ಕರ್ನಾಟಕ

karnataka

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ವಿರುದ್ಧದ ದೋಷಾರೋಪಣೆಯಲ್ಲಿ ದೋಷಗಳಿವೆ ಎಂದ ವಕೀಲರು

By ETV Bharat Karnataka Team

Published : Feb 13, 2024, 6:58 AM IST

ಕ್ರಿಮಿನಲ್ ಪ್ರಕರಣಗಳ ವಿಲೇವಾರಿ ಶೀಘ್ರ ಮುಗಿಯದೇ ಹೋದರೆ, ಸಮಾಜದಲ್ಲಿ ಯಾರೂ ಸುರಕ್ಷಿತವಾಗಿರಲು ಸಾಧ್ಯವಿಲ್ಲ. ಹೀಗೇ ಆದರೆ ಸಾಮಾನ್ಯರ ಗತಿಯೇನು? ಯೋಗೇಶ್ ಗೌಡ ಕೊಲೆ ಪ್ರಕರಣದ ಸಂಬಂಧ ಶಾಸಕ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಅಭಿಪ್ರಾಯ.

Etv Bharat
Etv Bharat

ಬೆಂಗಳೂರು: ಧಾರವಾಡದ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೇಶ್‌ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗದಿಪಡಿಸಿರುವಲ್ಲಿ ಹಲವು ತಪ್ಪುಗಳನ್ನು ಮಾಡಿದೆ ಎಂದು ಕಾಂಗ್ರೆಸ್‌ ಪಕ್ಷದ ಶಾಸಕ ವಿನಯ ಕುಲಕರ್ಣಿ ಪರ ವಕೀಲರು ಹೈಕೋರ್ಟ್‌ಗೆ ವಿವರಿಸಿದರು.

ತನ್ನ ವಿರುದ್ಧ ಹೊರಿಸಲಾಗಿರುವ ದೋಷಾರೋಪಣೆ ಮತ್ತು ಬೆಂಗಳೂರು ಸಿಟಿ ಸಿವಿಲ್‌ ಕೋರ್ಟ್‌ನ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿರುವ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದು ಕೋರಿ ವಿನಯ ಕುಲಕರ್ಣಿ ಸಲ್ಲಿಸಿರುವ ಅರ್ಜಿ ವಿಚಾರಣೆಯ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್‌ ದೀಕ್ಷಿತ್ ಅವರಿದ್ದ ಪೀಠಕ್ಕೆ ವಕೀಲರು ತಿಳಿಸಿದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ತನಿಖಾಧಿಕಾರಿಗಳು ಸಂಗ್ರಹಿಸಿರುವ ಸಾಕ್ಷ್ಯಗಳಲ್ಲಿ ಭಾರತೀಯ ದಂಡ ಸಂಹಿತೆ ಕಲಂ 201ರ (ಅಪರಾಧ ಪುರಾವೆ ಕಣ್ಮರೆಯಾಗುವಂತೆ ಮಾಡುವುದು ಅಥವಾ ಅಪರಾಧ ತೆರೆಯಲು ತಪ್ಪು ಮಾಹಿತಿ ನೀಡುವುದು) ಅನುಸಾರ ಕೊಲೆಗೆ ಬಳಸಲಾಗಿದೆ ಎಂಬ ಆಯುಧವನ್ನೇ ವಶಪಡಿಸಿಕೊಂಡಿಲ್ಲ. ಅಪರಾಧ ನಡೆದಿದ್ದ ಸ್ಥಳದಲ್ಲಿ ರಕ್ತದ ಕಲೆ, ಚಪ್ಪಲಿ, ಮೆಣಸಿನ ಪುಡಿ, ಚಾಪೆ, ಒಂದು ಸ್ಯಾಮ್‌ಸಂಗ್ ಫೋನ್‌ ಅನ್ನು ಮಹಜರು ಮಾಡಲಾಗಿದೆಯೇ ಹೊರತಾಗಿ ಬೇರಾವುದೇ ಸಾಕ್ಷ್ಯಗಳಿಲ್ಲ. ಹೀಗಾಗಿ, ಅರ್ಜಿದಾರರ ವಿರುದ್ಧ ವಿಚಾರಣಾ ನ್ಯಾಯಾಲಯ ದೋಷಾರೋಪ ಹೊರಿಸಿರುವ ಕ್ರಮ ನ್ಯಾಯಬದ್ಧವಾಗಿಲ್ಲ ಎಂದು ವಿವರಿಸಿದರು.

ಇದನ್ನೂ ಓದಿ:ಬೆಂಗಳೂರಲ್ಲಿ ಎಲ್​ಇಡಿ ಡಿಜಿಟಲ್​ ಜಾಹೀರಾತು ಪ್ರಶ್ನಿಸಿ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, 'ಆರೋಪಿಯ ಹಕ್ಕುಗಳು ಬಹಳ ಮೌಲ್ಯಯುತವಾದವು ಎಂಬುದೇನೊ ಸರಿ. ಆದರೆ, ಕ್ರಿಮಿನಲ್ ಪ್ರಕರಣಗಳ ವಿಲೇವಾರಿ ಶೀಘ್ರ ಮುಗಿಯದೇ ಹೋದರೆ, ಸಮಾಜದಲ್ಲಿ ಯಾರೂ ಸುರಕ್ಷಿತವಾಗಿರಲು ಸಾಧ್ಯವಿಲ್ಲ. ಹೀಗೇ ಆದರೆ ಸಾಮಾನ್ಯರ ಗತಿಯೇನು? ಒಳ್ಳೆಯ ಸಮಾಜ ನಿರ್ಮಾಣವಾಗಬೇಕು ಎಂದಾಗ ಎಲ್ಲಿಂದಲಾದರೂ ಅದನ್ನು ಸರಿಪಡಿಸುವ ಅದರಲ್ಲೂ, ನ್ಯಾಯಾಂಗದ ಪಾತ್ರ ಹಿರಿದಲ್ಲವೇ? ಎಂದು ಪ್ರಶ್ನಿಸಿದರು. ಶೀಘ್ರವೇ ಈ ಪ್ರಕರಣವನ್ನು ಆದಷ್ಟು ಬೇಗ ಇತ್ಯರ್ಥಗೊಳಿಸುತ್ತೇನೆ' ಎಂದರು. ನಾಗೇಶ್‌ ಅವರು ತಮ್ಮ ವಾದ ಮುಂದುವರಿಸಲು ಮತ್ತಷ್ಟು ಸಮಯ ಕೋರಿದ ಕಾರಣ ಎಂದು ವಿಚಾರಣೆಯನ್ನು ಇದೇ 19ಕ್ಕೆ ಮುಂದೂಡಿದರು.

ಪ್ರಕರಣದ ಹಿನ್ನೆಲೆ ಏನು?ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್‌ 15ರಂದು ಯೋಗೇಶ್‌ಗೌಡ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಸಿಸಿಹೆಚ್‌ – 82ರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಟ್ಟು 21 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಪಡಿಸಿ 2024ರ ಜನವರಿ 29ರಿಂದ ಫೆಬ್ರುವರಿ 1ರವರೆಗೆ ನಿಯಮಿತವಾಗಿ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಆದೇಶಿಸಿತ್ತು.

ಈಗ ಪ್ರಕರಣದ ಆರೋಪಿಯೂ ಆದ ವಿನಯ ಕುಲಕರ್ಣಿ ಅವರು ದೋಷಾರೋಪ ನಿಗದಿ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಇದಕ್ಕೂ ಮುನ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 2020ರ ನವೆಂಬರ್‌ನಲ್ಲಿ ವಿನಯ ಕುಲಕರ್ಣಿ ಅವರನ್ನು ಬಂಧಿಸಿ, ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಒಂಬತ್ತು ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು. ಈ ಸಂಬಂಧ ವಿಚಾರಣಾ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಕೇರಳ ಸಿಎಂ ಮಗಳು ನಿರ್ದೇಶಕರಾಗಿರುವ ಕಂಪೆನಿ ವಿರುದ್ಧ ಎಸ್‌ಎಫ್‌ಐಒ ತನಿಖೆ: ಕಠಿಣ ಕ್ರಮಕ್ಕೆ ಮುಂದಾಗದಂತೆ ಹೈಕೋರ್ಟ್​ ಸೂಚನೆ

ABOUT THE AUTHOR

...view details