ಕರ್ನಾಟಕ

karnataka

ಬಿಟ್​ಕಾಯಿನ್ ಪ್ರಕರಣ: ಬಂಧಿತ ಇಬ್ಬರು ಪೊಲೀಸ್ ಇನ್ಸ್‌ಪೆಕ್ಟರ್​ಗಳು 6 ದಿನ ಸಿಐಡಿ ಕಸ್ಟಡಿಗೆ

By ETV Bharat Karnataka Team

Published : Jan 25, 2024, 1:51 PM IST

Updated : Jan 25, 2024, 3:48 PM IST

Bitcoin case: ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಇಬ್ಬರು ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ಬಂಧಿಸಿದೆ. ​

ಬಿಟ್​ಕಾಯಿನ್ ಪ್ರಕರಣ
ಬಿಟ್​ಕಾಯಿನ್ ಪ್ರಕರಣ

ಬೆಂಗಳೂರು :ಬಿಟ್​ಕಾಯಿನ್ ಅಕ್ರಮ ಹಗರಣ ಕುರಿತು ತನಿಖೆ ನಡೆಸುತ್ತಿರುವ ಸಿಐಡಿಯ ವಿಶೇಷ ತನಿಖಾ ತಂಡ (ಎಸ್ಐಟಿ) ಇಬ್ಬರು ಇನ್ಸ್‌ಪೆಕ್ಟರ್​​ಗಳನ್ನ ಬುಧವಾರ ತಡರಾತ್ರಿ ಬಂಧಿಸಿದೆ. ಸಿಸಿಬಿ ಇನ್‌ಸ್ಪೆಕ್ಟ‌ರ್ ಪ್ರಶಾಂತ್ ಬಾಬು ಹಾಗೂ ಸೈಬರ್ ತಜ್ಞ ಸಂತೋಷ್ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು ಇಂದು ಮಧ್ಯಾಹ್ನ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಸದ್ಯ ಅವರನ್ನು ಜ.31ರ ವರೆಗೆ 6 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಬುಧವಾರ ಎಸ್‌ಐಟಿ ಅಧಿಕಾರಿಗಳು ಪ್ರಶಾಂತ್ ಬಾಬು ಹಾಗೂ ಸಂತೋಷ್ ಅವರನ್ನು ವಿಚಾರಣೆಗೆ ಕರೆಸಿದ್ದರು. ರಾತ್ರಿಯವರೆಗೂ ವಿಚಾರಣೆ ನಡೆಸಿದ ಬಳಿಕ ಇಬ್ಬರನ್ನೂ ಬಂಧಿಸಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಬಿಟ್ ಕಾಯಿನ್ ಪ್ರಕರಣದ ತನಿಖೆ ಸಂದರ್ಭದಲ್ಲಿ ಸಾಕ್ಷಿ ನಾಶಪಡಿಸಿದ್ದ ಆರೋಪದಡಿ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಸಿಸಿಬಿಯ ಕೆಲ ಪೊಲೀಸ್ ಅಧಿಕಾರಿಗಳು ಹಾಗೂ ಇತರರ ವಿರುದ್ಧ ಎಫ್‌ಐಆ‌ರ್ ದಾಖಲಾಗಿತ್ತು.

ಪ್ರಕರಣ ಹಿನ್ನೆಲೆ :2020ರಲ್ಲಿ ಕೆಂಪೇಗೌಡ ನಗರ ಪೊಲೀಸರು ಡ್ರಗ್ಸ್ ಪ್ರಕರಣದಲ್ಲಿ ಆರೋಪಿ ಸುಜಯ್ ಎಂಬಾತನನ್ನು ಬಂಧಿಸಿದ್ದರು. ಈ ವೇಳೆ ಡಾರ್ಕ್ ನೆಟ್‌ನಲ್ಲಿ ಬಿಟ್‌ಕಾಯಿನ್ ಮೂಲಕ ಡ್ರಗ್ಸ್ ಖರೀದಿ ಪ್ರಕರಣ ಬೆಳಕಿಗೆ ಬಂದಿತ್ತು. ಪ್ರಕರಣದ ಜಾಡು ಹಿಡಿದು ಸಾಗಿದ ಪೊಲೀಸರು ಶ್ರೀಕೃಷ್ಣ ಆಲಿಯಾಸ್ ಶ್ರೀಕಿ ಎಂಬಾತನನ್ನು ಬಂಧಿಸಿದ್ದರು. ಸರ್ಕಾರಿ ವೆಬ್‌ಸೈಟ್ ಹಾಗು ಆನ್‌ಲೈನ್ ಗೇಮಿಂಗ್ ಆ್ಯಪ್‌ಗಳನ್ನು ಹ್ಯಾಕ್‌ ಮಾಡಿ ಕೋಟ್ಯಂತರ ರೂಪಾಯಿ ಹಣ‌ವನ್ನು ಅಕ್ರಮವಾಗಿ ಸಂಪಾದಿಸಿರುವ ಕುರಿತು ಮಾಹಿತಿ ಹೊರಬಂದಿತ್ತು. ಈ ಬೆನ್ನಲ್ಲೇ ಪ್ರಕರಣವನ್ನು ಆಗಿನ ಸರ್ಕಾರ ಸಿಸಿಬಿಗೆ ಹಸ್ತಾಂತರಿಸಿತ್ತು.

ಸಿಸಿಬಿ ತನಿಖೆಯಲ್ಲಿ ದೊಡ್ಡ ಪ್ರಮಾಣದಲ್ಲಿ ವಂಚನೆ ನಡೆದಿರುವುದು ಬೆಳಕಿಗೆ ಬಂದಿತ್ತು. ಪ್ರಕರಣದಲ್ಲಿ ಹಿಂದಿನ ಸರ್ಕಾರದ ಕೆಲವು ರಾಜಕಾರಣಿಗಳೂ ಶಾಮೀಲಾಗಿದ್ದಾರೆ ಎಂದು ಆಗ ಪ್ರತಿಪಕ್ಷವಾಗಿದ್ದ ಕಾಂಗ್ರೆಸ್ ಗಂಭೀರ ಆರೋಪ ಮಾಡಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಬಿಟ್‌ಕಾಯಿನ್ ಪ್ರಕರಣವನ್ನು ಮರುತನಿಖೆ ನಡೆಸಲು ಕಳೆದ ವರ್ಷ ಜುಲೈನಲ್ಲಿ ಎಸ್ಐಟಿ ರಚಿಸಿದೆ. ಹಿರಿಯ ಐಪಿಎಸ್ ಮನೀಶ್‌ ಕರ್ಬೀಕರ್ ನೇತೃತ್ವದ ತಂಡ ಶ್ರೀಕಿ ಸೇರಿದಂತೆ‌ ಇನ್ನಿತರ ಆರೋಪಿಗಳು ಹಾಗೂ ಆಗ ತನಿಖೆ ನಡೆಸಿದ್ದ ಸಿಸಿಬಿ ಪೊಲೀಸರನ್ನೂ ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿತ್ತು. ಈ ಪ್ರಕರಣದಲ್ಲಿ ಉದ್ದೇಶಪೂರ್ವಕವಾಗಿ ಸಾಕ್ಷ್ಯ ನಾಶಪಡಿಸಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ ತಡರಾತ್ರಿ ಐವರು ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿತ್ತು.

ಇದನ್ನೂ ಓದಿ :ಬಿಟ್ ಕಾಯಿನ್ ಹಗರಣ: ಸಾಕ್ಷ್ಯವಿದ್ದರೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಎಸ್​​ಐಟಿ ಮನವಿ

Last Updated :Jan 25, 2024, 3:48 PM IST

ABOUT THE AUTHOR

...view details