ಕರ್ನಾಟಕ

karnataka

ಕೆಐಎಲ್ ಬಳಿಕ ಅರಣ್ಯ ಭೂಮಿ ವಿವಾದ 3ನೇ ವ್ಯಕ್ತಿಗೆ ಘೋಷಣೆ ಮಾಡದಂತೆ ಹೈಕೋರ್ಟ್ ನಿರ್ಬಂಧ

By ETV Bharat Karnataka Team

Published : Jan 23, 2024, 11:52 AM IST

ಭುವನಹಳ್ಳಿ ಅರಣ್ಯ ಪ್ರದೇಶಕ್ಕೆ ಸೇರಿದ ಜಮೀನಿನ ಮೇಲಿನ ಅಧಿಕಾರವನ್ನು ಬೇರೆಯವರಿಗೆ ಘೋಷಿಸದಂತೆ ಹೈಕೋರ್ಟ್‌ ನಿರ್ಬಂಧ ವಿಧಿಸಿದೆ.

ಹೈಕೋರ್ಟ್
ಹೈಕೋರ್ಟ್

ಬೆಂಗಳೂರು:ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದ ಭುವನಹಳ್ಳಿ ರಾಜ್ಯ ಅರಣ್ಯ ಪ್ರದೇಶದ 8 ಎಕರೆ 35 ಗುಂಟೆ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಮೇಲ್ಮನವಿಯ ಸ್ಥಿರಾಸ್ತಿ ಸ್ವತ್ತಿನ ಅಧಿಕಾರವನ್ನು ಮೂರನೇ ವ್ಯಕ್ತಿಗೆ ಘೋಷಿಸದಂತೆ ನಿರ್ಬಂಧಿಸಿ ಹೈಕೋರ್ಟ್ ಆದೇಶಿಸಿದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ದೇವನಹಳ್ಳಿ ತಾಲ್ಲೂಕು ವಲಯ ಅರಣ್ಯಾಧಿಕಾರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೆ, ಪ್ರತಿವಾದಿಯಾಗಿರುವ ಚಿಕ್ಕಸಣ್ಣೆ ಗ್ರಾಮದ ಸಗಟು ಹಣ್ಣಿನ ವ್ಯಾಪಾರಿ ಎಂ.ಎ.ಮೊಹಮದ್ ಸನಾವುಲ್ಲಾ ಅವರಿಗೆ ನೋಟಿಸ್ ಜಾರಿ ಮಾಡಿದೆ.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಾದಿಸಿದ ಸರ್ಕಾರಿ ವಕೀಲರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ಕಸಬಾ ಹೋಬಳಿಯಲ್ಲಿ ಚಿಕ್ಕಸಣ್ಣೆ ಮತ್ತು ಭುವನಹಳ್ಳಿಯನ್ನು ಒಳಗೊಂಡ 59 ಎಕರೆ 8 ಗುಂಟೆ ಪ್ರದೇಶವನ್ನು ರಾಜ್ಯದ ಅರಣ್ಯ ಪ್ರದೇಶ ಎಂದು ಮೈಸೂರು ಅರಣ್ಯ ನಿಯಂತ್ರಣ ಕಾಯ್ದೆಯ ಕಲಂ 17ರ ಅನುಸಾರ 1921ರ ಜನವರಿ 8ರಲ್ಲೇ ಅಧಿಸೂಚನೆ ಹೊರಡಿಸಲಾಗಿದೆ.

ಭುವನಹಳ್ಳಿ ರಾಜ್ಯ ಅರಣ್ಯ ಬ್ಲಾಕ್​ನಲ್ಲಿರುವ ಚಿಕ್ಕಸಣ್ಣೆಯ ಸರ್ವೇ ನಂಬರ್ 69ರಲ್ಲಿ (ಹಳೆಯ ಸರ್ವೇ ನಂಬರ್ 67) ವ್ಯಾಜ್ಯಕ್ಕೆ ಒಳಪಟ್ಟಿರುವ 8 ಎಕರೆ 35 ಗುಂಟೆ ಜಮೀನು ಕೂಡಾ ಸೇರಿದೆ. ಇದರಲ್ಲಿ ಮೇಲ್ಮನವಿಯ ಪ್ರತಿವಾದಿಗಳು ಮತ್ತು ಅವರ ಕಡೆಯವರು ವ್ಯಾಜ್ಯ ಪ್ರದೇಶದಲ್ಲಿ ಬಡಾವಣೆ ನಿರ್ಮಿಸಿದ್ದು, ಅರಣ್ಯ ಪ್ರದೇಶದ ಮೇಲೆ ಮೂರನೇ ವ್ಯಕ್ತಿ ಸ್ವತ್ತಿನ ಅಧಿಕಾರ ಹೊಂದಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಇದರೊಂದಿಗೆ, ಸುತ್ತಲಿನ ಇನ್ನುಳಿದ ರಾಜ್ಯ ಅರಣ್ಯ ಪ್ರದೇಶದಲ್ಲೂ ಮೂರನೇ ವ್ಯಕ್ತಿಗಳು ಪೋಡಿ ಮಾಡಿಕೊಂಡು ಲೇಔಟ್ ನಿರ್ಮಿಸಿದ್ದು ಅರಣ್ಯ ಪ್ರದೇಶವೇ ಇಲ್ಲದಂತಾಗಿದೆ. ಇಲ್ಲೀಗ ಕೇವಲ 5 ಎಕರೆ 25 ಗುಂಟೆ ಮಾತ್ರವೇ ಅರಣ್ಯ ಪ್ರದೇಶವಾಗಿ ಉಳಿದಿದೆ ಎಂದು ನ್ಯಾಯಪೀಠಕ್ಕೆ ಮಾಹಿತಿ ನೀಡಿದರು.
ಸರ್ಕಾರವು ಅರಣ್ಯ ಪ್ರದೇಶದ ಒತ್ತುವರಿಯನ್ನು ಕಾಲಕಾಲಕ್ಕೆ ಗುರುತಿಸಿ ತಡೆಯುತ್ತಿರಬೇಕು ಮತ್ತು ದಾಖಲೆಗಳನ್ನು ಕಾಪಾಡುತ್ತಿರಬೇಕು. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಆದೇಶದ ಅನುಸಾರ ವಲಯ ಅರಣ್ಯ ಅಧಿಕಾರಿ ಯು.ಜೆ.ಪವಿತ್ರಾ ಅವರು ಶ್ರಮ ವಹಿಸಿ ರಾಜ್ಯ ಅರಣ್ಯ ಪ್ರದೇಶಕ್ಕೆ ಸಂಬಂಧಿಸಿದ ದಾಖಲೆಗಳನ್ನು ಜತನದಿಂದ ಕ್ರೋಡೀಕರಿಸಿದ್ದಾರೆ. ಈ ಕ್ರೋಡೀಕೃತ ದಾಖಲೆಗಳನ್ನು ನ್ಯಾಯಪೀಠ ಪರಿಶೀಲಿಸಬೇಕು ಎಂದು ಕೋರಿದರು.

ಪ್ರಕರಣದ ಹಿನ್ನೆಲೆ:ಚಿಕ್ಕಸಣ್ಣೆ ಗ್ರಾಮ ವ್ಯಾಪ್ತಿಯಲ್ಲಿನ ಭುವನಹಳ್ಳಿಯ ಅಧಿಸೂಚಿತ ಅರಣ್ಯ ಪ್ರದೇಶದ ಕೆಲ ಭಾಗವನ್ನು 1936ರ ಸೆಪ್ಟೆಂಬರ್ 30ರಂದು ಮೈಸೂರು ಭೂ ಕಂದಾಯ ಸಂಹಿತೆ ಅನುಸಾರ ಹರಾಜು ಹಾಕಿದಾಗ ಸುಬ್ಬರಾಯ ಮೊದಲಿಯಾರ್ ಎಂಬುವರು 43 ಎಕರೆ 24 ಗುಂಟೆ ಜಮೀನನ್ನು ಖರೀದಿಸಿದ್ದರು. ಸುಬ್ಬರಾಯ ಅವರಿಗೆ 1936 ನವೆಂಬರ್ 19 ರಂದು ಮಾರಾಟ ಪ್ರಮಾಣ ಪತ್ರ ನೀಡಲಾಗಿದೆ. ಈ ಸ್ವತ್ತನ್ನು 1977 ರಲ್ಲಿ ಸದ್ಯ ಪ್ರತಿವಾದಿಯಾಗಿರುವ ಕಡೆಯವರು ಖರೀದಿಸಿದ್ದರಲ್ಲದೆ, ಈ ಕುರಿತಂತೆ ಸಿವಿಲ್ ವ್ಯಾಜ್ಯಗಳು ಉದ್ಭವಿಸಿ ಈಗ ಎರಡನೇ ಸುತ್ತಿನ ವ್ಯಾಜ್ಯ ನಡೆಯುತ್ತಿದೆ.

ಈ ಸಂಬಂಧದ ಅಸಲು ದಾವೆಯಲ್ಲಿ ದೇವನಹಳ್ಳಿಯ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ 2023ರ ಡಿಸೆಂಬರ್ 15ರಂದು ಆದೇಶ ನೀಡಿದ್ದು, ಪ್ರತಿವಾದಿಗಳಿಗೆ ಸ್ವತ್ತಿನ ಅಧಿಕಾರ ಘೋಷಣೆ ಮಾಡುವಂತೆ ನಿರ್ದೇಶಿಸಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದೆ.

ಇದನ್ನೂ ಓದಿ:ಅಧಿಕಾರಿಗಳು ಜನಸಾಮಾನ್ಯರ ಸೇವೆ ಸಲ್ಲಿಸಬೇಕೇ ವಿನಃ ಪ್ರಭಾವಿಗಳ ಪರ ಅಲ್ಲ: ಹೈಕೋರ್ಟ್

ABOUT THE AUTHOR

...view details