ಕರ್ನಾಟಕ

karnataka

'ಸಿದ್ದರಾಮಯ್ಯನವರೇ ಕೇಂದ್ರ ಮತ್ತು ನಿಮ್ಮ ಸಾಲಕ್ಕೂ ಅಜಗಜಾಂತರ ವ್ಯತ್ಯಾಸವಿದೆ': ಆರ್ ಅಶೋಕ್ - R Ashok

By ETV Bharat Karnataka Team

Published : Apr 5, 2024, 8:43 AM IST

ಕೇಂದ್ರ ಸರ್ಕಾರ ಮಾಡಿರುವ ಸಾಲಕ್ಕೂ, ತಾವು ಮಾಡಿರುವ ಸಾಲಕ್ಕೂ ಅಜಗಜಾಂತರ ವ್ಯತ್ಯಾಸ ಇದೆ ಎಂದು ಸಿಎಂ ಸಿದ್ದರಾಮಯ್ಯ ಅವರ ಟ್ವೀಟ್​ಗೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ರೀಟ್ವೀಟ್ ಮಾಡಿದ್ದಾರೆ.

R Ashok
ಆರ್ ಅಶೋಕ್

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರೇ, ನಾನು ತಮ್ಮಂತೆ ಸ್ವಯಂ ಘೋಷಿತ ಆರ್ಥಿಕ ತಜ್ಞನಲ್ಲ. ಆದರೆ ತಮ್ಮಂತೆ ನನಗೊಬ್ಬನಿಗೇ ಎಲ್ಲವೂ ಗೊತ್ತು ಎಂಬ ಅಹಂಕಾರವೂ ಇಲ್ಲ. ಕೇಂದ್ರ ಸರ್ಕಾರ ಮಾಡಿರುವ ಸಾಲಕ್ಕೂ, ತಾವು ಮಾಡಿರುವ ಸಾಲಕ್ಕೂ ಅಜಗಜಾಂತರ ವ್ಯತ್ಯಾಸ ಇದೆ. ನಿಮಗೆ ಅರ್ಥವಾಗುವುದಿದ್ದರೆ ಓದಿಕೊಳ್ಳಿ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಟ್ವೀಟ್ ಮಾಡಿದ್ದಾರೆ.

ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚಿನ ಗಮನ ಹರಿಸಿದ್ದು, 2024ರ ಮಧ್ಯಂತರ ಬಜೆಟ್​ನಲ್ಲಿ ಬಂಡವಾಳ ವೆಚ್ಚವನ್ನು ಸತತ ನಾಲ್ಕನೇ ವರ್ಷವೂ ಶೇ.11.1ರಷ್ಟು ಹೆಚ್ಚಿಸಿದೆ. ಇದರಿಂದ ಬಂಡವಾಳ ವೆಚ್ಚ 11.11 ಲಕ್ಷ ಕೋಟಿ ರೂ.ಗೆ ಏರಿಕೆಯಾಗಲಿದೆ. ಇದು ದೇಶದ ಜಿಡಿಪಿಯ ಶೇ.3.4ರಷ್ಟು ಆಗಿದೆ. ಅದೇ ನಿಮ್ಮ ಕಾರ್ಯವೈಖರಿ ನೋಡಿ.

2023-24ರಲ್ಲಿ ತಾವು ಮಂಡಿಸಿದ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂ.. ಅದರಲ್ಲಿ ಬಂಡವಾಳ ವೆಚ್ಚಕ್ಕೆ ತಾವು ಮೀಸಲಿಟ್ಟಿದ್ದು 54,000 ಕೋಟಿ ರೂ.. ಅದೇ 2024-2025ರ ಆರ್ಥಿಕ ಸಾಲಿಗೆ ತಾವು ಮಂಡಿಸಿರುವ ಕರ್ನಾಟಕದ ಬಜೆಟ್ ಗಾತ್ರ 3,71,383 ಕೋಟಿ ರೂ.. ಅಂದರೆ 2023-24 ರಲ್ಲಿ ತಾವು ಮಂಡಿಸಿದ 3.27 ಲಕ್ಷ ಕೋಟಿಗಿಂತ ದೊಡ್ಡದು. ಜೊತೆಗೆ ಕಳೆದ ವರ್ಷಕ್ಕಿಂತ ಸುಮಾರು 25 ಸಾವಿರ ಕೋಟಿ‌ ರೂ. ಹೆಚ್ಚಿನ ಸಾಲ ಕೂಡ ಮಾಡಿದ್ದೀರಿ. ಆದರೆ, ಬಂಡವಾಳ ವೆಚ್ಚಕ್ಕೆ ತಾವು ಮೀಸಲಿಟ್ಟಿದ್ದು ಕೇವಲ 55,000 ಕೋಟಿ ರೂ.. ಅಂದರೆ ಕಳೆದ ವರ್ಷಕ್ಕಿಂತ ಹೆಚ್ಚಾದ ಮೊತ್ತ ಎಷ್ಟು? ಕೇವಲ 1,000 ಕೋಟಿ ರೂಪಾಯಿ. ಅಂದರೆ ಬಂಡವಾಳ ವೆಚ್ಚ ಹೆಚ್ಚಳವಾಗಿದ್ದು ಕೇವಲ ಶೇ.1.85 ಎಂದು ಟೀಕಿಸಿದ್ದಾರೆ.

ಬಜೆಟ್ ಗಾತ್ರ ಹೆಚ್ಚಾದರೂ, ಸಾಲ ಹೆಚ್ಚಾದರೂ, ಬಂಡವಾಳ ವೆಚ್ಚ ಮಾತ್ರ ಯಾಕೆ ಅದೇ ಪ್ರಮಾಣದಲ್ಲಿ ಹೆಚ್ಚಾಗುತ್ತಿಲ್ಲ ಸಿಎಂ ಸಿದ್ದರಾಮಯ್ಯನವರೇ? ಸಾಲದ ದುಡ್ಡೆಲ್ಲಾ ಎಲ್ಲಿ ಹೋಗುತ್ತಿದೆ? ಹೆಚ್ಚಾದ ಬಜೆಟ್ ಗಾತ್ರವೆಲ್ಲಾ ಎಲ್ಲಿ ಹೋಯ್ತು? ನಿಮ್ಮ ಬಳಿ ಇದಕ್ಕೆಲ್ಲಾ ಉತ್ತರ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಮಗು ದತ್ತು ಪಡೆದ ಪ್ರಕರಣ: ಸೋನು ಶ್ರೀನಿವಾಸ್ ಗೌಡಗೆ ಷರತ್ತುಬದ್ಧ ಜಾಮೀನು - Sonu Srinivas Gowda

ಸಿಎಂ ಸಿದ್ದರಾಮಯ್ಯ ಟ್ವೀಟ್: ಇದಕ್ಕೂ ಮುನ್ನ ಟ್ವೀಟ್ ಮಾಡಿದ್ದ ಮುಖ್ಯಮಂತ್ರಿ, ''ಅಶೋಕ್​​ ಅವರೇ, ನಿಮಗೆ ಈ ಆರ್ಥಿಕ ವ್ಯವಹಾರಗಳು ಅರ್ಥವಾಗುವುದಿದ್ದರೆ ಸ್ವಲ್ಪ ಕೇಳಿಸಿಕೊಳ್ಳಿ. ನಮ್ಮ ರಾಜ್ಯ ಸರ್ಕಾರದ ಸಾಲ ಹಣಕಾಸು ಜವಾಬ್ದಾರಿ ಮತ್ತು ಬಜೆಟ್ ನಿರ್ವಹಣಾ ಕಾಯ್ದೆ (ಎಫ್ ಆರ್ ಬಿ)ಯ ವ್ಯಾಪ್ತಿಯಲ್ಲಿಯೇ ಇದೆ. ನಮ್ಮ ಒಟ್ಟು ಸಾಲ ಒಂದು ಲಕ್ಷ ಕೋಟಿಯನ್ನು ಮೀರಿದ್ದರೂ ಅದು ನಮ್ಮ ಜಿಎಸ್‌ಡಿಪಿಯ ಶೇಕಡ 25ರ ಮಿತಿಯೊಳಗೆಯೇ ಇದೆ. ನಮ್ಮ ಹಣಕಾಸು ಕೊರತೆ ಕೂಡಾ ಜಿಎಸ್‌ಡಿಪಿಯ ಶೇಕಡಾ ಮೂರನ್ನು ಮೀರಿಲ್ಲ. ಕೇಂದ್ರದ ಬಿಜೆಪಿ ಆಡಳಿತದಲ್ಲಿ ಸರ್ಕಾರದ ಸಾಲ ಮಾತ್ರ ಹೆಚ್ಚಾಗುತ್ತಿಲ್ಲ. ಅವಶ್ಯಕ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ವೈಯಕ್ತಿಕ ಸಾಲ ಕೂಡಾ ಹೆಚ್ಚಾಗುತ್ತಿದ್ದರೆ, ನಿರುದ್ಯೋಗದಿಂದಾಗಿ ಕುಟುಂಬದ ಆದಾಯ ಕುಸಿಯತ್ತಿದೆ. ಹಾಗಿದ್ದರೆ ಮೋದಿ ಸರ್ಕಾರದ ಸಾಲದ ಹಣ ಎಲ್ಲಿ ಸೋರಿ ಹೋಗುತ್ತಿದೆ?'' ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ:ಅಂತಾರಾಷ್ಟ್ರೀಯ ಆತ್ಮಸಾಕ್ಷಿ ದಿನ 2024: ಶಾಂತಿ ಉತ್ತೇಜಿಸುವುದೇ ಈ ದಿನದ ಪ್ರಮುಖ ಗುರಿ - Conscience Day

ABOUT THE AUTHOR

...view details