ETV Bharat / bharat

ಕಾಂಗ್ರೆಸ್​​ ಸಿಡಬ್ಲ್ಯುಸಿ ಸಭೆ: ಜಾತಿ ಸಮೀಕ್ಷೆ, ಪಂಚ ರಾಜ್ಯಗಳ ಚುನಾವಣಾ ಕಾರ್ಯತಂತ್ರದ ಕುರಿತು ಚರ್ಚೆ

author img

By ETV Bharat Karnataka Team

Published : Oct 9, 2023, 10:26 AM IST

Updated : Oct 9, 2023, 11:15 AM IST

ಇಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆ ಆರಂಭವಾಗಿದೆ. ರಾಷ್ಟ್ರವ್ಯಾಪಿ ಜಾತಿ ಗಣತಿ ಮತ್ತು ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ವಿಧಾನಸಭೆ ಚುನಾವಣೆಗಳ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಸಲಾಗುತ್ತಿದೆ.

CWC meet
ಸಿಡಬ್ಲ್ಯುಸಿ ಸಭೆ

ನವದೆಹಲಿ : ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆ ಜಾತಿ ಆಧಾರಿತ ಲೆಕ್ಕಾಚಾರ ಮತ್ತು ಚುನಾವಣಾ ಕಾರ್ಯತಂತ್ರಗಳು ಸೇರಿದಂತೆ ಇತರ ಕೆಲವು ವಿಷಯಗಳ ಕುರಿತು ಚರ್ಚಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆ ಕರೆಯಲಾಗಿದ್ದು, ಈಗಾಗಲೇ ಸಭೆ ಆರಂಭವಾಗಿದೆ.

ಇಂದು ನಡೆಯಲಿರುವ ಈ ಸಿಡಬ್ಲ್ಯೂಸಿ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ, ಕಾಂಗ್ರೆಸ್ ಆಡಳಿತವಿರುವ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪಕ್ಷದ ಹಲವು ಹಿರಿಯ ನಾಯಕರು ಭಾಗಿಯಾಗಿದ್ದಾರೆ.

ಒಂದೆಡೆ, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದ್ದರೆ, ಇತ್ತ ಮಧ್ಯಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ), ತೆಲಂಗಾಣದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮತ್ತು ಮಿಜೋರಾಂನಲ್ಲಿ ಮಿಜೋ ನ್ಯಾಷನಲ್ ಫ್ರಂಟ್ ಅನ್ನು ಹೊರಹಾಕಲು ಯೋಜನೆ ಸಿದ್ಧಪಡಿಸುತ್ತಿದೆ.

ಈ ಮಧ್ಯೆ, ಆಡಳಿತಾರೂಢ ಬಿಜೆಪಿಯು ಕಾಂಗ್ರೆಸ್ ವಿರುದ್ಧ ತನ್ನ ವಾಗ್ದಾಳಿಯನ್ನು ಮುಂದುವರೆಸಿದೆ. ಕಾಂಗ್ರೆಸ್​ ಪಕ್ಷವು ಎಂದಿಗೂ ಜಾತಿ ಗಣತಿಯ ಪರವಾಗಿಲ್ಲ ಎಂದು ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಸಂಸತ್ತಿನಲ್ಲಿ ಮಂಡಲ್ ಆಯೋಗವನ್ನು ವಿರೋಧಿಸಿದ್ದರು. ಆದರೆ, ಇದೀಗ ಬಿಜೆಪಿಯ ಹಿಂದುತ್ವದ ಅಜೆಂಡಾ ಎದುರಿಸುವ ಸಲುವಾಗಿ ಜಾತಿ ಗಣತಿಗೆ ಒತ್ತಾಯಿಸಲು ಕಾಂಗ್ರೆಸ್ ತಾತ್ವಿಕ ನಿಲುವನ್ನು ತೆಗೆದುಕೊಂಡಿದೆ ಎಂದು ಆರೋಪಿಸಿದೆ.

ಇದನ್ನೂ ಓದಿ : ಈಗಿನ ಸಮೀಕ್ಷೆ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯೋ ಅಥವಾ ಜಾತಿ ಗಣತಿ ಸಮೀಕ್ಷೆಯೋ? ಸ್ಪಷ್ಟಪಡಿಸುವಂತೆ ಮಾಜಿ ಸಿಎಂ ಒತ್ತಾಯ

ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾದ ನಂತರ ಪುನರ್​ ರಚಿಸಲಾದ ಕಾರ್ಯಕಾರಿ ಸಮಿತಿಯ ಎರಡನೇ ಸಭೆ ಇದಾಗಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಕೊನೆಯ ಸಭೆ ಸೆಪ್ಟೆಂಬರ್ 16 ಮತ್ತು 17 ರಂದು ಹೈದರಾಬಾದ್‌ನಲ್ಲಿ ನಡೆದಿತ್ತು. ಈ ಸಂದರ್ಭದಲ್ಲಿ ವಿರೋಧ ಪಕ್ಷದ ಒಕ್ಕೂಟವಾದ 'ಭಾರತೀಯ​ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಮೈತ್ರಿ' (ಇಂಡಿಯಾ) ಕ್ಕೆ ಬೆಂಬಲ ನೀಡಲು ನಿರ್ಧರಿಸಲಾಗಿತ್ತು.

ಇದನ್ನೂ ಓದಿ : ಕಾಂಗ್ರೆಸ್ಸಿನ ತುಷ್ಟೀಕರಣ ರಾಜಕಾರಣದಿಂದ ಒಂದು ಕಣ್ಣಿಗೆ ಸುಣ್ಣ, ಒಂದು ಕಣ್ಣಿಗೆ ಬೆಣ್ಣೆ : ಪ್ರಹ್ಲಾದ್​ ಜೋಶಿ

ಕಳೆದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಅಂಗೀಕರಿಸಿದ ನಿರ್ಣಯದಲ್ಲಿ ಜಾತಿ ಗಣತಿ ಬೇಡಿಕೆಯನ್ನು ಪ್ರಸ್ತಾಪಿಸಲಾಗಿತ್ತು ಮತ್ತು ಪರಿಶಿಷ್ಟ ಜಾತಿಗಳು (ಎಸ್‌ಸಿ), ಪರಿಶಿಷ್ಟ ಪಂಗಡಗಳು (ಎಸ್‌ಟಿ) ಮತ್ತು ಇತರೆ ಹಿಂದುಳಿದ ವರ್ಗ (ಒಬಿಸಿ) ಮೀಸಲಾತಿಯ ಗರಿಷ್ಠ ಮಿತಿ ಹೆಚ್ಚಿಸಬೇಕು ಎಂದು ಹೇಳಲಾಗಿತ್ತು. ಸಭೆಯ ನಂತರ 14 ಅಂಶಗಳ ನಿರ್ಣಯವನ್ನು ಅಂಗೀಕರಿಸಲಾಯಿತು. ಇದರಲ್ಲಿ ಹಣದುಬ್ಬರ, ನಿರುದ್ಯೋಗ, ಆರ್ಥಿಕತೆಯ ಸ್ಥಿತಿ, ರೈತರ ಸಮಸ್ಯೆಗಳು, ಚೀನಾದೊಂದಿಗಿನ ಗಡಿ ವಿವಾದ, ಅದಾನಿ ಗ್ರೂಪ್‌ಗೆ ಸಂಬಂಧಿಸಿದ ವಿಷಯಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಪ್ರಸ್ತಾಪಿಸಲಾಗಿತ್ತು.

ಇದನ್ನೂ ಓದಿ : 2024 ರಲ್ಲಿ ಬಿಜೆಪಿ ಸೋಲಿಸಿ, ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸೋಣ : ಸಿಡಬ್ಲ್ಯೂಸಿ ಸಭೆಯಲ್ಲಿ ಕಾಂಗ್ರೆಸ್​ ನಿರ್ಣಯ

Last Updated :Oct 9, 2023, 11:15 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.