ETV Bharat / bharat

ಪುಣೆಯ ಮೇಣದಬತ್ತಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 6 ಜನರು ಸಾವು

author img

By ETV Bharat Karnataka Team

Published : Dec 8, 2023, 5:45 PM IST

Updated : Dec 8, 2023, 7:07 PM IST

Six dead as fire breaks out at candle manufacturing unit near Pune
ಮೇಣದಬತ್ತಿ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಆರು ಜನರು ಸಾವು

Fire accident at Candle manufacturing Unit in Pune: ಮೇಣದಬತ್ತಿ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡು ಆರು ಮಂದಿ ಮೃತಪಟ್ಟ ಘಟನೆ ಪುಣೆಯಲ್ಲಿ ಜರುಗಿದೆ.

ಪುಣೆ(ಮಹಾರಾಷ್ಟ್ರ): ಮೇಣದಬತ್ತಿ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಟ ಆರು ಜನರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ ನಡೆಯಿತು. ಇತರ ಎಂಟು ಮಂದಿ ಗಾಯಗೊಂಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪಿಂಪ್ರಿ-ಚಿಂಚ್ವಾಡ್ ಪ್ರದೇಶದ ತಾಳವಾಡೆಯಲ್ಲಿ ಈ ಕಾರ್ಖಾನೆ ಇದೆ. ಸಾಮಾನ್ಯವಾಗಿ ಹುಟ್ಟುಹಬ್ಬದ ಆಚರಣೆ ಸಂದರ್ಭದಲ್ಲಿ ಬಳಸಲ್ಪಡುವ ಮಿಂಚುವ ಮೇಣದಬತ್ತಿಗಳನ್ನು ಇಲ್ಲಿ ತಯಾರಿಸಲಾಗುತ್ತಿದೆ. ಇಂದು ಮಧ್ಯಾಹ್ನ 2.45ರ ಸುಮಾರಿಗೆ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ಬಂದಿದೆ. ಅಂತೆಯೇ, ಅಗ್ನಿಶಾಮಕ ವಾಹನಸಮೇತ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡರು ಎಂದು ಪಿಂಪ್ರಿ-ಚಿಂಚ್ವಾಡ್ ಪುರಸಭೆ ಆಯುಕ್ತ ಶೇಖರ್ ಸಿಂಗ್ ಮಾಹಿತಿ ನೀಡಿದರು.

ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಗಾಯಾಳುಗಳನ್ನು ಪುಣೆ ಹಾಗೂ ಪಿಂಪ್ರಿ-ಚಿಂಚ್ವಾಡ್ ಪ್ರದೇಶದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಮತ್ತೊಂದೆಡೆ, ಘಟನೆ ಬಳಿಕ ಏಳರಿಂದ ಎಂಟು ಆಂಬ್ಯುಲೆನ್ಸ್‌ಗಳು ಸಹ ಸ್ಥಳಕ್ಕೆ ತಲುಪಿದ್ದವು. ಒಟ್ಟು ಆರು ಮಂದಿಯ ಮೃತದೇಹಗಳು ಪತ್ತೆಯಾಗಿವೆ. ಗಾಯಾಳುಗಳ ಪೈಕಿ ಏಳು ಮಹಿಳೆಯರು ಮತ್ತು ಒಬ್ಬ ಪುರುಷ ಸೇರಿದ್ದಾರೆ. ಇದೇ ವೇಳೆ, ಯಾವುದೇ ಅನುಮತಿ ಇಲ್ಲದೇ ಕಾರ್ಖಾನೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ. ಈ ಘಟನೆ ಕುರಿತು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ತಮಿಳುನಾಡಿನ ಸ್ಫೋಟ ಪ್ರಕರಣ: ಅಕ್ಟೋಬರ್​ ತಿಂಗಳಲ್ಲಿ ತಮಿಳುನಾಡಿನ ಶಿವಕಾಶಿಯಲ್ಲಿ ಎರಡು ಪಟಾಕಿ ಕಾರ್ಖಾನೆಗಳಲ್ಲಿ ಭೀಕರ ಸ್ಫೋಟ ಉಂಟಾಗಿ 10 ಮಂದಿ ಸುಟ್ಟು ಕರಕಲಾಗಿದ್ದರು. ಅಲ್ಲದೇ, ಘಟನೆಯಲ್ಲಿ 15ಕ್ಕೂ ಅಧಿಕ ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದ ಬಗ್ಗೆ ವರದಿಯಾಗಿತ್ತು.

ಬೆಂಗಳೂರು- ಪಟಾಕಿ ಕಾರ್ಖಾನೆ ಅವಘಡ: ಇದಕ್ಕೂ ಮುನ್ನ ಬೆಂಗಳೂರಿನ ಹೊರವಲಯದ ಅತ್ತಿಬೆಲೆಯಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಉಂಟಾಗಿ 16 ಜನರು ಸಾವನ್ನಪ್ಪಿದ್ದರು. ಆರಂಭದಲ್ಲಿ ಮೊದಲು 12 ಮಂದಿ ಸುಟ್ಟು ಕರಕಲಾಗಿದ್ದರು. ನಂತರ ಇತರ ನಾಲ್ವರು ಗಾಯಾಳುಗಳೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದರು. ಮೃತಪಟ್ಟ ಕುಟುಂಬಸ್ಥರಿಗೆ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳು ಕ್ರಮವಾಗಿ ತಲಾ 5 ಲಕ್ಷ ರೂ. ಮತ್ತು 3 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದವು. ಈ ಸ್ಫೋಟ ಪ್ರಕರಣದ ತನಿಖೆಯನ್ನು ಕರ್ನಾಟಕ ಸರ್ಕಾರ ಸಿಐಡಿಗೆ ವಹಿಸಿದೆ.

Last Updated :Dec 8, 2023, 7:07 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.