ETV Bharat / city

ಚಾಮರಾಜನಗರ ಆಕ್ಸಿಜನ್ ದುರಂತ: ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ

author img

By

Published : May 20, 2021, 5:56 PM IST

ಸರ್ಕಾರದ ಪರ ಹಾಜರಿದ್ದ ಅಡ್ಜೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಮಾಹಿತಿ ನೀಡಿ, ಚಾಮರಾಜನಗರ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟ ಎಲ್ಲ 24 ಸೋಂಕಿತರ ಕುಟುಂಬಗಳಿಗೂ ಸರ್ಕಾರ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲು ನಿರ್ಧರಿಸಿದೆ ಎಂದು ತಿಳಿಸಿದರು.

Chamarajanagar Oxygen Disaster 2 lakh solution news
ಚಾಮರಾಜನಗರ ಆಕ್ಸಿಜನ್ ದುರಂತ

ಬೆಂಗಳೂರು: ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಆಕ್ಸಿಜನ್ ಲಭ್ಯವಾಗದೇ ಮೃತಪಟ್ಟ 24 ಕೋವಿಡ್ ಸೋಂಕಿತರ ಕುಟುಂಬಗಳಿಗೆ, ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲು ತೀರ್ಮಾನಿಸಿರುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್‌ ಗೆ ಮಾಹಿತಿ ನೀಡಿದೆ.

ಓದಿ: ಚಾಮರಾಜನಗರ ದುರ್ಘಟನೆ: ಮೃತರ ಕುಟುಂಬಕ್ಕೆ ಪರಿಹಾರ ಸೇರಿ ಸಮಿತಿಯಿಂದ ಹಲವು ಶಿಫಾರಸು

ಕೋವಿಡ್ ನಿರ್ವಹಣೆ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು‌. ಈ ವೇಳೆ, ಸರ್ಕಾರದ ಪರ ಹಾಜರಿದ್ದ ಅಡ್ಜೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಮಾಹಿತಿ ನೀಡಿ, ಚಾಮರಾಜನಗರ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟ ಎಲ್ಲ 24 ಸೋಂಕಿತರ ಕುಟುಂಬಗಳಿಗೂ ಸರ್ಕಾರ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲು ನಿರ್ಧರಿಸಿದೆ ಎಂದು ತಿಳಿಸಿದರು.

ಅರ್ಜಿದಾರರ ಪರ ವಕೀಲರು ವಾದಿಸಿ, ನಿವೃತ್ತ ನ್ಯಾಯಮೂರ್ತಿ ಎ.ಎನ್. ವೇಣುಗೋಪಾಲಗೌಡ ಅವರ ನೇತೃತ್ವದ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸಮಿತಿ ನೀಡಿರುವ ವರದಿಯಲ್ಲಿ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದವರ ಸಂಖ್ಯೆ ಒಟ್ಟು 37 ಜನರೆಂದು ಹೇಳಲಾಗಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಸದ್ಯ ಸರ್ಕಾರ ಘೋಷಿಸಿರುವ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ತಕ್ಷಣವೇ ಮೃತರ ಕುಟುಂಬಗಳಿಗೆ ವಿತರಿಸಲಿ ಎಂದು ಸೂಚಿಸಿತು.

ದುರಂತದಲ್ಲಿ 24 ಜನ ಮೃತಪಟ್ಟಿದ್ದಾರೋ ಅಥವಾ ಸಾವಿನ ಸಂಖ್ಯೆ ಅದಕ್ಕಿಂತ ಹೆಚ್ಚಿದೆಯೋ ಎಂಬ ಬಗ್ಗೆ ಹಾಗೂ ಮೃತರ ಕುಟುಂಬಗಳಿಗೆ ಸರ್ಕಾರ ಘೋಷಿಸಿರುವ ಪರಿಹಾರ ಸಮರ್ಪಕವಾಗಿದೆಯೇ ಎಂಬ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧರಿಸೋಣ ಎಂದು ತಿಳಿಸಿ, ವಿಚಾರಣೆಯನ್ನು ಮೇ. 25ಕ್ಕೆ ಮುಂದೂಡಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.