ETV Bharat / bharat

ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್ ಸಿಬಿಐಗೆ ನೂತನ ಸಾರಥಿ

author img

By

Published : May 14, 2023, 3:11 PM IST

Updated : May 14, 2023, 8:12 PM IST

Praveen Sood appointed as a Director of CBI
ಸಿಬಿಐ ನಿರ್ದೇಶಕರಾಗಿ ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್ ನೇಮಕ

ಪ್ರವೀಣ್ ಸೂದ್ ಅವರನ್ನು ಸಿಬಿಐ ನಿರ್ದೇಶಕರಾಗಿ ನೇಮಿಸಲಾಗಿದೆ.

ನವದೆಹಲಿ: ಕರ್ನಾಟಕದ ಡಿಜಿಪಿಯಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಕೇಂದ್ರೀಯ ತನಿಖಾ ದಳ (ಸಿಬಿಐ)ದ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಮುಂದಿನ ಎರಡು ವರ್ಷಗಳ ಅವಧಿಗೆ ಅವರನ್ನು ನಿರ್ದೇಶಕರಾಗಿ ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಹಾಲಿ ಸಿಬಿಐ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅವರ ಎರಡು ವರ್ಷಗಳ ಅವಧಿಯು ಮೇ 25ರಂದು ಕೊನೆಗೊಳ್ಳಲಿದೆ. ಹೀಗಾಗಿ, ಶನಿವಾರ ಪ್ರಧಾನಿ, ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿಯು ಸಿಬಿಐ ನಿರ್ದೇಶಕರ ಹುದ್ದೆಗೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಅಂತಿಮಗೊಳಿಸಿತ್ತು.

ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್, ಮಧ್ಯಪ್ರದೇಶದ ಡಿಜಿಪಿ ಸುಧೀರ್ ಸಕ್ಸೇನಾ ಮತ್ತು ಅಗ್ನಿಶಾಮಕ ಸೇವೆ, ನಾಗರಿಕ ರಕ್ಷಣಾ ಮತ್ತು ಗೃಹರಕ್ಷಕ ದಳದ ಮಹಾನಿರ್ದೇಶಕ ತಾಜ್ ಹಾಸನ್ ಅವರ ಹೆಸರು ಸಿಬಿಐ ನಿರ್ದೇಶರ ಹುದ್ದೆಗೆ ಮಂಚೂಣಿಯಲ್ಲಿತ್ತು. ಕರ್ನಾಟಕ ಕೇಡರ್‌ನ 1986ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಪ್ರವೀಣ್ ಸೂದ್ ನೇಮಕಗೊಂಡಿದ್ದಾರೆ.

ನೂತನ ಸಿಬಿಐ ನಿರ್ದೇಶಕರ ಬಗ್ಗೆ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಆದೇಶ ಹೊರಡಿಸಿದ್ದು, ಕರ್ನಾಟಕ ಕೇಡರ್‌ನ 1986ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರನ್ನು ಕೇಂದ್ರೀಯ ತನಿಖಾ ದಳದ ನಿರ್ದೇಶಕರಾಗಿ ನೇಮಕ ಮಾಡಲು ಸಕ್ಷಮ ಪ್ರಾಧಿಕಾರದ ಅನುಮೋದನೆ ನೀಡಿದೆ. ಮಹಾರಾಷ್ಟ್ರ ಕೇಡರ್‌ನ 1985ರ ಬ್ಯಾಚ್‌ನ ಸುಬೋಧ್ ಕುಮಾರ್ ಜೈಸ್ವಾಲ್ ಅವರ ಅಧಿಕಾರಾವಧಿ ಪೂರ್ಣಗೊಂಡ ನಂತರ ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಎರಡು ವರ್ಷಗಳ ಅವಧಿಗೆ ಪ್ರವೀಣ್ ಸೂದ್ ನಿರ್ದೇಶಕರಾಗಿರಲಿದ್ದಾರೆ ಎಂದು ತಿಳಿಸಲಾಗಿದೆ.

ಸೂದ್​ ಮೂರು ವರ್ಷಗಳ ಹಿಂದೆ ರಾಜ್ಯ ಡಿಜಿಪಿಯಾಗಿ ನೇಮಕಗೊಂಡಿದ್ದರು. ಮೂಲತಃ ಹಿಮಾಚಲ ಪ್ರದೇಶದ ಇವರು ಐಐಟಿ ದೆಹಲಿಯ ವಿದ್ಯಾರ್ಥಿ. ಇದೇ ಮಾರ್ಚ್​ನಲ್ಲಿ ಸೂದ್​ ಬಿಜೆಪಿ ಸರ್ಕಾರವನ್ನು ರಕ್ಷಿಸುತ್ತಿದ್ದಾರೆ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದರು.

ಇದನ್ನೂ ಓದಿ: ಕಳುವಾಗಿದ್ದ ಮೊಬೈಲ್ ಹುಡುಕಿಕೊಟ್ಟ ಪೊಲೀಸರು: ಪ್ರಹ್ಲಾದ್​ ಜೋಶಿ ಶ್ಲಾಘನೆ

ಪ್ರವೀಣ್ ಸೂದ್ ಹಿನ್ನೆಲೆ: 1989 ಮೈಸೂರು ಎಎಸ್ಪಿಯಾಗಿ ವೃತ್ತಿ ಆರಂಭಿಸಿದ ಇವರು ಬಳ್ಳಾರಿ, ರಾಯಚೂರಲ್ಲಿ ಎಸ್‍ಪಿ ಆಗಿ ಕರ್ತವ್ಯ ನಿರ್ವಹಣೆ ಮಾಡಿದ್ದಾರೆ. 1999 ರಲ್ಲಿ ಮಾರಿಷಸ್ ದೇಶದ ಪೊಲೀಸ್ ಸಲಹೆಗಾರರಾಗಿ ಮೂರು ವರ್ಷ ಸೇವೆ ಸಲ್ಲಿಸಿದ ಪ್ರವೀಣ್ ಸೂದ್ ಅವರಿಗೆ 1996 ರಲ್ಲಿ ಮುಖ್ಯಮಂತ್ರಿಗಳ ಪದಕ, 2002ರಲ್ಲಿ ಪೊಲೀಸ್ ಪದಕ ದೊರೆತಿದೆ.

2004-07 ರಲ್ಲಿ ಮೈಸೂರು ಕಮೀಷನರ್ ಆಗಿ ಸೇವೆ ಸಲ್ಲಿಸಿದ್ದಾರೆ. 2008ರಲ್ಲಿ ಬೆಂಗಳೂರು ನಗರ ಸಂಚಾರ ವಿಭಾಗದ ಹೆಚ್ಚುವರಿ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. 2011 ರಲ್ಲಿ ರಾಷ್ಟ್ರಪತಿಗಳ ಪದಕಕ್ಕೆ ಭಾಜನರಾಗಿದ್ದರು. 2013-14 ಕರ್ನಾಟಕ ಪೊಲೀಸ್ ಹೌಸಿಂಗ್ ಕಾರ್ಪೊರೇಷನ್ ಮ್ಯಾನೆಜಿಂಗ್ ಡೈರೆಕ್ಟರ್, 2017 ರಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ನಮ್ಮ 100, ಪಿಂಕ್ ಹೊಯ್ಸಳ, ಸುರಕ್ಷಾ ಅಪ್ಲಿಕೇಶನ್ ನಂತಹ ಪ್ರಯೋಗಗಳು ಪ್ರವೀಣ್ ಸೂದ್ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದಾಗ ಜಾರಿಯಾಗಿದ್ದವು‌.

Last Updated :May 14, 2023, 8:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.