ಬೆಂಗಳೂರು: ಚುನಾವಣೆ ವೇಳೆ ಆಸ್ತಿ ವಿವರ ಮುಚ್ಚಿಟ್ಟ ಆರೋಪ ಎದುರಿಸುತ್ತಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್ ರುಕ್ಮಿಣಿ ಮಾದೇಗೌಡ ಅವರ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿ ಆದೇಶಿಸಿದೆ.
ಆಸ್ತಿ ವಿವರ ಮುಚ್ಚಿಟ್ಟ ಆರೋಪದಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಮೈಸೂರು ಪ್ರಧಾನ ಜಿಲ್ಲಾ ನ್ಯಾಯಾಲಯ ಈ ಮೊದಲು ರುಕ್ಮಿಣಿ ಆಯ್ಕೆಯನ್ನು ಅಸಿಂಧುಗೊಳಿಸಿ ಆದೇಶ ಹೊರಡಿಸಿತ್ತು. ಈ ಆದೇಶ ಪ್ರಶ್ನಿಸಿ ರುಕ್ಮಿಣಿ ಮಾದೇಗೌಡ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎನ್ ಎಸ್ ಸಂಜಯ್ ಗೌಡ ಅವರಿದ್ದ ಏಕಸದಸ್ಯ ಪೀಠ, ರುಕ್ಮಿಣಿ ಮಾದೇಗೌಡ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಆದೇಶಿಸಿದೆ. ಅಲ್ಲದೇ ಪರಾಜಿತ ಅಭ್ಯರ್ಥಿ ರಜನಿ ಅಣ್ಣಯ್ಯ ಅವರನ್ನು ವಿಜೇತ ಎಂದು ಘೋಷಿಸಿದ್ದ ಜಿಲ್ಲಾ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿರುವ ಪೀಠ ಪಾಲಿಕೆ ಸದಸ್ಯ ಸ್ಥಾನಕ್ಕೆ ಹೊಸದಾಗಿ ಚುನಾವಣೆ ನಡೆಸುವಂತೆ ನಿರ್ದೇಶಿಸಿದೆ. ರುಕ್ಮಿಣಿ ಮಾದೇಗೌಡ ಕಳೆದ ಫೆ.24ರಂದು ಮೈಸೂರು ಮೇಯರ್ ಆಗಿ ಆಯ್ಕೆ ಆಗಿದ್ದರು.
ಪ್ರಕರಣದ ಹಿನ್ನೆಲೆ :
ಮೈಸೂರು ಪಾಲಿಕೆ ಚುನಾವಣೆಗೆ ಸ್ಪರ್ಧಿಸುವ ವೇಳೆ ರುಕ್ಮಿಣಿ ಮಾದೇಗೌಡ ತಮ್ಮ ಆಸ್ತಿ ವಿವರ ಬಚ್ಚಿಟ್ಟಿದ್ದಾರೆಂದು ಆರೋಪಿಸಿ ಪರಾಜಿತ ಅಭ್ಯರ್ಥಿ ರಜಿನಿ ಅಣ್ಣಯ್ಯ ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, ರುಕ್ಮಿಣಿ ಅವರ ಪಾಲಿಕೆ ಸದಸ್ಯತ್ವವನ್ನು ರದ್ದುಪಡಿಸಿ, ರಜನಿ ಅಣ್ಣಯ್ಯ ಅವರನ್ನು ವಿಜೇತರೆಂದು ಘೋಷಿಸಿ 2020ರ ಡಿ.14ರಂದು ಆದೇಶ ಹೊರಡಿಸಿತ್ತು. ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ರುಕ್ಮಿಣಿ ಡಿ.23ರಂದು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಮೈಸೂರಿನ ಯೆರಗನಹಳ್ಳಿ ವಾರ್ಡ್ಗೆ ನಡೆದ ಚುನಾವಣೆಯಲ್ಲಿ ರುಕ್ಮಿಣಿ ಮಾದೇಗೌಡ ಮತ್ತು ರಜನಿ ಅಣ್ಣಯ್ಯ ಸ್ಪರ್ಧಿಸಿದ್ದರು.