ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಭೇಟಿ ಮಾಡಿ ಕೆಲಕಾಲ ಚರ್ಚೆ ನಡೆಸಿದ್ದಾರೆ. ಈ ವೇಳೆ ನಿನ್ನೆ ಪಂಜಾಬ್ ಪ್ರವಾಸದ ಸಂದರ್ಭದಲ್ಲಿ ನಡೆದಿದ್ದ ಭದ್ರತಾ ಲೋಪದ ಬಗ್ಗೆ ರಾಷ್ಟ್ರಪತಿಗಳು ಕಳವಳ ವ್ಯಕ್ತಪಡಿಸಿದ್ದಾರೆ ಎಂದು ರಾಷ್ಟ್ರಪತಿ ಕಚೇರಿ ಮೂಲಗಳು ತಿಳಿಸಿವೆ.
ಪ್ರಧಾನಿ ಮೋದಿಯವರ ಪಂಜಾಬ್ ಪ್ರವಾಸದ ವೇಳೆ ಭದ್ರತಾ ಲೋಪಗಳ ಬಗ್ಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕೂಡ ಕಳವಳ ವ್ಯಕ್ತಪಡಿಸಿದ್ದು, ಇದೇ ವಿಚಾರವಾಗಿ ಮೋದಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿರುವುದಾಗಿ ಅವರು ಟ್ಟೀಟ್ ಮಾಡಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದಿದ್ದಾರೆ.
ಪಂಜಾಬ್ನ ಫಿರೋಜ್ಪುರದಲ್ಲಿ ಆಯೋಜಿಸಿದ್ದ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಕೆಲ ರೈತ ಪ್ರತಿಭಟನಾಕಾರರು ರಸ್ತೆಯನ್ನು ಅಡ್ಡಗಟ್ಟಿದ್ದರು. ಈ ವೇಳೆ ಮೋದಿ ತಮ್ಮ ಬೆಂಗಾವಲು ಪಡೆಯೊಂದಿಗೆ ಫ್ಲೈಓವರ್ನಲ್ಲೇ ಸುಮಾರು 20 ನಿಮಿಷಗಳ ಕಾಲ ಕಳೆಯಬೇಕಾಯಿತು. ಬಳಿಕ ಪಂಜಾಬ್ನಲ್ಲಿ ನಿಗದಿಯಾಗಿದ್ದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿ ಪ್ರಧಾನಿ ದೆಹಲಿಗೆ ವಾಪಸ್ ಆಗಿದ್ದರು. ಈ ವಿಚಾರ ರಾಜಕೀಯವಾಗಿ ಭಾರಿ ವಿವಾದಕ್ಕೆ ಕಾರಣವಾಗಿದೆ.
ಇದನ್ನೂ ಓದಿ: ಮೋದಿಗೆ ಭದ್ರತಾ ಲೋಪ: ನಾಳೆ ಸುಪ್ರೀಂನಲ್ಲಿ ಸಿಜೆಐ ನೇತೃತ್ವದ ಪೀಠದಿಂದ ಕೇಸ್ ವಿಚಾರಣೆ