ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಲೋಕಸಭಾ ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆ ಉಲ್ಲಂಘನೆಗಳ ಮೇಲೆ ನಿಗಾವಹಿಸಿ, ಉಲ್ಲಂಘಿಸಿದ್ದಲ್ಲಿ ಕೂಡಲೇ ದೂರು ದಾಖಲಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಲೋಕಸಭಾ ಚುನಾವಣೆಯ ಸಂಬಂಧ ಪಾಲಿಕೆ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಮನ್ವಯ ಸಭೆಯಲ್ಲಿ ಅವರು ಮಾತನಾಡಿದರು. ನಗರದಲ್ಲಿ ಸ್ಥಾಪಿಸಿರುವ ಚೆಕ್ ಪೋಸ್ಟ್ ಗಳಲ್ಲಿ ಅನುಮಾನಾಸ್ಪದ ವಾಹನಗಳನ್ನು ಪರಿಶೀಲಿಸಬೇಕು. ಯಾವುದೇ ದಾಖಲಾತಿಗಳಿಲ್ಲದೇ ಹಣ ಸಾಗಿಸುವುದು ಅಥವಾ ಇನ್ನಿತರ ವಸ್ತುಗಳನ್ನು ಸಾಗಿಸುತ್ತಿದ್ದರೆ ಅದನ್ನು ವಶಕ್ಕೆ ಪಡೆದು ಕೂಡಲೇ ದೂರು ದಾಖಲಿಸಬೇಕು ಎಂದು ತಿಳಿಸಿದರು.
ಹತ್ತು ಲಕ್ಷಕ್ಕಿಂತ ಹೆಚ್ಚು ಹಣ ಸಿಕ್ಕಿದ್ದಲ್ಲಿ ಕೂಡಲೇ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ಒದಗಿಸಬೇಕು. ವಶಪಡಿಸಿಕೊಂಡಿರುವ ಹಣಕ್ಕೆ ಸಂಬಂಧಪಟ್ಟವರು ಸರಿಯಾದ ದಾಖಲೆಗಳನ್ನು ಸಲ್ಲಿಸಿದಲ್ಲಿ ಹಣವನ್ನು ಜಿಲ್ಲಾಮಟ್ಟದ ದೂರು ಸಮಿತಿಯ ಆದೇಶದ ಮೇರೆಗೆ ಬಿಡುಗಡೆಗೊಳಿಸಬೇಕು ಎಂದು ಹೇಳಿದರು.
ಬೆಂಗಳೂರು ಜಿಲ್ಲೆಯಲ್ಲಿ ಬರುವ 28 ವಿಧಾನಸಭಾ ಕ್ಷೇತ್ರಗಳಿಗೆ ನಿಯೋಜಿಸಿರುವ ಎಫ್ಎಸ್ಟಿ ಹಾಗೂ ಎಸ್ಎಸ್ಟಿ ತಂಡಗಳು ಸಕ್ರಿಯವಾಗಿ ಕೆಲಸ ನಿರ್ವಹಿಸಿ ಆಚಾರ ಸಂಹಿತೆ ಉಲ್ಲಂಘನೆ ಹಾಗೂ ಬೇರೆ ಬೇರೆ ಕಾಯ್ದೆ ಅಡಿ ಚುನಾವಣೆಗೆ ಸಂಬಂಧಿಸಿದಂತೆ ದೂರುಗಳನ್ನು ಆಯಾ ಪೊಲೀಸ್ ಠಾಣೆಗೆ ನೀಡಬೇಕು. ಪೊಲೀಸ್ ಅಧಿಕಾರಿಗಳು ದೂರಿನ ಮೇಲೆ ಪ್ರಥಮ ವರ್ತಮಾನ ವರದಿ (ಎಫ್.ಐ.ಆರ್) ಅಥವಾ ಗಂಭೀರ ಸ್ವರೂಪವಲ್ಲದ ವರದಿ(ಎನ್ಸಿಆರ್) ದಾಖಲಿಸಿ ತುರ್ತು ಕ್ರಮ ಕೈಗೊಳ್ಳಲು ಸೂಚಿಸಿದರು.