ಬೆಂಗಳೂರು: ಹಿರಿಯ ನಾಗರಿಕರ ಕಲ್ಯಾಣ ಮತ್ತು ನಿರ್ವಹಣಾ ಕಾಯ್ದೆ-2007ನ್ನು ರಾಜ್ಯದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸದ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಬೆಂಗಳೂರಿನ ಗಿರಿನಗರದಲ್ಲಿ ಖಾಸಗಿಯವರು ನಡೆಸುತ್ತಿರುವ ನವಚೇತನ ಓಲ್ಡ್ ಏಜ್ ಹೋಮ್ ನಿಂದ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಸ್ಥಳೀಯ ನಿವಾಸಿ ಪವನ್ ಕುಮಾರ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದೆ.
ಸಂಸತ್ತು ಹಿರಿಯ ನಾಗರಿಕರ ಕಷ್ಟಗಳನ್ನು ಗಮನದಲ್ಲಿಟ್ಟುಕೊಂಡು ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆಯನ್ನು ರೂಪಿಸಿದೆ. ಆದರೆ, ರಾಜ್ಯ ಸರ್ಕಾರ ಆ ಕಾಯ್ದೆಗೆ ಅನುಗುಣವಾಗಿ ವೃದ್ಧರ ಆರೈಕೆ ಕೇಂದ್ರಗಳನ್ನು ತೆರೆದಿಲ್ಲದಿರುವುದು ಬೇಸರದ ವಿಚಾರ. ಜಿಲ್ಲಾವಾರು ವೃದ್ಧರ ಆರೈಕೆ ಕೇಂದ್ರಗಳನ್ನು ಸ್ಥಾಪಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಪೀಠ ತಿಳಿಸಿದೆ.
ಅಲ್ಲದೇ, ಹಿರಿಯ ನಾಗರಿಕರ ಕಲ್ಯಾಣ ರಾಜ್ಯ ಸರ್ಕಾರದ ಕರ್ತವ್ಯವಾಗಿದೆ, ಅವರ ಯೋಗಕ್ಷೇಮ ನೋಡಿಕೊಳ್ಳುವುದು ಕಡ್ಡಾಯವಾಗಿದ್ದರೂ ಅದನ್ನು ಪಾಲನೆ ಮಾಡಿಲ್ಲ. ಪ್ರತಿಯೊಂದು ಜಿಲ್ಲೆಯಲ್ಲೂ ಸುಮಾರು 150 ಹಿರಿಯ ನಾಗರಿಕರ ಕಲ್ಯಾಣಕ್ಕೆ ಅಗತ್ಯವಿರುವ ಕನಿಷ್ಠ ಒಂದಾದರೂ ವೃದ್ಧರ ಆರೈಕೆ ಕೇಂದ್ರಗಳನ್ನು ಸ್ಥಾಪಿಸಲೇಬೇಕು. ಈ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲೂ ಅಗತ್ಯಾನುಸಾರ ವೃದ್ಧರ ಆರೈಕೆ ಕೇಂದ್ರಗಳನ್ನು ತೆರೆಯುವ ಬಗ್ಗೆ ಮಾಹಿತಿ ನೀಡುವಂತೆ ಸರ್ಕಾರಕ್ಕೆ ನಿರ್ದೇಶಿಸಿ, ವಿಚಾರಣೆಯನ್ನು ಜುಲೈ 6ಕ್ಕೆ ಮುಂದೂಡಿದೆ.