ಬೆಂಗಳೂರು:''ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಬಾಯಲ್ಲಿ ಸುಳ್ಳುಗಳನ್ನ ಹೇಳಿಸಿದ್ದಾರೆ. ಬಿಜೆಪಿ ಸರ್ಕಾರ ಜಾರಿಗೆ ತಂದ ಯೋಜನೆಗಳನ್ನು ನಾವೇ ತಂದಿದ್ದೇವೆ, ನಾವೇ ಮಾಡಿದ್ದು ಎಂದು ಬೆನ್ನು ತಟ್ಟಿಕೊಂಡಿದ್ದಾರೆ'' ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
ರಾಜ್ಯಪಾಲರ ಭಾಷಣದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಕೋಮುವಾದಕ್ಕೆ ಉತ್ತೇಜನ ನೀಡುವ ಕೆಲಸ ಆಗಿದೆ. ಐದನೇ ಗ್ಯಾರಂಟಿ ಪ್ರಾರಂಭ ಆಗಿಲ್ಲ. ಒಬ್ಬ ನಿರುದ್ಯೋಗಿ ಯುವಕನಿಗೆ ಒಂದು ರೂಪಾಯಿ ಸಿಕ್ಕಿಲ್ಲ. ಬರದ ವಿಚಾರದಲ್ಲಿ ಎರಡು ಸಾವಿರ ಹಣ ಕೊಟ್ಟಿಲ್ಲ. ಕಂತು ಕಂತು ಆಗಿ ಹೋಗಿದೆ ಅಂತಾರೆ, ಆದರೆ ರೈತರಿಗೆ ಮೋಸ ಮಾಡ್ತಾ ಇದ್ದಾರೆ'' ಎಂದು ಗಂಭೀರವಾಗಿ ಆರೋಪ ಮಾಡಿದರು.
''ಬರ ಪರಿಸ್ಥಿತಿ ಇದ್ದು, ರೈತರಿಗೆ 25 ಸಾವಿರ ಪರಿಹಾರ ನೀಡಬೇಕು ಅಂತ ಒತ್ತಾಯ ಮಾಡಿದ್ದೆವು, ಕೇಂದ್ರದ ಮೇಲೆ ಗೂಬೆ ಕುರಿಸುವ ಕೆಲಸ ಆಗಿದೆ. ಅಭಿವೃದ್ಧಿ ಕುಂಠಿತ ಆಗಿದೆ. ಶಿವಮೊಗ್ಗ ಏರ್ಪೋರ್ಟ್ ಮುಗಿದಿದ್ದು ನಮ್ಮ ಕಾಲದಲ್ಲಿ. ಆದರೆ, ಅದು ನಮ್ಮದು ಅಂತ ಹೇಳಿದ್ದಾರೆ. ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರ ಹಣ ನೀಡೋದು ಅದು ನಮ್ಮದೇ ಅಂತ ಹೇಳಿದ್ದಾರೆ. ಎಸಿ, ಎಸ್ಟಿ ಹಣ ಬೇರೆ ಯೋಜನೆಗಳಿಗೆ ಇಟ್ಟು, ಹಣ ಬೇರೆ ಕಡೆ ಬಳಸುವ ಮೂಲಕ ಎಸಿ, ಎಸ್ಟಿಗಳಿಗೆ ಮೋಸ ಮಾಡಿದ್ದಾರೆ. ಕಳೆದು ಎಂಟು ತಿಂಗಳಲ್ಲಿ ಒಂದು ರೂಪಾಯಿ ಅಭಿವೃದ್ಧಿಗೆ ಕೊಟ್ಟಿಲ್ಲ. ರಾಜ್ಯಪಾಲರಿಗೆ ಅವಮಾನ ಮಾಡಿದ್ದಾರೆ, ಈ ಸರ್ಕಾರದಿಂದ ಒಂದೇ ಒಂದು ಕಾಮಗಾರಿ ಆಗಿಲ್ಲ ಎಂದು ಕಾಂಗ್ರೆಸ್ ಶಾಸಕರೇ ಹೇಳಿದ್ದಾರೆ'' ಎಂದು ಟೀಕಿಸಿದರು.
''ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರೇ ಈ ಸರ್ಕಾರದ ಮೇಲೆ ಕಮಿಷನ್ ಆರೋಪ ಮಾಡಿದ್ದಾರೆ. ಶೇ 40ರಷ್ಟು ಲೂಟಿ ಸರ್ಕಾರ, ಕಮಿಷನ್ ಸರ್ಕಾರ ಎಂದಿದ್ದಾರೆ. ಆದರೂ ರಾಜ್ಯಪಾಲರ ಬಾಯಲ್ಲಿ ಸುಳ್ಳುಗಳನ್ನ ಹೇಳಿಸಿದ್ದಾರೆ'' ಎಂದು ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ನಡೆಸಿದರು.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ:ರಾಜ್ಯಪಾಲರ ಭಾಷಣ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ''ರಾಜ್ಯಪಾಲರ ಭಾಷಣ ಸಪ್ಪೆ ನಿರಾಸೆಯ ಭಾಷಣವಾಗಿದೆ. ಇಂತಹ ಭಾಷಣ ಯಾವತ್ತೂ ಕೇಳಿರಲಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿರುವ ಜನ ವಿರೋಧಿ ಸರ್ಕಾರ ಇರುವುದನ್ನು ತೋರಿಸುತ್ತದೆ. ಯಾವುದೇ ವಿಚಾರದಲ್ಲಿ ಸಾಧನೆ ಮಾಡಿರುವುದು ಕಾಣಿಸುವುದಿಲ್ಲ. ನಾವು ಮಾಡಿರುವ ಯೋಜನೆಗಳನ್ನು ತಮ್ಮ ಸಾಧನೆ ಎಂದು ಹೇಳಿಕೊಂಡಿದ್ದಾರೆ. ಜಲಜೀವನ್ ಮಿಷನ್, ಮನೆ ನಿರ್ಮಾಣ ಎಲ್ಲವೂ ನಮ್ಮ ಯೋಜನೆಗಳು, ಹುಬ್ಬಳ್ಳಿಯಲ್ಲಿ ಜಯದೇವ ಆಸ್ಪತ್ರೆ ನಮ್ಮ ಅವಧಿಯಲ್ಲಿ ಆರಂಭಿಸಿದ್ದೇವೆ. ಅದನ್ನು ತಮ್ಮ ಸಾಧನೆ ಎಂದು ಬಿಂಬಿಸಿಕೊಂಡಿದ್ದಾರೆ. ನೀರಾವರಿಗೆ 10 ಸಾವಿರ ಕೋಟಿ ರೂ. ಖರ್ಚು ಮಾಡಿದ್ದೇವೆ ಎಂದು ಹೇಳಿದ್ದಾರೆ. ಯಾವ ಯೋಜನೆಗೆ ಎಷ್ಟು ಖರ್ಚು ಮಾಡಿದ್ದಾರೆ ಎಂದು ದಾಖಲೆ ನೀಡಲಿ'' ಎಂದು ಗರಂ ಆದರು.
''ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುವ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಶಾಸಕರು ಕ್ಷೇತ್ರದಲ್ಲಿ ತಿರುಗಾಡದಂತಹ ಪರಿಸ್ಥಿತಿ ಇದೆ. ಅವರನ್ನು ಕೇಳಿದರೆ ಸರ್ಕಾರದ ಸಾಧನೆ ಏನು ಅಂತಾ ಗೊತ್ತಾಗುತ್ತದೆ. ಬರ ಪರಿಹಾರಕ್ಕೆ ಹಣ ಬಿಡುಗಡೆ ಮಾಡಿಲ್ಲ. ಡಿಸಿ ಅಕೌಂಟ್ನಲ್ಲಿ ಹಣ ಇದೆ ಅಂತಾರೆ. ಆದರೆ, ಇದುವರೆಗೂ ಹಣ ಬಿಡುಗಡೆ ಮಾಡಿಲ್ಲ. ರಾಜ್ಯಪಾಲರಿಂದ ಸುಳ್ಳು ಹೇಳಿಸುವ ಕೆಲಸ ಮಾಡಿದ್ದಾರೆ'' ಎಂದು ಆರೋಪಿಸಿದರು.