ETV Bharat / city

ಪಿಎಸ್‌ಐ ಪರೀಕ್ಷೆ ಅಕ್ರಮ: ಕಾಂಗ್ರೆಸ್​ ಹಿಟ್ ಆ್ಯಂಡ್ ರನ್ ಮಾಡ್ತಿದೆ ಎಂದ ಸಿಎಂ

author img

By

Published : May 5, 2022, 12:04 PM IST

Basavaraj Bommai
ಬಸವರಾಜ ಬೊಮ್ಮಾಯಿ

ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಯಾವ ಯಾವ ದೂರುಗಳು ಬರುತ್ತವೆಯೋ?, ಯಾರು ಕೊಡುತ್ತಾರೋ ಅವೆಲ್ಲವನ್ನೂ ಪರಿಗಣಿಸುತ್ತೇವೆ. ಕೊಟ್ಟಿರುವ ದಾಖಲೆಗಳನ್ನು ಪರಿಶೀಲನೆ ಮಾಡುತ್ತೇವೆ. ಸಚಿವ ಅಶ್ವತ್ಥ್​ ನಾರಾಯಣ್ ಬಗ್ಗೆ ಕಾಂಗ್ರೆಸ್​ನವರು ಆಧಾರ ರಹಿತವಾದ ಆರೋಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಸಚಿವ ಅಶ್ವತ್ಥ ನಾರಾಯಣ್ ವಿರುದ್ಧ ಕಾಂಗ್ರೆಸ್ ನಿರಾಧಾರ ಆರೋಪ ಮಾಡಿದ್ದು, ತಮ್ಮ ಪಕ್ಷದವರ ಬಣ್ಣ ಬಯಲಾಗಲಿದೆ ಎನ್ನುವ ಕಾರಣಕ್ಕೆ ಕಾಂಗ್ರೆಸ್​ ಹಿಟ್ ಆ್ಯಂಡ್ ರನ್ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.

ಆರ್‌ ಟಿ ನಗರದ ಖಾಸಗಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಯಾವ ಯಾವ ದೂರುಗಳು ಬರುತ್ತವೆಯೋ?, ಯಾರು ಕೊಡುತ್ತಾರೋ ಅವೆಲ್ಲವನ್ನೂ ಪರಿಗಣಿಸುತ್ತೇವೆ. ಕೊಟ್ಟಿರುವ ದಾಖಲೆಗಳನ್ನು ಪರಿಶೀಲನೆ ಮಾಡುತ್ತೇವೆ. ಅದರ ತನಿಖೆಯನ್ನೂ ಮಾಡಿಸುತ್ತೇವೆ. ಅಕ್ರಮದಲ್ಲಿ ಸಹಕಾರ, ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದರೆ ಅಂತವರ ವಿರುದ್ಧ ಪ್ರಕರಣ ದಾಖಲು ಮಾಡುತ್ತೇವೆ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ನಾವು ಈ ಪ್ರಕರಣದ ತನಿಖೆ ವಿಚಾರದಲ್ಲಿ ಮುಕ್ತವಾಗಿದ್ದೇವೆ. ನಿಷ್ಪಕ್ಷಪಾತವಾಗಿ ನಿಷ್ಟುರವಾಗಿ ತನಿಖೆಯಾಗಬೇಕು ಎಂದು ಸೂಚಿಸಿದ್ದೇವೆ. ಹಲವಾರು ಅಧಿಕಾರಿಗಳ ವಿರುದ್ಧ ಕಾರ್ಯಾಚರಣೆ ಮಾಡುತ್ತಿರುವುದೇ ಇದಕ್ಕೆ ಸಾಕ್ಷಿ. ಕಲಬುರಗಿಯ ದಿವ್ಯ ಹಾಗರಗಿ ಮಾತ್ರವಲ್ಲ, ಇನ್ನೂ ಹಲವರಿದ್ದಾರೆ. ಎಲ್ಲರನ್ನೂ ಬಂಧಿಸುತ್ತೇವೆ ಎಂದು ಸಿಎಂ ಖಡಕ್​ ಸಂದೇಶ ರವಾನಿಸಿದರು.

ಸಚಿವ ಅಶ್ವತ್ಥ್​ ನಾರಾಯಣ್ ಬಗ್ಗೆ ಕಾಂಗ್ರೆಸ್​ನವರು ಆಧಾರ ರಹಿತವಾದ ಆರೋಪ ಮಾಡುತ್ತಿದ್ದಾರೆ. ಜವಾಬ್ದಾರಿಯುತ ಪ್ರತಿ ಪಕ್ಷವದರು ಬೇರೆಯವರ ಮೇಲೆ ಆರೋಪ ಮಾಡುವಾಗ ಸಾಕ್ಷಿ ಇರಬೇಕು ಎನ್ನುವುದು ಇವರಿಗೆ ತಿಳಿದಿಲ್ಲ. ಇವರು ಹಿಟ್-ಆ್ಯಂಡ್-ರನ್ ಮಾಡಲು ಹೊರಟಿದ್ದಾರೆ. ಇದು ನಡೆಯುವುದಿಲ್ಲ, ಅವರ ಕಾಲದಲ್ಲಿ ಸಾಕಷ್ಟು ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದವು. ಹಲವಾರು ಬಾರಿ ಪಿಎಸ್‌ಐ, ಪಿಯುಸಿ ಎಲ್ಲಾ ಪ್ರಶ್ನೆ ಪತ್ರಿಕೆ ಹೊರಗೆ ಬಂದಿದ್ದವು. ಆಗ ಅವರು ಏನೂ ಕ್ರಮ ಕೈಗೊಂಡಿರಲಿಲ್ಲ. ಈಗ ನಾವು ಕ್ರಮ ಕೈಗೊಳ್ಳುತ್ತಿದ್ದೇವೆ. ಬಂಧಿತರಲ್ಲಿ ಕೆಲವರು ಅವರ ಪಕ್ಷದವರು. ಅವರ ಕಡೆಯವರು ಬಂಧನಕ್ಕೆ ಒಳಗಾಗಿದ್ದಾರೆ, ಅವರ ಮುಖಾಂತರ ಇವರ ಬಣ್ಣ ಬಯಲಾಗಲಿದೆ ಎಂದು ಈ ರೀತಿ ಆರೋಪ ಮಾಡುತ್ತಿದ್ದಾರೆ. ಜನ ಇದನ್ನೆಲ್ಲ ಒಪ್ಪುವುದಿಲ್ಲ, ಅವರ ಆರೋಪಕ್ಕೆ ಯಾವುದೇ ಸಾಕ್ಷ್ಯಾಧಾರವಿಲ್ಲ. ಹಾಗಾಗಿ, ಅವರ ಮಾತಿಗೆ ಕಿಂಚಿತ್ತು ಬೆಲೆ ಇಲ್ಲ ಎಂದು ಕಾಂಗ್ರೆಸ್ ಆರೋಪಕ್ಕೆ ಸಿಎಂ ತಿರುಗೇಟು ನೀಡಿದರು.

ಇದನ್ನೂ ಓದಿ: ಪಿಎಸ್‌ಐ ಅಕ್ರಮ: ಡಿವೈಎಸ್​ಪಿ ವಿಚಾರಣೆ, ಮತ್ತೊಬ್ಬ ಕಾನ್ಸ್​ಟೇಬಲ್ ಬಂಧನ

ಛೋಟಾ ಪಾಕಿಸ್ತಾನ ಘೋಷಣೆ ಬಗ್ಗೆ ಎಸ್​ಪಿ ಜೊತೆ ಮಾತುಕತೆ: ನಂಜನಗೂಡಿನ ಕವಲಂದೆಯಲ್ಲಿ ಛೋಟಾ ಪಾಕಿಸ್ತಾನ ಘೋಷಣೆ ಕೂಗಿದ ಪ್ರಕರಣದ ಕುರಿತು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜತೆ ಮಾತುಕತೆ ನಡೆಸುತ್ತೇನೆ. ಅದರ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ತಿಳಿಸಿದರು.

ರಾಗಿ ಖರೀದಿಗೆ ನೋಂದಣಿ: ನಾಳೆ ರಾಗಿ ಖರೀದಿಗೆ ನೋಂದಣಿ ಪ್ರಕ್ರಿಯೆ ಆರಂಭಿಸಲು ಆದೇಶ ಕೊಟ್ಟಿದ್ದೇನೆ. ಎರಡು ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿಯಾಗಿ ರಾಗಿ ಖರೀದಿ ಮಾಡಲು ರಾಜ್ಯದ ಪ್ರಮುಖ ರಾಗಿ ಬೆಳೆಯುವ ಜಿಲ್ಲೆಗಳಲ್ಲಿ ಖರೀದಿಗೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ನಂತರ ಖರೀದಿ ಪ್ರಕ್ರಿಯೆ ಮಾಡಲಾಗುತ್ತದೆ ಎಂದು ಹೇಳಿದರು.

ಬಜೆಟ್ ಅನುಷ್ಠಾನ ಸಭೆ: ಬಜೆಟ್ ಅನುಷ್ಠಾನದ ಸಭೆಗಳನ್ನು ಮುಂದುವರಿಸಿದ್ದೇನೆ. ಹಲವಾರು ಸಲಹೆ-ಸೂಚನೆ ನೀಡಿ ಕಾಲಮಿತಿ ಕೊಟ್ಟಿದ್ದೇನೆ. ಕಟ್ಟುನಿಟ್ಟಾಗಿ ಬಜೆಟ್ ಅನುಷ್ಠಾನಕ್ಕೆ ತರಲು ಸೂಚನೆ ಕೊಟ್ಟಿರುವುದಾಗಿ ಸಿಎಂ ಮಾಹಿತಿ ನೀಡಿದರು.

ಸಿಎಂ ಭೇಟಿ ವೇಳೆ ಕುಸಿದು ಬಿದ್ದ ಮಹಿಳೆ: ಸಮಸ್ಯೆ ಹೇಳಿಕೊಳ್ಳಲು ಆಗಮಿಸಿದ್ದ ತುಮಕೂರು ಜಿಲ್ಲೆ ಗುಬ್ಬಿ ಮೂಲದ ಮಹಿಳೆ ಸಿಎಂ ನಿವಾಸದ ಎದುರು ಕುಸಿದು ಬಿದ್ದ ಘಟನೆ ನಡೆಯಿತು. ಬೆಳಗ್ಗೆಯಿಂದಲೂ ಸಿಎಂ ನಿವಾಸದ ಬಳಿ ಕಾಯುತ್ತಿದ್ದ ಮಹಿಳೆ ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಂತೆ ಸಿಎಂ ನೀಡಿದ ಸೂಚನೆ ಮೇರೆಗೆ ಆ್ಯಂಬುಲೆನ್ಸ್ ಮೂಲಕ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಇದನ್ನೂ ಓದಿ: ಮೇಲ್ಮನೆಯಲ್ಲೂ ‘ಆಪರೇಷನ್ ಕಮಲ’: ಬಿಜೆಪಿ ತೆಕ್ಕೆಗೆ ಸಭಾಪತಿ ಹೊರಟ್ಟಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.