ETV Bharat / bharat

2024ರ ಚುನಾವಣೆಗೆ ಪ್ರತಿಪಕ್ಷಗಳಿಂದ ಒಗ್ಗಟ್ಟಿನ ಮಂತ್ರ: ಶರದ್ ಪವಾರ್, ಉದ್ಧವ್ ಠಾಕ್ರೆ ಭೇಟಿಯಾದ ನಿತೀಶ್ ಕುಮಾರ್

author img

By

Published : May 11, 2023, 7:24 PM IST

Nitish Kumar, Uddhav Thackeray, Sharad Pawar are Opposition Leaders
ನಿತೀಶ್ ಕುಮಾರ್ , ಉದ್ಧವ್ ಠಾಕ್ರೆ , ಶರದ್ ಪವಾರ್ ಪ್ರತಿಪಕ್ಷಗಳ ನಾಯಕರು

2024 ರ ಲೋಕಸಭೆ ಚುನಾವಣೆ ಮುನ್ನ ಬಿಹಾರ ಸಿಎಂ ನಿತೀಶ್ ಕುಮಾರ್ ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಕುರಿತಾಗಿ ಇಂದು ಮುಂಬೈನಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

ಮುಂಬೈ: ಮುಂದಿನ ವರ್ಷದ ಲೋಕಸಭೆ ಚುನಾವಣೆಗೂ ಮುನ್ನ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಹಾಗೂ ಬಲಪಡಿಸುವ ಕುರಿತಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್​ಕುಮಾರ್ ಡಿಸಿಎಂ ತೇಜಸ್ವಿ ಯಾದವ್​ರೊಂದಿಗೆ ಗುರುವಾರ ಮುಂಬೈನಲ್ಲಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

ಎನ್​​ಸಿಪಿ ರಾಷ್ಟ್ರೀಯ ನಾಯಕ ಶರದ್ ಪವಾರ್ ಅವರ ದಕ್ಷಿಣ ಮುಂಬೈನ ನಿವಾಸದಲ್ಲಿ ಜಂಟಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ಆಡಳಿತ ದೇಶದ ಹಿತಾಸಕ್ತಿಗೆ ತಕ್ಕಂತೆ ಕೆಲಸ ಮಾಡುತ್ತಿಲ್ಲ. ಪ್ರಸ್ತುತ ವಿರೋಧ ಪಕ್ಷಗಳ ಮೈತ್ರಿಕೂಟ ಒಗ್ಗೂಡಿದರೆ 2024ರ ಸಾರ್ವತ್ರಿಕ ಚುನಾವಣೆಯನ್ನು ಎದುರಿಸುವುದು ಸುಲಭವಾಗಲಿದೆ ಎಂದು ಹೇಳಿದರು.

ಪ್ರತಿಪಕ್ಷಗಳ ಮೈತ್ರಿಕೂಟದ ನಾಯಕರಾಗಿ ಪವಾರ್ ಆಗುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಕುಮಾರ್, ಅದಕ್ಕಿಂತ ಸಂತೋಷಕರ ಸಂಗತಿ ಮತ್ತೊಂದು ಇಲ್ಲ. ಅವರು ತಮ್ಮ ಪಕ್ಷಕ್ಕಾಗಿ ಮಾತ್ರ ಅಲ್ಲ, ಇಡೀ ದೇಶಕ್ಕಾಗಿ ಹೆಚ್ಚು ಉತ್ಸಾಹದಿಂದ ಕೆಲಸ ಮಾಡಬೇಕು ಎಂದು ನಾನು ಅವರಿಗೆ ಹೇಳಿದ್ದೇನೆ. ವಿರೋಧ ಪಕ್ಷಗಳೆಲ್ಲ ಒಗ್ಗೂಡಿದರೆ, ಅದು ದೇಶದ ಹಿತದೃಷ್ಟಿಯಿಂದಲೂ ಒಳ್ಳೆಯದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಎನ್​​ಸಿಪಿ ರಾಷ್ಟ್ರೀಯ ನಾಯಕ ಶರದ್ ಪವಾರ್ ಮಾತನಾಡಿ, ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ಪ್ರತಿಪಕ್ಷಗಳೆಲ್ಲ ಒಂದುಗೂಡುವುದು ಅಗತ್ಯವಿದೆ. ನಾವೆಲ್ಲರೂ ಒಗ್ಗೂಡಿದರೆ, ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಬೆಂಬಲ ಸಿಗಲಿದೆ. ಮೈತ್ರಿಕೂಟದ ವಿರೋಧ ಪಕ್ಷದ ನಾಯಕ ಯಾರಾಗಬೇಕು ನಂತರ ತೀರ್ಮಾನಿಸಲಾಗುವುದು. ಸದ್ಯ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು ಎಂದು ಹೇಳಿದರು.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಲಿದೆ ಎಂಬ ಮಾಹಿತಿಯನ್ನು ಎನ್‌ಸಿಪಿ ಮುಖ್ಯಸ್ಥರು ಹೇಳಿದ್ದು, ಅಲ್ಲಿನ ಜನರು ಬಿಜೆಪಿಯನ್ನು ಕಿತ್ತೊಗೆದು ಜಾತ್ಯತೀತ ಸರ್ಕಾರವನ್ನು ಆಯ್ಕೆ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇಂದು ನನ್ನ ಮುಂಬೈ ನಿವಾಸದಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಿ ಮತ್ತು ಡಿಸಿಎಂ ತೇಜಸ್ವಿ ಯಾದವ್ ಜಿ ಅವರನ್ನು ಸ್ವಾಗತಿಸಿದ್ದೇನೆ. ಲೋಕಸಭೆ ಚುನಾವಣೆಗೆ ಮುಂಚಿತ ಪ್ರತಿಪಕ್ಷಗಳ ಏಕತೆಯನ್ನು ಬಲಪಡಿಸಲು ಸಂಕ್ಷಿಪ್ತವಾಗಿ ಚರ್ಚಿಸಿದ್ದೇವೆ" ಎಂದು ಕುಮಾರ್ ಭೇಟಿ ನೀಡಿದ ಬಳಿಕ ಪವಾರ್ ಟ್ವೀಟ್ ಮಾಡಿದ್ದಾರೆ.

ಇದಕ್ಕೂ ಮುನ್ನ ನಿತೀಶ್ ಕುಮಾರ್ ಅವರು ಉದ್ಧವ್ ಠಾಕ್ರೆ ಅವರನ್ನು ಶಿವಸೇನೆ (ಯುಬಿಟಿ) ನಾಯಕರ ನಿವಾಸದಲ್ಲಿ ಭೇಟಿ ಮಾಡಿ ಚರ್ಚಿಸಿದ್ದರು.

ನಿತೀಶ್ ಕುಮಾರ್ ಅವರು ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿ, ಪ್ರತಿಪಕ್ಷಗಳು ಒಗ್ಗಟ್ಟಾಗಿ ಮುಂದುವರಿದು ಬಿಜೆಪಿ ವಿರುದ್ಧ ಸ್ಪರ್ಧಿಸಿದರೆ ಯಶಸ್ಸು ಖಂಡಿತ ಸಿಗುತ್ತದೆ. ದೇಶವನ್ನು ಸರಿಯಾದ ದಿಕ್ಕಿನಲ್ಲಿ ಸಾಗಲು ಉತ್ತಮ ಆಡಳಿತ ನೀಡಬಹುದು ಎಂದು ಚರ್ಚಿಸಿದ್ದಾರೆ.

ಕೆಲವು ದಿನಗಳ ಹಿಂದೆ ನಿತೀಶ್ ಕುಮಾರ್ ಅವರು ಒಡಿಶಾದ ಭುವನೇಶ್ವರದಲ್ಲಿ ನವೀನ್ ಪಟ್ನಾಯಕ್ ಅವರನ್ನು ಭೇಟಿ ಮಾಡಿದ್ದರು. ಆದರೆ ಸಭೆಯ ನಂತರ ಇಬ್ಬರು ಸಿಎಂಗಳು ಯಾವುದೇ ರಾಜಕೀಯ ಚರ್ಚೆ ಆಗಿಲ್ಲ ಎಂದು ಸಮರ್ಥಿಸಿಕೊಂಡರು. ಸಭೆಯ ನಂತರ ಮಾಧ್ಯಮಗೋಷ್ಟಿಯಲ್ಲಿ ಪಟ್ನಾಯಕ್ ಅವರು ಕೇವಲ ಇಬ್ಬರು ಹಳೆಯ ಸ್ನೇಹಿತರು ಮತ್ತು ಸಹೋದ್ಯೋಗಿಗಳು ಎಂದು ಹೇಳಿದ್ದರು.

ನಿತೀಶ್ ಕುಮಾರ್ ಅವರು ಈ ಹಿಂದೆಯೂ ಲಕ್ನೋದಲ್ಲಿ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಮತ್ತು ಕೋಲ್ಕತ್ತಾದಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿ ಹಲವಾರು ವಿರೋಧ ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಿದ್ದರು. ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಸಿಪಿಎಂ ನಾಯಕ ಸೀತಾರಾಂ ಯೆಚೂರಿ ಮತ್ತು ಸಿಪಿಐ ನಾಯಕ ಡಿ ರಾಜಾ ಅವರನ್ನು ಭೇಟಿ ಮಾಡಿದ್ದರು.

ಇದನ್ನೂಓದಿ:'ಪ್ರಜಾಪ್ರಭುತ್ವದ ಹತ್ಯೆ ತಡೆಯಲು ನಾವು ಒಟ್ಟಾಗಿ ಬರುತ್ತಿದ್ದೇವೆ': ಉದ್ಧವ್ ಠಾಕ್ರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.