ನವದೆಹಲಿ: ಆರೋಗ್ಯ ಕ್ಷೇತ್ರದಲ್ಲಿ ತರಬೇತಿ ಹೊಂದಿರುವವರನ್ನು ನೇಮಿಸುವ ಮೂಲಕ ಆಸ್ಪತ್ರೆಗಳಲ್ಲಿ ಉಂಟಾಗಿರುವ ಸಿಬ್ಬಂದಿ ಕೊರತೆ ಬಗೆಹರಿಸಿ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಕರೆ ನೀಡಿದರು.
ಶನಿವಾರ ರಾಷ್ಟ್ರ ರಾಜಧಾನಿಯಲ್ಲಿ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ದೇಶದ ಪ್ರತಿಯೊಂದು ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸುವ ಅಗತ್ಯತೆಗಳನ್ನು ಒತ್ತಿ ಹೇಳಿದರು. ಸದ್ಯದ ಪರಿಸ್ಥಿತಿಯಲ್ಲಿ ಎಲ್ಲರೂ ಆರೋಗ್ಯವಾಗಿರುವಂತೆ ನೋಡಿಕೊಳ್ಳುವುದು ಮುಖ್ಯ. ದೇಶದಲ್ಲಿ 670 ಜನರಿಗೆ ಓರ್ವ ದಾದಿಯರಿದ್ದಾರೆ. ವಿಶ್ವಸಂಸ್ಥೆಯ ಪ್ರಕಾರ 300 ಜನರಿಗೆ ಓರ್ವ ನರ್ಸ್ ಇರಬೇಕು. ಆದಷ್ಟು ಬೇಗ ಈ ಈ ಸಮಸ್ಯೆ ಬಗೆಹರಿಸುವುದಕ್ಕೆ ಕ್ರಮ ಕೈಗೊಳ್ಳಿ ಎಂದು ಹೇಳಿದರು.
ಹಳ್ಳಿಗಳಲ್ಲಿ ಸೇವೆ ಸಲ್ಲಿಸಲು ವೈದ್ಯಕೀಯ ಸಿಬ್ಬಂದಿಯನ್ನು ಆಕರ್ಷಿಸಲು ಉತ್ತಮ ಪ್ರೋತ್ಸಾಹ ಮತ್ತು ಮೂಲ ಸೌಕರ್ಯಗಳನ್ನು ಸೃಷ್ಟಿಸಬೇಕು. ಈ ವೇಳೆ ಅವರು, 15 ನೇ ಹಣಕಾಸು ಆಯೋಗದ ಶಿಫಾರಸುಗಳನ್ನು ಉಲ್ಲೇಖಿಸಿದರು. 2022 ರ ವೇಳೆಗೆ ರಾಜ್ಯಗಳು ತಮ್ಮ ಆಯವ್ಯಯದ ಶೇ 8 ಕ್ಕಿಂತ ಹೆಚ್ಚು ಆರೋಗ್ಯ ಕ್ಷೇತ್ರಕ್ಕೆ ಮೀಸಲಿಡಬೇಕು ಎಂದು ಸಲಹೆ ನೀಡಿದರು.
ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಆರೋಗ್ಯ ರಕ್ಷಣೆಯಲ್ಲಿ ಅರೆವೈದ್ಯಕೀಯ ಸಿಬ್ಬಂದಿಯ 'ನಿರ್ಣಾಯಕ ಪಾತ್ರ' ವನ್ನು ಉಪರಾಷ್ಟ್ರಪತಿ ಶ್ಲಾಘಿಸಿದರು. ಕಳೆದ ವರ್ಷ ಅವರು ಅವಿರತ ಸೇವೆ ಸಲ್ಲಿಸಿದ್ದಕ್ಕೆ ಕೋವಿಡ್ ನಿರ್ವಹಣೆ ಮಾಡಲು ಸಾಧ್ಯವಾಯಿತು. ಭಾರತೀಯ ನರ್ಸ್ಗಳು ಮತ್ತು ಪ್ಯಾರಾಮೆಡಿಕಲ್ ಸಿಬ್ಬಂದಿ ತಮ್ಮ ಕೌಶಲ್ಯ, ಸಮರ್ಪಣೆ ಮತ್ತು ಕಾಳಜಿಯ ಸ್ವಭಾವದಿಂದ ಹಲವು ವರ್ಷಗಳಿಂದ ಜಾಗತಿಕ ಮಟ್ಟದಲ್ಲಿ ಉತ್ತಮ ಖ್ಯಾತಿ ಗಳಿಸಿದ್ದಾರೆ ಎಂದು ಗುಣಗಾನ ಮಾಡಿದರು.