ದೇವೇಗೌಡರ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ; ಸೂರಜ್‌ ರೇವಣ್ಣಗೆ ಪರಿಷತ್‌ ಟಿಕೆಟ್‌

author img

By

Published : Nov 18, 2021, 11:40 PM IST

HD Revanna son suraj revanna got ticket for hassan mlc election

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ 25 ಸ್ಥಾನಗಳ ಪೈಕಿ 8 ರಲ್ಲಿ ಸ್ಪರ್ಧಿಸಲು ಜೆಡಿಎಸ್‌ ನಿರ್ಧಾರ ಮಾಡಿದ್ದು, ಹಾಸನದಿಂದ ಹೆಚ್.ಡಿ. ರೇವಣ್ಣ ಅವರ ಪುತ್ರ ಡಾ.ಸೂರಜ್ ರೇವಣ್ಣ, ಮಂಡ್ಯದಿಂದ ಹಾಲಿ ವಿಧಾನ ಪರಿಷತ್ ಸದಸ್ಯ ಅಪ್ಪಾಜಿಗೌಡ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಡಿಸೆಂಬರ್‌ 10 ರಂದು ಪರಿಷತ್‌ ಚುನಾವಣೆ ನಡೆಯಲಿದೆ.

ಬೆಂಗಳೂರು/ಹಾಸನ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಹಾಸನದಲ್ಲಿ ಜೆಡಿಎಸ್‌ನಿಂದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಪುತ್ರ ಡಾ.ಸೂರಜ್ ರೇವಣ್ಣ, ಮಂಡ್ಯದಿಂದ ಹಾಲಿ ವಿಧಾನ ಪರಿಷತ್ ಸದಸ್ಯ ಅಪ್ಪಾಜಿಗೌಡ ಅವರಿಗೆ ಟಿಕೆಟ್ ನೀಡಲಾಗಿದೆ.

ಇಂದು ನಡೆದ ಹಾಸನ ಜಿಲ್ಲಾ ಜೆಡಿಎಸ್ ಸಮಾವೇಶದ ಬಳಿಕ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಎಂಎಲ್‌ಸಿ ಅಭ್ಯರ್ಥಿ ಯಾರು ಎಂಬುದನ್ನು ಘೋಷಣೆ ಮಾಡಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಸೂರಜ್ ರೇವಣ್ಣ ಕೊನೆಗೂ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ವಿಧಾನಪರಿಷತ್ ಚುನಾವಣೆಯ ಕಣಕ್ಕೆ ಧುಮುಕಿದ್ದಾರೆ. ಇಂದು ಜೆಡಿಎಸ್ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಎಲ್ಲಾ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರ ಒಮ್ಮತದ ಅಭಿಪ್ರಾಯದ ಮೇರೆಗೆ ಅಭ್ಯರ್ಥಿ ಘೋಷಣೆಯಾಗಿದೆ. ಇನ್ನು ನಾಳೆ ಮಧ್ಯಾಹ್ನ 12.15ರ ನಂತರ ನಾಮಪತ್ರ ಸಲ್ಲಿಸಲಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷರು ಮಾಹಿತಿ ನೀಡಿದ್ದಾರೆ.

ದೇವೇಗೌಡರ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ
ವೃತ್ತಿಯಲ್ಲಿ ವೈದ್ಯರಾಗಿರುವ ಸೂರಜ್ ರೇವಣ್ಣ ಎಂಎಲ್‌ಸಿ ಚುನಾವಣೆ ಅಭ್ಯರ್ಥಿಯಾಗಿ ಅಧಿಕೃತವಾಗಿ ರಾಜಕೀಯ ಪ್ರವೇಶಿಸಲಿದ್ದಾರೆ. ಸೂರಜ್ ರೇವಣ್ಣ ಅವರಿಗೆ ಟಿಕೆಟ್ ನೀಡುವ ಮೂಲಕ ದೇವೇಗೌಡರ ಕುಟುಂಬದ ಮೊತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದೆ. ಇದು ಜಿಲ್ಲೆಯಲ್ಲಿ ಮತ್ತೊಮ್ಮೆ ಕುಟುಂಬ ರಾಜಕಾರಣದ ಬಗ್ಗೆ ಚರ್ಚೆಯನ್ನು ಹುಟ್ಟುಹಾಕಿದೆ.

ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರ ಕುಟುಂಬದ ಬಹುತೇಕರು ಈಗಾಗಲೇ ರಾಜಕೀಯದಲ್ಲಿ ಪ್ರಭಾವಿ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಇದೀಗ ಇದೇ ಕುಟುಂಬದ ಮತ್ತೊಂದು ಕುಡಿಗೆ ಅವಕಾಶ ನೀಡುವ ಬದಲು, ಕಾರ್ಯಕರ್ತರನ್ನು ಮೇಲೆತ್ತಲು ಪ್ರಯತ್ನಿಸಬೇಕಿತ್ತು ಎಂಬ ಮಾತುಗಳು ಕೇಳಿಬರುತ್ತಿವೆ.

ಮಾಜಿ ಪ್ರಧಾನಿ ದೇವೇಗೌಡರು ರಾಜ್ಯಸಭಾ ಸದಸ್ಯರಾದರೆ, ಮಕ್ಕಳಾದ ಹೆಚ್.ಡಿ.ರೇವಣ್ಣ, ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸೊಸೆ ಅನಿತಾ ಕುಮಾರಸ್ವಾಮಿ ಶಾಸಕರಾಗಿದ್ದಾರೆ. ಅಲ್ಲದೇ ಮೊಮ್ಮಗ ಪ್ರಜ್ವಲ್ ರೇವಣ್ಣ ಲೋಕಸಭಾ ಸದಸ್ಯರಾಗಿದ್ದು, ಮತ್ತೊಬ್ಬ ಸೊಸೆ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯರಾಗಿದ್ದು, ಕುಟಂಬದಲ್ಲಿ ಸದ್ಯ 6 ಮಂದಿ ರಾಜಕೀಯದಲ್ಲಿರುವುದು ಬಿಜೆಪಿ ಮತ್ತು ಕಾಂಗ್ರೆಸ್ ಇದನ್ನೇ ದಾಳವಾಗಿ ಬಳಸಿಕೊಂಡು ಚುನಾವಣೆ ಪ್ರಚಾರ ಮಾಡಲು ಸಜ್ಜಾಗಿದೆ.

ಸೂರಜ್ ರೇವಣ್ಣ ಅವರಿಗೆ ಟಿಕೆಟ್ ಅಂತಿಮಗೊಳ್ಳುವ ಮೊದಲು ದೇವೇಗೌಡರ ಹಿರಿಯ ಸೊಸೆ ಭವಾನಿ ರೇವಣ್ಣ ಹೆಸರು ಪ್ರಬಲವಾಗಿ ಕೇಳಿಬಂದಿತ್ತು. ಆದರೆ ಪರಿಷತ್ ಚುನಾವಣೆ ಮೂಲಕ ಸೂರಜ್ ಅವರಿಗೆ ನೆಲೆ ಕಲ್ಪಿಸಲು ದೇವೇಗೌಡರ ಕುಟುಂಬ ಅಂತಿಮ ನಿರ್ಧಾರ ತೆಗೆದುಕೊಂಡಿದೆ. ಪ್ರಸ್ತುತ ಹೆಚ್‌ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿರುವ ಸೂರಜ್ ಅವರಿಗೆ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಅಭಿಮಾನಿಗಳ ಪಡೆಯನ್ನ ನಿರ್ಮಿಸಿಕೊಂಡಿದ್ದಾರೆ.

8 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆ
ವಿಧಾನಪರಿಷತ್‌ನ 25 ಕ್ಷೇತ್ರಗಳ ಪೈಕಿ 8 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸಲು ಜೆಡಿಎಸ್ ತೀರ್ಮಾನಿಸಿದೆ. ಮೈಸೂರು, ತುಮಕೂರು, ಕೋಲಾರ ಕ್ಷೇತ್ರಗಳನ್ನು ಪ್ರತಿನಿಧಿಸಿದ್ದ ಜೆಡಿಎಸ್‍ನ ಮೂವರು ವಿಧಾನ ಪರಿಷತ್ ಸದಸ್ಯರಾದ ಸಂದೇಶ್ ನಾಗರಾಜ್, ಕಾಂತರಾಜ್, ಸಿ.ಆರ್. ಮನೋಹರ್ ಅವರು ಪಕ್ಷ ತೊರೆಯುತ್ತಿರುವ ಹಿನ್ನೆಲೆಯಲ್ಲಿ ಬದಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.

ತುಮಕೂರಿನಿಂದ ಅನಿಲ್ ಎಂಬುವರಿಗೆ ಟಿಕೆಟ್ ನೀಡುವ ಸಾಧ್ಯತೆಗಳಿವೆ. ಕೋಲಾರದಿಂದ ಚಿಕ್ಕಬಳ್ಳಾಪುರ- ಕೋಲಾರ ಕ್ಷೇತ್ರಕ್ಕೆ ವಿಧಾನಪರಿಷತ್ ಸದಸ್ಯ ರಮೇಶ್‍ಗೌಡ, ಮಾಜಿ ವಿಧಾನ ಪರಿಷತ್ ಸದಸ್ಯ ಚೌಡರೆಡ್ಡಿ ತೂಪಲ್ಲಿ ಹೆಸರುಗಳು ಪ್ರಮುಖವಾಗಿ ಕೇಳಿ ಬರುತ್ತಿವೆ. ಇನ್ನು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಮಾಜಿ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಅವರ ಹೆಸರು ಕೇಳಿ ಬರುತ್ತಿದ್ದರೂ, ಇನ್ನೂ ಖಚಿತವಾಗಿಲ್ಲ.

ಉತ್ತರ ಕರ್ನಾಟಕದ ಎರಡು ಕ್ಷೇತ್ರಗಳಿಗೆ ಇಂದು ರಾತ್ರಿ ವೇಳೆಗೆ ವಿಧಾನ ಪರಿಷತ್ತಿನ ಚುನಾವಣೆಗೆ ಸ್ಪರ್ಧೆಗಿಳಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಜೆಡಿಎಸ್ ವರಿಷ್ಠರು ಅಂತಿಮಗೊಳಿಸಲಿದ್ದಾರೆ ಎಂದು ತಿಳಿದುಬಂದಿದೆ. ಜೆಡಿಎಸ್‍ ಕಚೇರಿಯಲ್ಲಿ ಕಳೆದ ಒಂದು ವಾರದಿಂದ ನಡೆದ ಜನತಾ ಸಂಗಮ ಕಾರ್ಯಗಾರದಲ್ಲೂ ಪರಿಷತ್ ಅಭ್ಯರ್ಥಿಗಳ ಕುರಿತು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಮಾಲೋಚನೆ ನಡೆಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.