ಕರ್ನಾಟಕ

karnataka

ಮಹಿಳೆಯರಿಗೆ ಅಪಮಾನ ಆಗುವ ರೀತಿಯಲ್ಲಿ ಮಾತನಾಡಿಲ್ಲ: ಹೆಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ - HD Kumaraswamy

By ETV Bharat Karnataka Team

Published : Apr 14, 2024, 8:59 PM IST

ಗ್ಯಾರಂಟಿ ಯೋಜನೆಯಿಂದ ಮಹಿಳೆಯರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂಬ ಹೇಳಿಕೆಯ ಬಗ್ಗೆ ಮಾಜಿ ಸಿಎಂ ಹೆಚ್​. ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

hd-kumaraswamy
ಮಾಜಿ ಸಿಎಂ ಹೆಚ್​. ಡಿ ಕುಮಾರಸ್ವಾಮಿ

ಮಾಜಿ ಸಿಎಂ ಹೆಚ್​. ಡಿ ಕುಮಾರಸ್ವಾಮಿ

ಬೆಂಗಳೂರು: ಗ್ಯಾರಂಟಿಗಳ ಬಗ್ಗೆ ಹೇಳಿದ್ದೇನೆಯೇ ಹೊರತು, ಮಹಿಳೆಯರಿಗೆ ಅಪಮಾನ ಮಾಡುವ ರೀತಿಯಲ್ಲಿ ನಾನು ಮಾತನಾಡಿಲ್ಲ. ಅನಗತ್ಯವಾಗಿ ಕಾಂಗ್ರೆಸ್ ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದೆ. ಸೋಲುವ ಹತಾಶೆ ಕಾಂಗ್ರೆಸ್ ಅನ್ನು ಕಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ‌.

ತಮ್ಮ ಹೇಳಿಕೆಯ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರು ನೀಡುತ್ತಿರುವ ಪ್ರತಿಕ್ರಿಯೆಗಳಿಗೆ ತಮ್ಮ ನಿವಾಸದ ಬಳಿ ತಿರುಗೇಟು ನೀಡಿದ ಅವರು, ಕಾಂಗ್ರೆಸ್ ನಾಯಕರಿಗೆ ಬರ, ನೀರಿನ ಸಮಸ್ಯೆಗಿಂತ ರಾಜಕೀಯವೇ ಹೆಚ್ಚಾಗಿದೆ ಎಂದು ಟೀಕಿಸಿದರು. ಸಿದ್ದರಾಮಯ್ಯ ಅವರ ಬಳಿ ಈ ಬಗ್ಗೆ ಹೇಳುವುದು ಏನಿದೆ? ಇದನ್ನು ಬಿಟ್ಟು ಬೇರೇನು ಹೇಳಬೇಕಿಲ್ಲ. ನಾನು ಹೇಳಿದ್ದೇ ಬೇರೆ, ಇವರು ತಿರುಚಿ ಹೇಳಿದ್ದೇ ಬೇರೆ. ಗ್ಯಾರಂಟಿಗಳ ಹೆಸರಲ್ಲಿ ನಿಮ್ಮನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದಷ್ಟೇ ಹೇಳಿದ್ದೇನೆ. ನಾನು ಮಹಿಳೆಯರನ್ನು ಅವಮಾನ ಮಾಡಿದ್ದೀನಾ? ಖಂಡಿತಾ ಇಲ್ಲ. ಮುಗ್ದ ಜನರನ್ನು, ಮಹಿಳೆಯರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದಿದ್ದೇನೆ. ನೀವು ಎಚ್ಚರಿಕೆಯಿಂದ ಇರಿ ಎಂದು ಹೇಳಿದ್ದೇನೆ ಎಂದರು.

ನಾನಾಗಲಿ, ನನ್ನ ಕುಟುಂಬವಾಗಲಿ ಮಹಿಳೆಯರ ಬಗ್ಗೆ ಅಗೌರವದಿಂದ ನಡೆದುಕೊಂಡಿಲ್ಲ. ನಡೆದುಕೊಳ್ಳುವುದೂ ಇಲ್ಲ. ಕಷ್ಟ ಅಂತ ಬಂದಾಗ ನಾನು ನೆರವಾಗಿದ್ದೇನೆ. ಅಧಿಕಾರ ಸಿಕ್ಕಿದಾಗ ಮಹಿಳೆಯರಿಗಾಗಿ ಒಳ್ಳೆಯ ಕಾರ್ಯಕ್ರಮ ಕೊಟ್ಟಿದ್ದೇನೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಮಹಿಳೆಯರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದೇನೆ. ಮಹಿಳೆಯರ ಕೂಗಿಗೆ ಸ್ಪಂದಿಸಿ ಸಾರಾಯಿ, ಲಾಟರಿ ನಿಷೇಧಿಸಿದ್ದೇನೆ. ನಾನು ಮಹಿಳೆಯರಿಗೆ ನೀಡಿದ ಗೌರವ ಇದು ಎಂದು ಹೆಚ್​ಡಿಕೆ ಹೇಳಿದರು.

ಮಹಿಳೆಯರ ಬಗ್ಗೆ ನಾನು ಕೇವಲವಾಗಿ ಮಾತನಾಡುವ ವ್ಯಕ್ತಿ ಅಲ್ಲ. ಅಸಡ್ಡೆಯಿಂದ ಕಂಡಿಲ್ಲ. ಮಹಿಳೆಯರಿಗೆ ಅವಮಾನ ಆಗುವ ರೀತಿ ಎಲ್ಲೂ ಹೇಳಿಲ್ಲ. ನಾನು ಏನು ಹೇಳಿದ್ದೇನೆ ಎನ್ನುವುದನ್ನು ಅರ್ಥ ಮಾಡಿಕೊಳ್ಳದೇ ಈ ರೀತಿ ಹೇಳುತ್ತಿದ್ದಾರೆ. ರಾಜಕೀಯದಲ್ಲಿ ನನಗೆ ಶಕ್ತಿ ಇದೆ ಅಂದರೆ ಅದು ಮಹಿಳೆಯರಿಂದಲೇ. ಕಾಂಗ್ರೆಸ್ ನಾಯಕರು ನನ್ನ ಮೇಲೆ ತಪ್ಪು ಹೊರಿಸುವ ರೀತಿ ಮಾತನಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಮೋದಿ ಸಂಕಲ್ಪ ಸಾಕಾರ ಆಗುತ್ತದೆ :ಬಿಜೆಪಿ ಪ್ರಣಾಳಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಹೆಚ್​ಡಿಕೆ, ಮೋದಿ ಅವರು ಗ್ಯಾರಂಟಿ ಮತ್ತು ಸಂಕಲ್ಪ ಹೆಸರಲ್ಲಿ ಹಲವಾರು ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದಾರೆ. ಅವು ಸಾಕಾರ ಆಗಿಯೇ ಆಗುತ್ತವೆ. 2047ರ ಗುರಿ ಇಟ್ಟುಕೊಂಡು ಚಾಲನೆ ಕೊಡಲಾಗಿದೆ. ಮಧ್ಯಮ, ಬಡ ವರ್ಗದ ಹಿತ ಕಾಯುವುದು ಮತ್ತು ದೇಶದ ರಕ್ಷಣೆ, ಸಾಮಾನ್ಯ ನಾಗರೀಕ ಸಂಹಿತೆ ಜಾರಿಗೆ ತರುವುದಾಗಿ ಭರವಸೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಜಾರಿಗೆ ತಂದು ಬಡತನ ಹೋಗಿಸುತ್ತೇವೆ ಎಂದು ಮೋದಿ ಅವರು ಹೇಳಿದ್ದಾರೆ. ಕಳೆದ 10 ವರ್ಷದಲ್ಲಿ ನಡೆದುಕೊಂಡಂತೆ ಈ ಮುಂದೆಯೂ ನಡೆದುಕೊಳ್ಳುತ್ತೇವೆ ಎಂದಿದ್ದಾರೆ ಅವರು. ಇದು ಸ್ವಾಗತಾರ್ಹ. ಮೋದಿ ಅವರ ಜತೆ ನಾವೂ ಒಂದಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ :ಗ್ಯಾರಂಟಿ ಯೋಜನೆಯಿಂದ ಹಳ್ಳಿಯ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ: ಹೆಚ್ ಡಿ ಕುಮಾರಸ್ವಾಮಿ - HD Kumaraswamy

ABOUT THE AUTHOR

...view details