ETV Bharat / bharat

ವಿಧಾನಸಭೆ ಚುನಾವಣೆ ಫಲಿತಾಂಶ: ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಸಂಜೆ ಪ್ರಧಾನಿ ಮೋದಿ ಭಾಷಣ

author img

By ETV Bharat Karnataka Team

Published : Dec 3, 2023, 3:04 PM IST

Updated : Dec 3, 2023, 3:36 PM IST

Prime Minister Narendra Modi
Prime Minister Narendra Modi

Assembly polls: ವಿಧಾನಸಭೆ ಚುನಾವಣೆಯ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸುವ ಸಾಧ್ಯತೆ ಇರುವುದರಿಂದ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಂಜೆ ನವದೆಹಲಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಮೂರರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಸಮೀಕ್ಷೆಗಳನ್ನು ಮೀರಿ ಗೆಲುವು ಸಾಧಿಸುವ ಸಾಧ್ಯತೆ ಇರುವುದರಿಂದ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಂಜೆ ಇಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇಲ್ಲಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮೋದಿ ಮಾತನಾಡುವ ಸಾಧ್ಯತೆ ಇದೆ. ಚುನಾವಣಾ ಆಯೋಗ ಹೊರಡಿಸಿದ ಟ್ರೆಂಡ್‌ಗಳ ಪ್ರಕಾರ, ಮಧ್ಯಪ್ರದೇಶದ 230 ಸ್ಥಾನಗಳಲ್ಲಿ 155 ಮತ್ತು ಛತ್ತೀಸ್‌ಗಢದ 90 ಸ್ಥಾನಗಳ ಪೈಕಿ 57ರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ರಾಜಸ್ಥಾನದಲ್ಲಿ 199 ಸ್ಥಾನಗಳಲ್ಲಿ ಬಿಜೆಪಿ 111 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಅಲ್ಲದೇ ಈ ಮೂರು ರಾಜ್ಯದಲ್ಲಿ ಬಿಜೆಪಿ ಮ್ಯಾಜಿಕ್​ ಸಂಖ್ಯೆಯನ್ನು ಮೀರಿ ಕ್ಷೇತ್ರಗಳನ್ನು ಪಡೆದುಕೊಂಡಿದೆ.

ಮಧ್ಯಪ್ರದೇಶದಲ್ಲಿ 116 ಮ್ಯಾಜಿಕ್​ ಸಂಖ್ಯೆ ಆಗಿದ್ದರೆ, ಅಲ್ಲಿ 166 ಸ್ಥಾನಗಳಲ್ಲಿ ಭಾರತೀಯ ಜನತಾ ಪಕ್ಷ ಮುನ್ನಡೆ ಸಾಧಿಸಿದೆ. ರಾಜಸ್ಥಾನದಲ್ಲಿ 100 ಮ್ಯಾಜಿಕ್​ ಸಂಖ್ಯೆ ಆಗಿದ್ದು, ಬಿಜೆಪಿ 111 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಹಾಗೇ ಛತ್ತೀಸ್‌ಗಢದಲ್ಲಿ 46 ಮ್ಯಾಜಿಕ್​ ಸಂಖ್ಯೆ ಆಗಿದ್ದು, ಅದರಲ್ಲಿ ಬಿಜೆಪಿ 57 ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದೆ. ಹೀಗಾಗಿ ಮೂರು ರಾಜ್ಯದಲ್ಲಿ ಸಂಪೂರ್ಣ ಬಹುಮತದಿಂದ ಬಿಜೆಪಿ ಸರ್ಕಾರ ರಚಿಸುವ ಸಾಧ್ಯತೆ ಹೆಚ್ಚಾಗಿದೆ.

ತೆಲಂಗಾಣದಲ್ಲಿ ಕಾಂಗ್ರೆಸ್ 65 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ ತೆಲಂಗಾಣದಲ್ಲಿ ಕಳೆದ ಚುನಾವಣೆಯಲ್ಲಿ ಕೇಲವ 1 ಕ್ಷೇತ್ರವನ್ನು ಗೆದ್ದುಕೊಂಡಿತ್ತು. ಆದರೆ ಈ ಬಾರಿ 8 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಹೆಚ್ಚು ಕಡಿಮೆ ಈ ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಕ್ಷ ಗೆಲುವು ಸಾಧಿಸುವ ಸಾಧ್ಯತೆಯೂ ಇದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಚುನಾವಣೆ ನಡೆದ ಎಲ್ಲ ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿತ್ತು. ರಾಜಸ್ಥಾನದಲ್ಲಿ 80ಕ್ಕಿಂತ ಕಡಿಮೆ ಸ್ಥಾನಗಳನ್ನು ಪಡೆದು ಅಧಿಕಾರ ವಂಚಿತವಾಗಿತ್ತು. ಇನ್ನು ಮಧ್ಯಪ್ರದೇಶದಲ್ಲಿ ಕಳೆದ ಬಾರಿ 109 ಸ್ಥಾನಕ್ಕೆ ಕುಸಿದು ಆರಂಭಿಕ ಹಂತದಲ್ಲಿ ಅಧಿಕಾರ ವಂಚಿತವಾಗಿತ್ತು. ಆದರೆ ಕಾಂಗ್ರೆಸ್​ ಜ್ಯೋತಿರಾದಿತ್ಯ ಸಿಂದಿಯಾ ಮತ್ತು ಬೆಂಬಲಿಗರು ಬಿಜೆಪಿಗೆ ಬಂದಿದ್ದರಿಂದ ಶಿವರಾಜ್​ ಸಿಂಗ್​ ಚೌಹಾಣ್​ ಮತ್ತೆ ಸಿಎಂ ಆಗಿದ್ದರು. ಕಳೆದ ಬಾರಿ ಛತ್ತೀಸ್​ಗಢದಲ್ಲಿ ಕಾಂಗ್ರೆಸ್​ ಭರ್ಜರಿ ಜಯ ಸಾಧಿಸಿತ್ತು. ಆದ್ರೆ ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿದೆ. ಈ ಬಾರಿ ಬಿಜೆಪಿ ಗೆಲುವಿನ ಪತಾಕೆ ಹಾರಿಸುವಲ್ಲಿ ಯಶಸ್ವಿ ಆಗಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ ಫಲಿತಾಂಶ ಪ್ರಭಾವ ಬೀರಲಿದೆ ಎಂದು ಬಿಂಬಿಸಲಾಗ್ತಿದೆ.

ಇದನ್ನೂ ಓದಿ: ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಬಿಜೆಪಿ ಮುನ್ನಡೆ: ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸಂಭ್ರಮಾಚರಣೆ

Last Updated :Dec 3, 2023, 3:36 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.