ಕರ್ನಾಟಕ

karnataka

ಬಿಬಿಎಂಪಿ ಸಹಾಯಕ ಎಂಜಿನಿಯರ್‌ಗಳ ನೇಮಕಾತಿ ವಿಳಂಬ: ಕೆಪಿಎಸ್‌ಸಿಗೆ ಹೈಕೋರ್ಟ್ ನೋಟಿಸ್

By ETV Bharat Karnataka Team

Published : Mar 21, 2024, 7:24 AM IST

ಬಿಬಿಎಂಪಿಯಲ್ಲಿ ಸಹಾಯಕ ಸಿವಿಲ್ ಎಂಜಿನಿಯರ್ ಹುದ್ದೆಗಳ ನೇಮಕಾತಿ ವಿಳಂಬ ಕುರಿತಾಗಿ ಕೆಪಿಎಸ್​ಸಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

Etv Bharat
Etv Bharat

ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ(ಬಿಬಿಎಂಪಿ) ಸಹಾಯಕ ಸಿವಿಲ್ ಎಂಜಿನಿಯರ್ ಹುದ್ದೆಗಳ ನೇಮಕಾತಿ ವಿಳಂಬ ಸಂಬಂಧಿಸಿದಂತೆ ಹೈಕೋರ್ಟ್, ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್‌ಸಿ) ನೋಟಿಸ್ ಜಾರಿ ಮಾಡಿದೆ. ನಗರದಲ್ಲಿ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸುವ ಸಂಬಂಧ ಸರ್ಕಾರ ಹಾಗೂ ಬಿಬಿಎಂಪಿಗೆ ಅಗತ್ಯ ನಿರ್ದೇಶ ನೀಡಲು ಹೈಕೋರ್ಟ್ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿತು.

ಅರ್ಜಿಯನ್ನು 2023ರ ಅ.9ರಂದು ವಿಚಾರಣೆ ನಡೆಸಿದಾಗ, ಅಕ್ರಮ ಕಟ್ಟಡಗಳನ್ನು ಗುರುತಿಸಿ ಹಾಗೂ ತೆರವು ಕಾರ್ಯಾಚರಣೆ ಕೈಗೊಳ್ಳಲು ಎಂಜಿನಿಯರ್ ಸೇರಿದಂತೆ ಇತರೆ ಸಿಬ್ಬಂದಿ ಅಗತ್ಯವಾಗಿದೆ. 100 ಸಹಾಯಕ ಸಿವಿಲ್ ಎಂಜಿನಿಯರ್ ಹುದ್ದೆ ಭರ್ತಿ ಮಾಡುವಂತೆ ಕೆಪಿಎಸ್‌ಸಿ ಕಾರ್ಯದರ್ಶಿಗೆ ಬಿಬಿಎಂಪಿ ಪತ್ರ ಬರೆದಿತ್ತು ಎಂಬ ವಿಚಾರವನ್ನು ಗಮನಿಸಿತ್ತು. ಅದರ ಆಧಾರದ ಮೇಲೆ ಎಂಜಿನಿಯರಿಂಗ್ ಹುದ್ದೆಗಳ ನೇಮಕ ಪ್ರಕ್ರಿಯೆಯನ್ನು ಆರು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಬಿಬಿಬಿಎಂಪಿ ಹಾಗೂ ಕೆಪಿಎಸ್‌ಸಿಗೆ ನಿರ್ದೇಶಿಸಿತ್ತು.

ಇದನ್ನೂ ಓದಿ: ಬಿಇ ಆಗಿದೆಯಾ?: 327 ಸಹಾಯಕ ಇಂಜಿನಿಯರ್​, ಸಹಾಯಕ ನಿರ್ದೇಶಕರ ಹುದ್ದೆಗೆ ಅಧಿಸೂಚನೆ - ಬೇಗನೇ ಅರ್ಜಿ ಹಾಕಿ

ಬುಧವಾರ ಅರ್ಜಿ ವಿಚಾರಣೆಗೆ ಬಂದ ಪ್ರಕರಣದಲ್ಲಿ ಅಮೈಕಾಸ್ ಕ್ಯೂರಿ ಆಗಿರುವ ಹಿರಿಯ ವಕೀಲ ಪ್ರಮೋದ್ ಎನ್.ಕಟಾವಿ, ಕಾಲಮಿತಿಯೊಳಗೆ ಎಂಜಿನಿಯರ್ ಹುದ್ದೆ ಭರ್ತಿ ಮಾಡುವಂತೆ ಹೈಕೋರ್ಟ್ ನಿರ್ದೇಶಿಸಿತ್ತು. ಆದರೆ, ಬಿಬಿಎಂಪಿ ನೇಮಕಾತಿ ಮಾಡಿದೆಯೋ ಅಥವಾ ಇಲ್ಲವೋ ಎಂಬ ಅಂಶದ ಕುರಿತು ಸರಿಯಾದ ಮಾಹಿತಿ ಲಭ್ಯವಿಲ್ಲ ಎಂದು ತಿಳಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ಬಿಬಿಎಂಪಿ ಪರ ವಕೀಲರು, 92 ಸಿವಿಲ್ ಎಂಜಿನಿಯರ್ ಹುದ್ದೆಗಳ ಭರ್ತಿ ಮಾಡಲು ಕೆಪಿಎಸ್‌ಸಿಗೆ ಬಿಬಿಎಂಪಿ ಕೋರಿದೆ. ಕೆಪಿಎಸ್‌ಸಿಗೆ ನೇಮಕಕ್ಕೆ ಅರ್ಜಿ ಆಹ್ವಾನಿಸಿ 2024ರ ಮಾ.13ರಂದು ಅಧಿಸೂಚನೆ ಸಹ ಹೊರಡಿಸಿದೆ. ಅಧಿಸೂಚನೆಯನ್ನು ಮುಂದಿನ ವಿಚಾರಣೆ ವೇಳೆ ಸಲ್ಲಿಸಲಾಗುವುದು ಎಂದು ನೀಡಬೇಕು ಎಂದು ಕೋರಿದರು.

ಇದನ್ನೂ ಓದಿ:KPSC ಕೆಪಿಎಸ್​ಸಿ ನೇಮಕಾತಿ: ಭೂ ಮಾಪಕರ ಹುದ್ದೆಗೆ ಅರ್ಜಿ ಸ್ವೀಕಾರ ಆರಂಭ

ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಮಧ್ಯಪ್ರವೇಶಿಸಿ, ಎಂಜಿನಿಯರ್ ಹುದ್ದೆಗಳ ನೇಮಕಾತಿಗೆ ಸೂಚಿಸಿ 2023ರ ಅ.9ರಂದು ಹೈಕೋರ್ಟ್ ಗಂಭೀರ ಆದೇಶ ಮಾಡಿದೆ. ಆದರೆ, ಬಿಬಿಎಂಪಿ ಬಳಿ ಈಗ ನೋಟಿಫಿಕೇಷನ್ ಇಲ್ಲ ಎಂದು ಹೇಳುತ್ತಿದ್ದೀರಿ. ನೋಟಿಫಿಕೇಷನ್ ಸೇರಿದಂತೆ ಎಲ್ಲಾ ವಿವರಗಳನ್ನು ಕೋರ್ಟ್‌ಗೆ ಸಲ್ಲಿಸಬೇಕು. ಸಲ್ಲಿಸದೇ ಹೋದರೆ ಕೋರ್ಟ್ ಆದೇಶದ ಮೇಲೆ ಆದೇಶ ಹೊರಡಿಸುತ್ತಾ ಹೋಗುತ್ತಿರುತ್ತದೆ. ಅದರಿಂದ ನ್ಯಾಯಾಲಯದ ಸಮಯ ವ್ಯರ್ಥವಾಗುತ್ತದೆ ಎಂದು ಕಟುವಾಗಿ ನುಡಿದರು. ಅಲ್ಲದೆ, ಅರ್ಜಿಯಲ್ಲಿ ಕೆಪಿಎಸ್‌ಸಿ ಅನ್ನು ಪ್ರತಿವಾದಿ ಮಾಡಿ, ನೋಟಿಸ್ ಜಾರಿಗೊಳಿಸಿತು. ಹಿಂದಿನ ಆದೇಶ ಪಾಲಿಸುವ ನಿಟ್ಟಿನಲ್ಲಿ ಬಿಬಿಎಂಪಿ ಸಿವಿಲ್ ಎಂಜಿನಿಯರ್ ನೇಮಕಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಬೇಕು ಎಂದು ಕೆಪಿಎಸ್‌ಸಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ಇದನ್ನೂ ಓದಿ:ಕೆಪಿಎಸ್​ಸಿ ನೇಮಕಾತಿ: 247 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ABOUT THE AUTHOR

...view details