ಮೈಸೂರು ಸಾಮೂಹಿಕ ಅತ್ಯಾಚಾರ ಕೇಸ್: ಡಿಜಿಪಿಗೆ ತನಿಖೆ ಮೇಲುಸ್ತುವಾರಿ ವಹಿಸಿದ ಸಿಎಂ

author img

By

Published : Aug 27, 2021, 12:04 PM IST

CM basavaraja Bommai

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ಪೊಲೀಸ್ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ತನಿಖೆಯ ಮೇಲುಸ್ತುವಾರಿಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ತಿಳಿಸಿದ್ದಾರೆ.

ಬೆಂಗಳೂರು: ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಯ ಮೇಲುಸ್ತುವಾರಿಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ವಹಿಸಲಾಗಿದ್ದು, ತ್ವರಿತವಾಗಿ ಪ್ರಕರಣ ಇತ್ಯರ್ಥಪಡಿಸಬೇಕೆಂದು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ತಿಳಿಸಿದರು.

ಆರ್.ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ಪೊಲೀಸ್ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಘಟನೆ ಕುರಿತು ಎಲ್ಲಾ ವಿವರಗಳನ್ನು ಪಡೆದುಕೊಂಡು ತನಿಖೆ ಮುಂದುವರೆಸಲಿದ್ದಾರೆ. ಸದ್ಯಕ್ಕೆ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ ಎಂದು ಇನ್ನೂ ನನಗೆ ಮಾಹಿತಿ ನೀಡಿಲ್ಲ, ನನಗೆ ನೇರವಾಗಿ ವರದಿ ನೀಡಿ ಎಂದು ಸೂಚನೆ ನೀಡಿದ್ದೇನೆ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ

ಈಗಾಗಲೇ ರೇಪ್ ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ. ಡಿಜಿಪಿ ಇಂದು ಮೈಸೂರಿಗೆ ತೆರಳಲಿದ್ದಾರೆ. ಖುದ್ದು ಅವರೇ ಮೇಲುಸ್ತುವಾರಿ ನೋಡಿಕೊಳ್ಳುವಂತೆ ಸೂಚನೆ ನೀಡಿದ್ದೇನೆ. ಅತಿ ಶೀಘ್ರದಲ್ಲಿ ಪ್ರಕರಣ ಇತ್ಯರ್ಥಪಡಿಸಬೇಕು ಎನ್ನುವ ಸೂಚನೆಯನ್ನು ನೀಡಿದ್ದೇನೆ ಎಂದರು.

ಸೆ.1 ರಿಂದ ಪ್ರತಿದಿನ 5 ಲಕ್ಷ ಲಸಿಕೆ: ನಮ್ಮ ರಾಜ್ಯಕ್ಕೆ ಕೊರೊನಾ ಲಸಿಕೆ ಹೆಚ್ಚಿನ ಪ್ರಮಾಣದಲ್ಲಿ ತರುವುದು ದೆಹಲಿ ಪ್ರವಾಸದ ಮುಖ್ಯ ಕಾರಣವಾಗಿತ್ತು. ಅದಕ್ಕಾಗಿ ಕೇಂದ್ರ ಆರೋಗ್ಯ ಸಚಿವರ ಬಳಿ ಚರ್ಚೆ ಮಾಡಿ ಸೆಪ್ಟೆಂಬರ್ ತಿಂಗಳಿನಿಂದ ಪ್ರತಿದಿನ ಐದು ಲಕ್ಷ ವ್ಯಾಕ್ಸಿನೇಷನ್ ಮಾಡುವ ಕಾರ್ಯಕ್ರಮ ಇರಿಸಿಕೊಂಡಿದ್ದೇವೆ. ಅದಕ್ಕೆ ನಿಮ್ಮ ಸಂಪೂರ್ಣವಾದ ಬೆಂಬಲ ಬೇಕು ಎಂದು ಕೇಳಿದ್ದೇವೆ. ಅದಕ್ಕೆ ಸಚಿವರು ಸಂಪೂರ್ಣ ಬೆಂಬಲ ನೀಡಿದ್ದು, ಅಗತ್ಯ ದಾಸ್ತಾನು ಕಳುಹಿಸಿಕೊಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ. ಹಾಗಾಗಿ ನಮ್ಮ ಉದ್ದೇಶದಂತೆ ಪ್ರತಿದಿನ ಐದು ಲಕ್ಷ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳುತ್ತೇವೆ. ಒಂದನೇ ತಾರೀಕಿನಿಂದ ಪ್ರತಿದಿನ 5 ಲಕ್ಷ ವ್ಯಾಕ್ಸಿನೇಷನ್‌ ಮಾಡಲಿದ್ದೇವೆ ಎಂದು ಸಿಎಂ ಮಾಹಿತಿ ನೀಡಿದರು.

ಜಲ ವ್ಯಾಜ್ಯ ಸ್ಪೀಡ್‌ಅಪ್: ಜಲಶಕ್ತಿ ಮಂತ್ರಿಗಳ ಜೊತೆ ಸುದೀರ್ಘವಾಗಿ ಚರ್ಚೆ ಮಾಡಿದ್ದೇನೆ. ಕೃಷ್ಣಾ ಮೇಲ್ದಂಡೆ, ಮಹದಾಯಿ, ಮೇಕೆದಾಟು, ಭದ್ರಾ ಮೇಲ್ದಂಡೆ, ಎತ್ತಿನಹೊಳೆ ಎಲ್ಲಾ ಯೋಜನೆಗಳ ಬಗ್ಗೆ ಸುದೀರ್ಘವಾದ ಚರ್ಚೆ ನಡೆಸಿದ್ದೇನೆ. ಅದೇ ರೀತಿ ಸುಪ್ರೀಂಕೋರ್ಟ್​ನಲ್ಲಿರುವ ನಮ್ಮ ಜಲವಿವಾದಗಳ ಬಗ್ಗೆ ನಮ್ಮ ಹಿರಿಯ ವಕೀಲರ ತಂಡದ ಜೊತೆ ಚರ್ಚೆ ಮಾಡಿದ್ದೇನೆ. ತ್ವರಿತಗತಿಯಲ್ಲಿ ಪ್ರಕರಣಗಳನ್ನು ಕೊಂಡೊಯ್ಯಬೇಕು ಎನ್ನುವ ಸೂಚನೆ ನೀಡಿದ್ದೇನೆ ಎಂದರು.

ಜಿಎಸ್​ಟಿ ಪರಿಹಾರ ವಿಸ್ತರಣೆಗೆ ಮನವಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ್ದೇನೆ. ನಮ್ಮ ಜಿಎಸ್​ಟಿ ಪರಿಹಾರನ್ನು ಮತ್ತೆ ಮುಂದುವರೆಸಬೇಕು ಎಂದು ಮನವಿ ಮಾಡಿದ್ದೇನೆ. ಜಿಎಸ್​ಟಿ ಕೌನ್ಸಿಲ್​ನಲ್ಲಿ ಇದರ ಬಗ್ಗೆ ನಿರ್ಣಯ ಮಾಡೋಣ ಎಂದು ಭರವಸೆ ನೀಡಿದ್ದಾರೆ ಎಂದರು.

ಮೆಗಾ ಜವಳಿ ಪಾರ್ಕ್: ಜವಳಿ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದ್ದೇನೆ. ರಾಜ್ಯದಲ್ಲಿ ಮೆಗಾ ಜವಳಿ ಪಾರ್ಕ್ ನಿರ್ಮಾಣ ಮಾಡುವ ಸಲುವಾಗಿ ಪ್ರಸ್ತಾವನೆ ಸಿದ್ಧಪಡಿಸುತ್ತಿದ್ದೇವೆ. ಅದನ್ನು ಕಳುಹಿಸಿಕೊಡುತ್ತೇವೆ ಎಂದಿದ್ದೇನೆ. ಅದಕ್ಕೆ ಎಲ್ಲಾ ರೀತಿಯ ಮಂಜೂರಾತಿ ಮತ್ತು ಕೇಂದ್ರ ಸರ್ಕಾರದಿಂದ ಸಬ್ಸಿಡಿ ಇತ್ಯಾದಿಗಳನ್ನು ಕಲ್ಪಿಸಿಕೊಡುವ ವ್ಯವಸ್ಥೆ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಜೊತೆಗೆ ಎಲ್ಲಾ ಪ್ರಮುಖ ಅಂತಾರಾಷ್ಟ್ರೀಯ, ರಾಷ್ಟ್ರೀಯ ಕಂಪನಿಗಳ ಜೊತೆಯಲ್ಲಿ ನಮಗೆ ಟೈಅಪ್ ಮಾಡಿಕೊಡುವುದಾಗಿ ಭರವಸೆ ನೀಡಿದ್ದಾರೆ. ದೊಡ್ಡ ಪ್ರಮಾಣದ ಉದ್ಯೋಗ ಕೊಡುವ ದೊಡ್ಡ ಕಾರ್ಯಕ್ರಮ ಇದಾಗಿದೆ. ಇದನ್ನು ಮಾಡಿದರೆ ನಮ್ಮ ರಾಜ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸಿಗಲಿದೆ. ವಿಶೇಷವಾಗಿ ಮಹಿಳೆಯರಿಗೆ ಉದ್ಯೋಗ ಸಿಗಲಿದೆ ಎಂದರು.

ಕಾಬೂಲ್​ನಲ್ಲಿರುವ ಕನ್ನಡಿಗರ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ವಿವರಗಳು ಬಂದ ನಂತರ ಮಾಹಿತಿ ನೀಡಲಾಗುತ್ತದೆ ಎಂದರು.

ಗಣೇಶ ಹಬ್ಬಕ್ಕೆ ಅನುಮತಿ: ಆಗಸ್ಟ್ 30 ರಂದು ಕೊರೊನಾ ಮೂರನೇ ಅಲೆ ಕುರಿತು ತಜ್ಞರ ಸಮಿತಿ ಸಭೆ ಇದೆ. ಗಣೇಶ ಚತುರ್ಥಿ ಸೇರಿದಂತೆ ಹಬ್ಬಗಳಿಗೆ ಅವಕಾಶ ಕೊಡುವ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದರು.

ಸಂಪುಟ ರಚನೆ ಚರ್ಚೆ ಆಗಿಲ್ಲ: ನಮ್ಮ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ. ಮುಂದೆ ದೆಹಲಿಗೆ ಹೋದಾಗ ಸಚಿವ ಸಂಪುಟ ವಿಸ್ತರಣೆ ವಿಚಾರಗಳನ್ನು ಪ್ರಸ್ತಾಪ ಮಾಡುತ್ತೇನೆ ಎಂದು ಸಿಎಂ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.