇ ರೀತಿ ವಿದ್ಯಾರ್ಥಿಗಳಿಗೆ ನೀಡುವ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಇದೇ ವೇಳೆ ಬೊಮ್ಮಾಯಿ ದೂರಿದರು.

ಬಿಜೆಪಿ ಗೆಲ್ಲಿಸಲು ಜನ ತೀರ್ಮಾನಿಸಿದ್ದಾರೆ:ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಎಂಪಿ ಸ್ಥಾನ ಗೆಲ್ಲಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮುಂದಿನ ಮೂರು ತಿಂಗಳಲ್ಲಿ ಚುನಾವಣೆ ಫಲಿತಾಂಶ ಬರಲಿದೆ. ಸತ್ಯ ಏನಿದೆ ಅಂತ ಅವತ್ತೇ ಗೊತ್ತಾಗಲಿದೆ. ಅವರಿಗೂ ಸತ್ಯ ಗೊತ್ತಿದೆ. ಅದಕ್ಕಾಗಿ ಅವರು ಕೇಂದ್ರ ರಾಜ್ಯ ಸರ್ಕಾರದ ನಡುವೆ ಕಂದಕ ಸೃಷ್ಟಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

ಈಗಾಗಲೇ ಭಾರತದ ಜನರು ಬಿಜೆಪಿಯನ್ನು ಗೆಲ್ಲಿಸಲು ತೀರ್ಮಾನ ಮಾಡಿದ್ದಾರೆ. ಕಾಂಗ್ರೆಸ್​​ನ ನಾಯಕರಾದ ಕಮಲ್ ನಾಥ್ ಸೇರಿದಂತೆ ಅನೇಕ ಹಿರಿಯ ನಾಯಕರು ಬಿಜೆಪಿ ಸೇರಲು ಮುಂದಾಗಿದ್ದಾರೆ, ಇಂಡಿಯಾ ಒಕ್ಕೂಟ ಛಿದ್ರವಾಗುತ್ತಿದೆ ಎಂದು ಬೊಮ್ಮಾಯಿ ಲೇವಡಿ ಮಾಡಿದರು.

ಇದನ್ನೂ ಓದಿ:ಸಿದ್ದರಾಮಯ್ಯ ವಿರುದ್ಧ ಕೇಸ್​: ಹೈಕೋರ್ಟ್​ ಆದೇಶಕ್ಕೆ ತಡೆ ನೀಡಿದ ಸುಪ್ರೀಂ ಕೋರ್ಟ್​

ಇನ್ನು ವಸತಿ ಶಾಲೆಗಳ ಕಟ್ಟಡದ ಮೇಲಿನ 'ಜ್ಞಾನ ದೇಗುಲವಿದು ಕೈಮುಗಿದು ಬಾ' ಎಂಬ ವಾಕ್ಯ ಬದಲಿಸಿರುವ ವಿಷಯ ವಿಧಾನಸಭೆ ಅಧಿವೇಶನದಲ್ಲೂ ಸದ್ದು ಮಾಡಿತು. ಬಿಜೆಪಿ ಸದಸ್ಯರು ಈ ಕುರಿತು ಆಕ್ರೋಶ ಹೊರಹಾಕಿದರು. ಈ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಉತ್ತರಿಸಿ, ಈ ಕೆಲಸವನ್ನು ಸರ್ಕಾರ ಮಾಡಿಲ್ಲ, ಅಧಿಕಾರಿ ಮಾಡಿದ್ದಾರೆ ಎಂದರು. ಆಗ ಬಿಜೆಪಿ ಸದಸ್ಯರು, ಅಧಿಕಾರಿಗಳ ಮೇಲೆ ಸರ್ಕಾರದ ನಿಯಂತ್ರಣವಿಲ್ಲ ಎಂದು ಕಿಡಿಕಾರಿದರು.

Last Updated : Feb 19, 2024, 1:16 PM IST

ABOUT THE AUTHOR

...view details