ಅಧಿವೇಶನ ನಡೆಯುತ್ತಿದ್ದಾಗಲೇ ಮಲ್ಲಿಕಾರ್ಜುನ ಖರ್ಗೆಗೆ ಇಡಿ ಸಮನ್ಸ್​: ಸಂಸತ್​​ನಲ್ಲಿ ವಾಗ್ವಾದ

author img

By

Published : Aug 4, 2022, 4:17 PM IST

Kharge

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಇಂದು ವಿಚಾರಣೆಗೆ ಬರುವಂತೆ ಸಮನ್ಸ್ ನೀಡಿದೆ. ಇದೇ ವಿಚಾರವಾಗಿ ಸಂಸತ್​ನಲ್ಲಿ ವಾಗ್ವಾದ ನಡೆಯಿತು.

ನವದೆಹಲಿ: ನ್ಯಾಷನಲ್ ಹೆರಾಲ್ಡ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಈಗಾಗಲೇ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ವಿಚಾರಣೆ ನಡೆಸಿದ್ದು, ಇದರ ಬೆನ್ನಲ್ಲೇ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಸಮನ್ಸ್ ನೀಡಿದೆ. ಇದೇ ವಿಚಾರವಾಗಿ ಸಂಸತ್​​ನಲ್ಲಿ ಖರ್ಗೆ ಹಾಗೂ ಕೇಂದ್ರ ಸಚಿವ ಪಿಯೂಷ್ ಗೋಯಲ್ ಮಧ್ಯೆ ವಾಗ್ವಾದ ನಡೆಯಿತು.

ಸಂಸತ್​​ನ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ನನಗೆ ಸಮನ್ಸ್ ನೀಡಲು ಹೇಗೆ ಸಾಧ್ಯ ಎಂದು ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ ಮಾಡಿದ್ದಾರೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕೇಂದ್ರ ಸರ್ಕಾರ ದೇಶದಲ್ಲಿರುವ ಸ್ವಾಯತ್ತ ಸಂಸ್ಥೆಗಳ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ದೆಹಲಿಯಲ್ಲಿರುವ ಹೆರಾಲ್ಡ್ ಹೌಸ್ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅಧಿಕೃತ ಪ್ರತಿನಿಧಿಯಾಗಿದ್ದು, ಇದೀಗ ಜಾರಿ ನಿರ್ದೇಶನಾಲಯ ಅವರಿಗೆ ಸಮನ್ಸ್ ನೀಡಿದೆ. ಸಂಸತ್ತಿನ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ವಿಚಾರಣೆಗೋಸ್ಕರ ನನ್ನನ್ನು ಹೇಗೆ ಕರೆಯುತ್ತಾರೆ? ನಾನು ಮಧ್ಯಾಹ್ನ 12.30 ಕ್ಕೆ ಇಡಿ ಅಧಿಕಾರಿಗಳ ಮುಂದೆ ಹಾಜರಾಗಬೇಕು. ಕಾನೂನನ್ನು ಅನುಸರಿಸಲು ಬಯಸುತ್ತೇನೆ. ಆದರೆ ಈ ಸಮಯದಲ್ಲಿ ಸಂಸತ್ತಿನ ಅಧಿವೇಶನದ ಮಧ್ಯದಲ್ಲಿ ಕರೆಯುವುದು ಸೂಕ್ತವೇ ಎಂದು ಪ್ರಶ್ನೆ ಮಾಡಿದ್ದಾರೆ. ಇದೇ ವೇಳೆ, ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಪಕ್ಷದ ಭಯವಿದೆ ಎಂದರು.

ಇದನ್ನೂ ಓದಿ: ನ್ಯಾಷನಲ್​ ಹೆರಾಲ್ಡ್​​ ಕಚೇರಿಗೆ ಬೀಗ ಹಾಕಿದ ಇಡಿ

ಕೇಂದ್ರ ಸಚಿವ ಪಿಯೂಷ್ ಗೋಯಲ್​ ಪ್ರತಿಕ್ರಿಯಿಸಿ, ಸ್ವಾಯತ್ತ ಸಂಸ್ಥೆಗಳ ಕೆಲಸದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ. ಈ ಹಿಂದೆ ಕಾಂಗ್ರೆಸ್ ಆಡಳಿತ ನಡೆಸುತ್ತಿದ್ದ ಸಂದರ್ಭದಲ್ಲಿ ಈ ರೀತಿ ನಡೆಯುತ್ತಿತ್ತೆಂದು ಅನಿಸುತ್ತದೆ ಎಂದು ಖರ್ಗೆ ಹೇಳಿಕೆಗೆ ತಿರುಗೇಟು ಕೊಟ್ಟರು.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ನ ಸೋನಿಯಾ ಗಾಂಧಿ ವಿಚಾರಣೆಯ ಸಂದರ್ಭದಲ್ಲಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.