ETV Bharat / city

ಅಂಗನವಾಡಿಗಳಿಗೆ ಮೂಲಸೌಕರ್ಯ ಕೋರಿ ಅರ್ಜಿ: ಕೇಂದ್ರ-ರಾಜ್ಯಕ್ಕೆ ಹೈಕೋರ್ಟ್ ನೋಟಿಸ್

author img

By

Published : May 12, 2022, 7:55 AM IST

Application for Infrastructure for Anganwadis, High Court Notice to Center and State governments, Karnataka government news, Karnataka high court news, ಅಂಗನವಾಡಿಗಳಿಗೆ ಮೂಲಸೌಕರ್ಯಕ್ಕಾಗಿ ಅರ್ಜಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್​, ಕರ್ನಾಟಕ ಸರ್ಕಾರ ಸುದ್ದಿ, ಕರ್ನಾಟಕ ಹೈಕೋರ್ಟ್ ಸುದ್ದಿ,
ಅಂಗನವಾಡಿಗಳಿಗೆ ಮೂಲಸೌಕರ್ಯ ಕೋರಿ ಅರ್ಜಿ

ರಾಜ್ಯದ ಅಂಗನವಾಡಿಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಕೇಂದ್ರ-ರಾಜ್ಯಕ್ಕೆ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು: ರಾಜ್ಯದಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ. ಅಂಗನವಾಡಿಗಳಿಗೆ ಮೂಲಸೌಲಭ್ಯ ಒದಗಿಸಲು ಸರ್ಕಾರಗಳಿಗೆ ನಿರ್ದೇಶಿಸುವಂತೆ ಬೀದರ್ ಜಿಲ್ಲೆಯ ಗುರುನಾಥ ವದ್ದೆ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಕುರಿತ ವಿಚಾರಣೆಯನ್ನು ನ್ಯಾ.ಬಿ.ಎಂ ಶಾಮ್ ಪ್ರಸಾದ್ ಮತ್ತು ನ್ಯಾ.ಎಂ.ಜಿ.ಎಸ್. ಕಮಲ್ ಅವರಿದ್ದ ವಿಭಾಗೀಯ ಪೀಠ ನಡೆಸಿದೆ.

ರಾಜ್ಯದಲ್ಲಿರುವ ಬಡ ಮಕ್ಕಳು ಅಪೌಷ್ಠಿಕತೆಯಿಂದ ಬಳಲುವುದನ್ನು ತಡೆಗಟ್ಟಲು ಹಾಗೂ ಅಕ್ಷರಾಭ್ಯಾಸ ಮಾಡಿಸಲು ಸರ್ಕಾರ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಿದೆ. ಆದರೆ, ರಾಜ್ಯದ ಬಹುತೇಕ ಅಂಗನವಾಡಿ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳೇ ಇಲ್ಲ. ಹೆಚ್ಚಿನ ಅಂಗನವಾಡಿಗಳು ಸರಿಯಾಗಿ ಗಾಳಿ-ಬೆಳಕಿಲ್ಲದ ಕಿರಿದಾದ ಕೋಣೆಗಳಲ್ಲಿ ನಡೆಯುತ್ತಿದ್ದು, ಮಕ್ಕಳು ಅಕ್ಷರಾಭ್ಯಾಸ ಮಾಡಲು, ಆಟವಾಡಲು ಸೂಕ್ತ ವಾತಾವರಣ ಇಲ್ಲ. ಮಕ್ಕಳಿಗೆ ಪೌಷ್ಠಿಕ ಆಹಾರವೂ ಲಭ್ಯವಾಗುತ್ತಿಲ್ಲ, ಶೌಚಾಲಯದ ವ್ಯವಸ್ಥೆಯೂ ಸರಿಯಿಲ್ಲ. ಹಲವೆಡೆ ವಿದ್ಯುತ್ ಸಂಪರ್ಕ ನೀಡಿಲ್ಲ. ಅಂಗನವಾಡಿ ಕೇಂದ್ರಗಳಲ್ಲಿರುವ ಅವ್ಯವಸ್ಥೆ ಮತ್ತು ಮಕ್ಕಳ ಹಕ್ಕುಗಳ ಉಲ್ಲಂಘನೆ ಕುರಿತು ಬೀದರ್ ಜಿಲ್ಲಾ ಪ್ರಧಾನ ಮತ್ತು ಸತ್ತ್ರ ನ್ಯಾಯಾಧೀಶರು ಕೂಡ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಅರ್ಜಿದಾರರು ಅವ್ಯವಸ್ಥೆಯನ್ನು ವಿವರಿಸಿದ್ದಾರೆ.

ಇದನ್ನೂ ಓದಿ: ಆಹಾರ ಸಾಮಗ್ರಿ ನಡುವೆಯೇ ಮಲಗಿರುವ ಪುಟಾಣಿಗಳು: ಅಂಗನವಾಡಿ ಕೇಂದ್ರದ ದುಸ್ಥಿತಿ ನೋಡಿ

ಅಲ್ಲದೇ, ಅಂಗನವಾಡಿ ಮಕ್ಕಳಿಗೆ ನೀಡಬೇಕಿರುವ ಪೌಷ್ಠಿಕ ಆಹಾರ ಪದಾರ್ಥಗಳನ್ನು ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಅಂಗನವಾಡಿ ಕೇಂದ್ರಗಳ ಕಾರ್ಯಕರ್ತರೇ ತಮ್ಮ ಮನೆಗಳಿಗೆ ಕೊಂಡೊಯ್ಯುತ್ತಿದ್ದಾರೆ. ಪೌಷ್ಠಿಕ ಆಹಾರ ಉತ್ಪಾದನಾ ಘಟಕಗಳಲ್ಲಿ ಕಳಪೆ ಆಹಾರ ಉತ್ಪಾದಿಸಲಾಗುತ್ತಿದೆ. ಮತ್ತೊಂದೆಡೆ ಅಂಗನವಾಡಿ ಕೇಂದ್ರಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಅರ್ಜಿದಾರರು ದೂರಿದ್ದಾರೆ.

ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಪೌಷ್ಠಿಕ ಆಹಾರ ಒದಗಿಸಬೇಕು. ಕೇಂದ್ರಗಳಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕು. ಬಯೋಮೆಟ್ರಿಕ್ ಮತ್ತು ಸಿಸಿಟಿವಿ ಆಳವಡಿಸಬೇಕು. ಆ ಮೂಲಕ ವ್ಯವಸ್ಥೆ ಸುಧಾರಿಸಬೇಕು ಹಾಗೂ ಭ್ರಷ್ಟಾಚಾರ ನಿಯಂತ್ರಿಸಬೇಕು. ಈ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಕಳೆದ ಏಪ್ರಿಲ್‌ನಲ್ಲಿ ಮನವಿ ಪತ್ರ ಸಲ್ಲಿಸಲಾಗಿದ್ದು, ಆ ಮನವಿಯನ್ನು ಪರಿಗಣಿಸಿ ಅಗತ್ಯಕ್ರಮ ಜರುಗಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.