ದಾಹೋದ್(ಗುಜರಾತ್): ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ವಿಷಾಹಾರ ಸೇವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿ, 12 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುಜರಾತ್ನ ದಾಹೋದ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭುಲ್ವಾನ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆಸ್ಪತ್ರೆಗೆ ದಾಖಲಾದವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ದೇವಗಢ್ ಬರಿಯಾ ಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬುಡಕಟ್ಟು ಜನಾಂಗದವರು ಸಾಂಪ್ರದಾಯಿಕವಾಗಿ ಆಚರಿಸುವ ಜಾತರ್ ಎಂಬ ಧಾರ್ಮಿಕ ಸಮಾರಂಭದಲ್ಲಿ ಸ್ಥಳೀಯವಾಗಿ ತಯಾರಿಸಿದ ಪಾನೀಯವನ್ನು ಸೇವಿಸಿದ ನಂತರ ಅಥವಾ ವಿಷಾಹಾರ ಸೇವನೆ ನಂತರ ಈ ಅವಘಡ ಸಂಭವಿಸಿರಬಹುದು ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ನಾಲ್ವರ ಸಾವಿನ ಹಿಂದಿನ ನಿಖರವಾದ ಕಾರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ಧಾವಿಸಿ ಗ್ರಾಮಸ್ಥರು ಸೇವಿಸಿದ ಆಹಾರ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಮರಣೋತ್ತರ ವರದಿ ಬಳಿಕ ನಿಖರ ಕಾರಣ ಗೊತ್ತಾಗುವ ಸಾಧ್ಯತೆ ಇರುತ್ತದೆ.
ಇದನ್ನೂ ಓದಿ: ಅದ್ದೂರಿಯಾಗಿ ಮದುವೆ ಮಾಡಿದರೂ ತೀರದ ವರದಕ್ಷಿಣೆ ದಾಹ : ಪತ್ನಿ ಕೊಂದು ನೇಣು ಹಾಕಿದ ಗಂಡ