ETV Bharat / bharat

ಎಸ್‌ಸಿ/ಎಸ್‌ಟಿ ಅಟ್ರಾಸಿಟಿ ಪ್ರಕರಣ ದಾಖಲಿಸಿಕೊಳ್ಳಲು ವಿಳಂಬ ಸಲ್ಲದು : ಎಲ್ಲಾ ರಾಜ್ಯಗಳಿಗೆ ಕೇಂದ್ರದ ಸೂಚನೆ

author img

By

Published : Jun 30, 2022, 4:17 PM IST

ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಸಂಬಂಧ ಇತ್ತೀಚಿಗೆ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಿವೆ
ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಸಂಬಂಧ ಇತ್ತೀಚಿಗೆ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಿವೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿರುದ್ಧದ ಅಪರಾಧಗಳ ಪ್ರಕರಣಗಳಲ್ಲಿ ಎಫ್‌ಐಆರ್ ನೋಂದಣಿಯಲ್ಲಿ ಯಾವುದೇ ವಿಳಂಬ ಮಾಡಬಾರದು ಎಂದು ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ.

ನವದೆಹಲಿ: ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳ ಮೇಲೆ ಇತ್ತೀಚಿಗೆ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಪ್ರಮುಖ ಸೂಚನೆ ನೀಡಿದೆ. ಸಮುದಾಯದ ವಿರುದ್ಧದ ಅಪರಾಧಗಳ ಪ್ರಕರಣಗಳಲ್ಲಿ ಎಫ್‌ಐಆರ್‌ಗಳನ್ನು ದಾಖಲಿಸುವಲ್ಲಿ ಯಾವುದೇ ವಿಳಂಬ ಮಾಡಬಾರದು ಮತ್ತು ಎರಡು ತಿಂಗಳು ಮೀರಿದ ತನಿಖೆಯ ಪ್ರಕರಣಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ.

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಿದ ಸೂಚನೆಯಲ್ಲಿ, ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ಪೊಲೀಸ್ ಅಧಿಕಾರಿಗಳು ಮತ್ತು ಅಧಿಕೃತ ಸಾಕ್ಷಿಗಳು ಸೇರಿದಂತೆ ಎಲ್ಲಾ ಪ್ರಾಸಿಕ್ಯೂಷನ್ ಸಾಕ್ಷಿಗಳ ಸಕಾಲಿಕ ಹಾಜರಾತಿ ಮತ್ತು ರಕ್ಷಣೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಖಚಿತಪಡಿಸಿಕೊಳ್ಳಬೇಕು ಎಂದು ಗೃಹ ಸಚಿವಾಲಯ ಉಲ್ಲೇಖಿಸಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿರುದ್ಧದ ಅಪರಾಧಗಳ ಪ್ರಕರಣಗಳಲ್ಲಿ ಎಫ್‌ಐಆರ್ ನೋಂದಣಿಯಲ್ಲಿ ಯಾವುದೇ ವಿಳಂಬ ಮಾಡಬಾರದು. ಸೂಕ್ತ ಮಟ್ಟದಲ್ಲಿ ಎಫ್‌ಐಆರ್ ದಾಖಲಿಸುವುದರಿಂದ ಹಿಡಿದು ಪ್ರಕರಣದ ವಿಲೇವಾರಿಯವರೆಗೆ ಸಮರ್ಥರಿಂದ ಸೂಕ್ತ ಮೇಲ್ವಿಚಾರಣೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ.

ಆಗಾಗ್ಗೆ ಮೇಲ್ವಿಚಾರಣೆ ಮಾಡಬೇಕು: ತನಿಖೆಯಲ್ಲಿ ವಿಳಂಬವಾದರೆ ಅಂದರೆ ಎಫ್‌ಐಆರ್ ದಾಖಲಿಸಿದ ದಿನಾಂಕದಿಂದ 60 ದಿನಗಳಿಗಿಂತ ಹೆಚ್ಚು ದಿನಗಳಾದರೆ ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಮೇಲ್ವಿಚಾರಣೆ ಮಾಡಬೇಕು ಮತ್ತು ಅಗತ್ಯವಿದ್ದಲ್ಲಿ ತನಿಖೆಯ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ವಿಶೇಷ ಡಿಎಸ್‌ಪಿಗಳನ್ನು ನೇಮಿಸಬೇಕು ಎಂದು ಹೇಳಿದೆ.

ಹೆಚ್ಚಿನ ಸಿಬ್ಬಂದಿ ನಿಯೋಜನೆ: ಸಮುದಾಯಗಳ ಸದಸ್ಯರ ಜೀವ ಮತ್ತು ಆಸ್ತಿಯನ್ನು ಉಳಿಸುವ ಉದ್ದೇಶದಿಂದ ಕೃತ್ಯವನ್ನು ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳಬೇಕು. ಈ ಮೂಲಕ ದೌರ್ಜನ್ಯ ಪೀಡಿತ ಪ್ರದೇಶಗಳನ್ನು ಗುರುತಿಸಬೇಕು. ಹಾಗೆ ಪೊಲೀಸ್ ಮೂಲಸೌಕರ್ಯದೊಂದಿಗೆ ಸಂಪೂರ್ಣ ಸುಸಜ್ಜಿತವಾದ ಸಾಕಷ್ಟು ಸಂಖ್ಯೆಯ ಸಿಬ್ಬಂದಿಯನ್ನು ಅಂತಹ ದುರ್ಬಲ ಪ್ರದೇಶಗಳಲ್ಲಿನ ಪೊಲೀಸ್ ಠಾಣೆಗಳಲ್ಲಿ ನಿಯೋಜಿಸಬೇಕು ಎಂದು ತಿಳಿಸಲಾಗಿದೆ.

ಎಸ್‌ಸಿ ಮತ್ತು ಎಸ್‌ಟಿ ಅಮುದಾಯದವರ ವಿರುದ್ಧದ ಅಪರಾಧಗಳ ವಿಚಾರಣೆಯ ವಿಳಂಬವನ್ನು ಮಾನಿಟರಿಂಗ್ ಕಮಿಟಿಯಲ್ಲಿ ನಿಯಮಿತವಾಗಿ ಪರಿಶೀಲಿಸಬಹುದು. ಹಾಗೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್, ಪೊಲೀಸ್ ಅಧೀಕ್ಷಕರು ಮತ್ತು ಜಿಲ್ಲೆಯ ಪಬ್ಲಿಕ್ ಪ್ರಾಸಿಕ್ಯೂಟರ್ ಭಾಗವಹಿಸುವ ಮಾಸಿಕ ಸಭೆಗಳಲ್ಲಿ ಈ ಬಗ್ಗೆ ಚಿರ್ಚಿಸಬಹುದು ಎಂದು ಹೇಳಿದೆ.

ಎಸ್‌ಸಿ ಮತ್ತು ಎಸ್‌ಟಿಗಳ ವಿರುದ್ಧದ ಅಪರಾಧಗಳ ಪತ್ತೆ ಮತ್ತು ತನಿಖೆಯಲ್ಲಿ ಆಡಳಿತ ಮತ್ತು ಪೊಲೀಸರು ಹೆಚ್ಚು ಪೂರ್ವಭಾವಿ ಪಾತ್ರವನ್ನು ವಹಿಸಬೇಕು, ಯಾವುದೇ ಕೆಟ್ಟ ಸರದಿಯಾಗದಂತೆ ನೋಡಿಕೊಳ್ಳಬೇಕು ಎಂದು ಗೃಹ ಸಚಿವಾಲಯ ಹೇಳಿದೆ.

ತಿದ್ದುಪಡಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 1989 (ಪಿಒಎ ಕಾಯ್ದೆ) ಯನ್ನು ಹೆಚ್ಚು ಪರಿಣಾಮಕಾರಿಯಾಗಿಸಲು 2015 ರಲ್ಲಿ ತಿದ್ದುಪಡಿ ಮಾಡಲಾಗಿದೆ. ಎಸ್‌ಸಿ ಮತ್ತು ಎಸ್‌ಟಿ ಸದಸ್ಯರ ಘನತೆಗೆ ಚ್ಯುತಿ ತರುವಂತಹ ತಲೆಕೂದಲು, ಮೀಸೆ ಕತ್ತರಿಸಿ ಮಾಡುವ ಅಪಮಾನ ಅಥವಾ ಅಂತಹುದೇ ಕೃತ್ಯಗಳಂತಹ ಹೊಸ ಅಪರಾಧಗಳನ್ನು ಸೇರಿಸಲಾಗಿದೆ. ಜೊತೆಗೆ ಶಿಕ್ಷೆಯನ್ನೂ ಹೆಚ್ಚಿಸಲಾಗಿದೆ.

ಇದಾದ ನಂತರ 2018 ರಲ್ಲಿ ಕಾಯ್ದೆಯನ್ನು ಮತ್ತಷ್ಟು ತಿದ್ದುಪಡಿ ಮಾಡಲಾಗಿದೆ. ಸೆಕ್ಷನ್ 18A ಅನ್ನು ಸೇರಿಸಲಾಗಿದ್ದು, ಎಫ್‌ಐಆರ್ ದಾಖಲಿಸುವ ಮೊದಲು ಪ್ರಾಥಮಿಕ ವಿಚಾರಣೆ ನಡೆಸುವುದು ಅಥವಾ ಆರೋಪಿಯನ್ನು ಬಂಧಿಸಲು ಅಧಿಕಾರದ ಅನುಮೋದನೆಯ ಅಗತ್ಯ ಇರುವುದಿಲ್ಲ ಎಂದು ವಿವರಿಸಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ಧಾರವಾಡ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.