ETV Bharat / city

ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಸಿಗಲಿದೆ: ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ವಿಶ್ವಾಸ

author img

By

Published : Nov 21, 2021, 12:09 PM IST

yadiyurappa
ಬಿ.ಎಸ್​. ಯಡಿಯೂರಪ್ಪ

ವಿಧಾನ ಪರಿಷತ್​ನ(MLC Election in Karnataka)25 ಕ್ಷೇತ್ರಗಳ ಪೈಕಿ 20ರಲ್ಲಿ ಬಿಜೆಪಿ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಅಭ್ಯರ್ಥಿಗಳ ಘೋಷಣೆಗೂ ಮುನ್ನವೇ ಪಕ್ಷ ರಾಜ್ಯದಲ್ಲಿ ಪ್ರಚಾರ ನಡೆಸಿದೆ. ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ(EX CM B.S. Yediyurappa)ಹೇಳಿದರು.

ಚಿಕ್ಕೋಡಿ(ಬೆಳಗಾವಿ): ವಿಧಾನ ಪರಿಷತ್​ನ 25 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ(MLC Election in Karnataka) ಬಿಜೆಪಿ 17ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ(EX CM B.S. Yediyurappa) ಭವಿಷ್ಯ ನುಡಿದರು.

ಚಿಕ್ಕೋಡಿ ಪಟ್ಟಣದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್​ನ 25 ಕ್ಷೇತ್ರಗಳ ಪೈಕಿ 20ರಲ್ಲಿ ಬಿಜೆಪಿ ಸ್ಪರ್ಧೆ ಮಾಡಲಿದೆ. ಅಭ್ಯರ್ಥಿಗಳ ಘೋಷಣೆಗೂ ಮುನ್ನವೇ ಪಕ್ಷ ರಾಜ್ಯದಲ್ಲಿ ಪ್ರಚಾರ ಆರಂಭಿಸಿದ್ದೇವೆ. ಎಲ್ಲ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದರೂ, ಕಾಂಗ್ರೆಸ್​ ಈವರೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಟ್ಟಿಲ್ಲ. ಇದು ಕಾಂಗ್ರೆಸ್​ನ ಚುನಾವಣಾ ಸಿದ್ಧತೆಯನ್ನು ತೋರಿಸುತ್ತದೆ ಎಂದು ಬಿಎಸ್​ವೈ ವ್ಯಂಗ್ಯವಾಡಿದರು.

ಚಿಕ್ಕೋಡಿಯಲ್ಲಿ 8942 ಮತದಾರರಿದ್ದಾರೆ. 3 ಬಾರಿ ಗೆಲುವು ಸಾಧಿಸಿರುವ ಬಿಜೆಪಿಯ ಮಹಾಂತೇಶ್​ ಕವಟಗಿಮಠ‌, ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಈ ಬಾರಿ ಮೊದಲ ಸುತ್ತಿನಲ್ಲೇ ಕವಟಗಿಮಠ ಗೆಲುವು ಸಾಧಿಸುವ ವಿಶ್ವಾಸವಿದೆ. ವಿಧಾನ ಪರಿಷತ್​ನಲ್ಲಿ ಬಿಜೆಪಿಗೆ ಬಹುಮತವಿಲ್ಲ. ಈ ಚುನಾವಣೆಯಲ್ಲಿ ನಿಶ್ಚಿತವಾಗಿ ಬಹುಮತ ಸಿಗಲಿದ್ದು, ಕನಿಷ್ಠ 17ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂದರು.

ಕಾಂಗ್ರೆಸ್​ ಮುಖಂಡರು ಹಗಲು ದರೋಡೆ ಮಾಡಿ, ಅಭಿವೃದ್ಧಿ ಕಾರ್ಯಗಳಿಗೆ ಗಮನ ಕೊಡದೇ ಇರುವ ಪರಿಣಾಮವೇ ದೇಶದಲ್ಲಿ ಆ ಪಕ್ಷವನ್ನು ಹುಡುಕುವ ಪರಿಸ್ಥಿತಿ ಎದುರಾಗಿದೆ. ಕರ್ನಾಟಕದಲ್ಲಿ ಮಾತ್ರ ಉಸಿರಾಡುತ್ತಿದೆ‌. ಇದೀಗ ಬಿಜೆಪಿ ಬಗ್ಗೆ ಹಗುರವಾಗಿ ಮಾತನಾಡುವ ಮೂಲಕ ತಮ್ಮ ಅಸ್ತಿತ್ವವನ್ನ ಇಲ್ಲಿಯೂ ಕಳೆದುಕೊಳ್ಳಲಿದ್ದಾರೆ ಎಂದು ಯಡಿಯೂರಪ್ಪ ಕಿಡಿಕಾರಿದರು.

ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದ ಕ್ಷೇತ್ರದಲ್ಲಿ ಬಿಜೆಪಿಗೆ ಬೆಂಬಲ ನೀಡಲಿ. ಈ ಕುರಿತು ನಾನು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಮಾಜಿ ಸಿಎಂ ಬಿಎಸ್​ವೈ ಇದೇ ಸಂದರ್ಭದಲ್ಲಿ ಹೇಳಿದರು.

ಅತಿವೃಷ್ಟಿ ಅನಾಹುತಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ನೆರೆ, ಅಕಾಲಿಕ ಮಳೆಯ ಕುರಿತಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ. ಹಲವೆಡೆ ರೈತರ ಬೆಳೆ ನಾಶವಾಗಿದೆ. ಚುನಾವಣೆಯ ಮಧ್ಯೆಯೂ ರೈತರ ಸಂಕಷ್ಟಕ್ಕೆ ಸ್ಪಂದಿಸಲಾಗುತ್ತಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.