ಬೆಂಗಳೂರು: ಸರ್ಕಾರದ ಅನುದಾನದಲ್ಲಿ ನಿರ್ಮಿಸಲಾದ ಸರ್ಕಾರಿ ಕಟ್ಟಡ ಮತ್ತಿತರ ಸ್ಥಳಗಳಿಗೆ ಜೀವಂತವಾಗಿರುವ ರಾಜಕಾರಣಿಗಳ ಹೆಸರಗಳು ನಾಮಕರಣ ಮಾಡುವುದನ್ನು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿ ಕುರಿತಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಸರ್ಕಾರದ ಅನುದಾನದಲ್ಲಿ ಕಟ್ಟಲಾಗಿರುವ ಕಟ್ಟಡಗಳಿಗೆ ಜೀವಂತವಾಗಿರುವ ರಾಜಕಾರಣಿಗಳ ಹೆಸರು ನಾಮಕರಣ ಮಾಡುವುದನ್ನು ಆಕ್ಷೇಪಿಸಿ ದಾವಣಗೆರೆ ನಿವಾಸಿ ವಕೀಲ ಎ.ಸಿ. ರಾಘವೇಂದ್ರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ಅಲ್ಲದೇ, ದಾವಣಗೆರೆಯಲ್ಲಿ ಪಾರ್ಕ್, ಬಸ್ ನಿಲ್ದಾಣ, ಜಿ.ಪಂ ಸಭಾಂಗಣ ಮತ್ತಿತರ ಸರ್ಕಾರಿ ಕಟ್ಟಡಗಳಿಗೆ ಸ್ಥಳೀಯ ಶಾಸಕರಾದ ಶಾಮನೂರು ಶಿವಶಂಕರಪ್ಪ ಹಾಗೂ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಹೆಸರನ್ನು ನಾಮಕರಣ ಮಾಡಿರುವುದನ್ನು ಅರ್ಜಿಯಲ್ಲಿ ಆಕ್ಷೇಪಿಸಲಾಗಿದ್ದು, ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ಶಾಮನೂರು ಶಿವಶಂಕರಪ್ಪ, ಎಸ್.ಎಸ್. ಮಲ್ಲಿಕಾರ್ಜುನ, ದಾವಣಗೆರೆ ಜಿಲ್ಲಾಧಿಕಾರಿ, ದಾವಣಗೆರೆ ನಗರ ಸಭೆ, ದಾವಣಗೆರೆ ಜಿ.ಪಂಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮೇ 29ಕ್ಕೆ ಮುಂದೂಡಿತು.
ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಸರ್ಕಾರದ ಅನುದಾನಲ್ಲಿ ಕಟ್ಟಲಾದ ಸರ್ಕಾರಿ ಕಟ್ಟಡಗಳಿಗೆ ಜೀವಂತ ರಾಜಕಾರಣಿಗಳ ಹೆಸರು ಇಡಬಾರದು ಎಂದು 2012ರಲ್ಲಿ ಇದೇ ಹೈಕೋರ್ಟ್ ಆದೇಶವೊಂದನ್ನು ನೀಡಿದೆ. ಚನ್ನಗಿರಿ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು ಹೆಸರನ್ನು ತಾಲೂಕು ಕ್ರೀಡಾಂಗಣಕ್ಕೆ ಇಡಲಾಗಿತ್ತು. ಸರ್ಕಾರದ ಅನುದಾನದಲ್ಲಿ ಕಟ್ಟಲಾದ ಆಟದ ಮೈದಾನಕ್ಕೆ ಮಾಡಾಳು ವಿರೂಪಾಕ್ಷಪ್ಪ ಆಟದ ಮೈದಾನ ಎಂದು ನಾಮಕರಣ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು.