ETV Bharat / bharat

ಆರ್ಟಿಕಲ್​ 370 ರದ್ದತಿ ಪ್ರಶ್ನಿಸಿದ ಅರ್ಜಿಗಳ ವಿಚಾರಣೆ : ನಾಳೆ ಸುಪ್ರೀಂನಲ್ಲಿ ಮಹತ್ವದ​ ತೀರ್ಪು

author img

By ETV Bharat Karnataka Team

Published : Dec 10, 2023, 9:47 PM IST

azad-hopeful-as-sc-set-to-pronounce-verdict-on-monday-on-pleas-challenging-article-370-abrogation
ಆರ್ಟಿಕಲ್​ 370 ರದ್ದತಿ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ : ನಾಳೆ ಸುಪ್ರೀಂಕೋರ್ಟ್​ ತೀರ್ಪು

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್​ ಸೋಮವಾರ ತನ್ನ ತೀರ್ಪನ್ನು ಪ್ರಕಟಿಸಲಿದೆ.

ನವದೆಹಲಿ : ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನದ ರದ್ದತಿ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್​ ಸೋಮವಾರ ತನ್ನ ತೀರ್ಪನ್ನು ಪ್ರಕಟಿಸಲಿದೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್​ ಅವರ ನೇತೃತ್ವದ ನ್ಯಾ. ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿ ಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ನ್ಯಾಯಮೂರ್ತಿಗಳ ಸಂವಿಧಾನ ಪೀಠವು ತೀರ್ಪು ಪ್ರಕಟಿಸಲಿದೆ.

2019ರ ಆಗಸ್ಟ್​ 5ರಂದು ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿತ್ತು. ಬಳಿಕ ಈ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ವಿಂಗಡನೆ ಮಾಡಿತ್ತು. ವಿಶೇಷ ಸ್ಥಾನಮಾನ ರದ್ದತಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯವು ಸೋಮವಾರಕ್ಕೆ ತೀರ್ಪನ್ನು ಕಾಯ್ದಿರಿಸಿತ್ತು.

ಇದಕ್ಕೂ ಮುನ್ನ, 16 ದಿನಗಳ ವಿಚಾರಣೆ ಬಳಿಕ ಸುಪ್ರೀಂ ಕೋರ್ಟ್​ ಸೆಪ್ಟೆಂಬರ್​ 5ಕ್ಕೆ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ವಿಚಾರಣೆ ಸಂದರ್ಭ ಕೇಂದ್ರದ ಪರವಾಗಿ, ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹಿರಿಯ ವಕೀಲರಾದ ಹರೀಶ್ ಸಾಳ್ವೆ, ರಾಕೇಶ್ ದ್ವಿವೇದಿ, ವಿ ಗಿರಿ ಹಾಗೂ ಇತರರು ಆರ್ಟಿಕಲ್​ 370 ರದ್ದತಿಯನ್ನು ಸಮರ್ಥಿಸಿಕೊಂಡಿದ್ದರು. ಇನ್ನೊಂದೆಡೆ ಅರ್ಜಿದಾರರ ಪರವಾಗಿ ಕಪಿಲ್ ಸಿಬಲ್, ಗೋಪಾಲ್ ಸುಬ್ರಮಣ್ಯಂ, ರಾಜೀವ್ ಧವನ್, ಜಾಫರ್ ಶಾ ಮತ್ತು ದುಷ್ಯಂತ್ ದವೆ ಸೇರಿದಂತೆ ಹಲವು ಹಿರಿಯ ವಕೀಲರು ವಾದ ಮಂಡಿಸಿದ್ದರು. ಈ ವೇಳೆ 370 ನೇ ವಿಧಿ ರದ್ದತಿ ಮತ್ತು ಜಮ್ಮು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿರುವುದಕ್ಕೆ ಅರ್ಜಿದಾರರ ಪರ ವಕೀಲರು ವಿರೋಧ ವ್ಯಕ್ತಪಡಿಸಿದ್ದರು.

ಬಳಿಕ ಆಗಸ್ಟ್​ 2ರಂದು ಸುಪ್ರೀಂ ಕೋರ್ಟ್​ನಲ್ಲಿ ಆರ್ಟಿಕಲ್​ 370 ರದ್ದತಿ ಮತ್ತು "ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ"ಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಪ್ರಾರಂಭವಾಯಿತು. ವಿಚಾರಣೆ ವೇಳೆ ಸಂವಿಧಾನದಲ್ಲಿ ಆರ್ಟಿಕಲ್​ 370ಯನ್ನು ತಾತ್ಕಾಲಿಕ ಎಂದು ಉಲ್ಲೇಖಿಸಲಾಗಿದ್ದು, ಇದು ಹೇಗೆ ಶಾಶ್ವತವಾಗುತ್ತದೆ ಎಂದು ಸುಪ್ರೀಂ ಕೋರ್ಟ್​ ಅರ್ಜಿದಾರರ ಪರ ವಕೀಲರಲ್ಲಿ ಪ್ರಶ್ನಿಸಿತ್ತು. ಜೊತೆಗೆ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿರುವಲ್ಲಿ ಯಾವುದೇ "ಸಾಂವಿಧಾನಿಕ ವಂಚನೆ" ನಡೆದಿಲ್ಲ ಎಂದು ಕೇಂದ್ರವು ವಾದಿಸಿತ್ತು.

ಜಮ್ಮು & ಕಾಶ್ಮೀರದ ಜನರ ಪರವಾಗಿ ತೀರ್ಪು ಬರುತ್ತದೆ ಎಂದು ಭಾವಿಸುತ್ತೇನೆ- ಆಜಾದ್​ : ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ತೀರ್ಪು ಜಮ್ಮು ಮತ್ತು ಕಾಶ್ಮೀರದ ಜನರ ಪರವಾಗಿ ಬರುತ್ತದೆ ಎಂದು ಭಾವಿಸುತ್ತೇನೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್​ ಹೇಳಿದ್ದಾರೆ. ಜಮ್ಮು ಕಾಶ್ಮೀರದ ಜನರಿಗೆ ಆರ್ಟಿಕಲ್​ 370 ಮತ್ತು 35ಎಯನ್ನು ಹಿಂತಿರುಗಿಸಲು ಸುಪ್ರೀಂ ಕೋರ್ಟ್​ ಮತ್ತು ಸಂಸತ್ತಿನಿಂದ ಮಾತ್ರ ಸಾಧ್ಯ. ಸುಪ್ರೀಂ ಕೋರ್ಟ್​ ಪಕ್ಷಾತೀತವಾಗಿದ್ದು, ಅದು ಜಮ್ಮು ಮತ್ತು ಕಾಶ್ಮೀರದ ಜನರ ಪರವಾಗಿ ತೀರ್ಪು ನೀಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

2019ರ ಆಗಸ್ಟ್ 5ರಂದು ಕೇಂದ್ರ ಸರ್ಕಾರವು ಆರ್ಟಿಕಲ್​ 370 ಮತ್ತು 35A ಅನ್ನು ತೆಗೆದು ಹಾಕುವ ಮೂಲಕ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿತ್ತು. ಬಳಿಕ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ ಎಂದು ವಿಭಜಿಸಿ ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತು.

ಇದನ್ನೂ ಓದಿ : ಆರ್ಟಿಕಲ್ 35A ಜನರ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಿದೆ: ಸುಪ್ರೀಂ ಕೋರ್ಟ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.