ಮಂಡ್ಯ: ಕೆರಗೋಡು ಗ್ರಾಮದ ಧ್ವಜ ವಿವಾದದ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಸಿ.ಟಿ.ರವಿ ಮಾತನಾಡುವಾಗ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂದು ಮಳವಳ್ಳಿ ಶಾಸಕ ಪಿ.ಎಂ ನರೇಂದ್ರಸ್ವಾಮಿ ಆರೋಪಿಸಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಅವರಿಗೆ ದೂರು ಸಲ್ಲಿಸಿದ್ದಾರೆ.
ಮಂಡ್ಯ ತಾಲೂಕು ಕೆರಗೋಡು ಗ್ರಾಮದಲ್ಲಿ ಜಿಲ್ಲಾಡಳಿತ ಹಾರಿಸಿರುವ ರಾಷ್ಟ್ರಧ್ವಜಕ್ಕೆ ಅಗೌರವ ತೋರುವ ರೀತಿಯಲ್ಲಿ ಸಿ ಟಿ ರವಿ ಮಾತನಾಡಿದ್ದಾರೆ. ಇದರಿಂದ ರಾಷ್ಟ್ರ ಮತ್ತು ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ದಾರೆ. ಇವರ ವಿರುದ್ಧ ಸೆಕ್ಷನ್ 51A (a) ಅನ್ವಯ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಶಾಸಕರು ಮನವಿ ಮಾಡಿದ್ದಾರೆ.
ರಾಷ್ಟ್ರ ಮತ್ತು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವುದರಿಂದ ಭಾರತದ ಪ್ರಜೆಯಾಗಿ ದೂರು ಸಲ್ಲಿಸಿದ್ದೇನೆ. ಪೊಲೀಸರು ಸೂಕ್ತ ಕ್ರಮ ವಹಿಸಲು ಮುಂದಾಗಬೇಕು. ರಾಷ್ಟ್ರಧ್ವಜ ಬಗ್ಗೆ ಮಾತನಾಡಿರುವ ಬಿಜೆಪಿ ಪಕ್ಷದ ಸಿ.ಟಿ ರವಿಗೆ ಬುದ್ಧಿ ಭ್ರಮಣೆಯಾಗಿದೆ. ಸಂವಿಧಾನಬದ್ಧವಾಗಿ ಎಲ್ಲರನ್ನೂ ಸಮಾನವಾಗಿ ಕಾಣುತ್ತೇನೆಂದು ಪ್ರಮಾಣವಚನ ಸ್ವೀಕರಿಸಿ ಸಚಿವರಾಗಿದ್ದ ಇವರು ಮಾನಸಿಕವಾಗಿ ವಿಚಲಿತರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದೆ. ಗುಂಡಿಗೆ ಎದೆಯೊಡ್ಡಿ ಪ್ರಾಣತ್ಯಾಗ ಮಾಡಿದ್ದಾರೆ, ಬಿಜೆಪಿಯವರು ಯಾವ ಸ್ವಾತಂತ್ರ್ಯ ಹೋರಾಟ ಮಾಡಿದ್ದಾರೆ. ಹೋರಾಟದಲ್ಲಿ ಎಂದಿಗೂ ಭಾಗಿಯಾಗದ ಇವರು ಬ್ರಿಟಿಷರಿಂದ ಗೌರವ ಧನ ಪಡೆದಿದ್ದಾರೆ, ತೋರಿಕೆಗಾಗಿ ದೇಶ ಭಕ್ತರು ಎಂದು ಕಿಡಿಕಾರಿದರು.
ಬಿಜೆಪಿ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಮೊದಲು ಬೀಜ ಬಿತ್ತಿದ್ದೆ ನರೇಂದ್ರಸ್ವಾಮಿ ಎಂಬುದನ್ನು ಮನವರಿಕೆ ಮಾಡಿಕೊಳ್ಳಲಿ. ಆ ದಿನದಲ್ಲಿ ನನಗೆ ಸಿ.ಟಿ ರವಿ ಯಾವ ರೀತಿ ಗೋಗರೆದಿದ್ದರು ಎಂಬುದನ್ನು ನೆನಪಿಸಿಕೊಳ್ಳಲಿ. ರಾಜ್ಯದಲ್ಲಿ ಎಂದಿಗೂ ಬಹುಮತದಿಂದ ಬಿಜೆಪಿ ಸರ್ಕಾರ ರಚಿಸಿಲ್ಲ, ಬದಲಾಗಿ ಆಪರೇಷನ್ ಕಮಲದ ಮೂಲಕ ಅಧಿಕಾರ ಚುಕ್ಕಾಣಿ ಹಿಡಿದಿದೆ ಎಂಬುದನ್ನು ಅರಿಯಬೇಕು ಎಂದು ತಿರುಗೇಟು ನೀಡಿದರು.