ETV Bharat / city

ಉಪಚುನಾವಣೆ: ದಸರಾ ನಂತರ ಪ್ರಚಾರದ ಅಖಾಡಕ್ಕೆ JDS ದಳಪತಿಗಳು

author img

By

Published : Oct 14, 2021, 5:32 PM IST

ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಜೆಡಿಎಸ್ ಗಂಭೀರವಾಗಿ ಪರಿಗಣಿಸಿದ್ದು, ತಮ್ಮ ಅಭ್ಯರ್ಥಿಗಳ ಗೆಲುವಿಗೆ ದಳಪತಿಗಳು ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಈ ಹಿನ್ನೆಲೆ ಪಕ್ಷದ ಪರ ಪ್ರಚಾರಕ್ಕಾಗಿ 20 ಮಂದಿ ತಾರಾ ಪ್ರಚಾರಕರನ್ನು ಜೆಡಿಎಸ್ ನಿಯೋಜಿಸಿದೆ.

HD Devegowda and HD Kumaraswamy
ಹೆಚ್.ಡಿ.ದೇವೇಗೌಡ ಹಾಗು ಹೆಚ್​​.ಡಿ ಕುಮಾರಸ್ವಾಮಿ

ಬೆಂಗಳೂರು: ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಜೆಡಿಎಸ್ ದಳಪತಿಗಳು, ದಸರಾ ಹಬ್ಬದ ನಂತರ ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿಯಲಿದ್ದಾರೆ.

ಹಾನಗಲ್ ಕ್ಷೇತ್ರದಲ್ಲಿ ನಿಯಾಜ್ ಶೇಖ್ ಹಾಗೂ ಸಿಂದಗಿ ಕ್ಷೇತ್ರದಲ್ಲಿ ನಾಜೀಯಾ ಅಂಗಡಿ ಜೆಡಿಎಸ್​​ನಿಂದ ಸ್ಪರ್ಧಿಸಿದ್ದಾರೆ. ಎರಡೂ ಕ್ಷೇತ್ರಗಳನ್ನು ಜೆಡಿಎಸ್ ಗಂಭೀರವಾಗಿ ಪರಿಗಣಿಸಿದ್ದು, ತನ್ನ ಅಭ್ಯರ್ಥಿಗಳ ಗೆಲುವಿಗೆ ದಳಪತಿಗಳು ನಿರಂತರ ಪ್ರಯತ್ನ ಮಾಡುತ್ತಿದ್ದಾರೆ.

ಅ.16 ರಿಂದ ಚುನಾವಣಾ ಪ್ರಚಾರ:

ಈಗಾಗಲೇ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ, ಹೆಚ್.ಡಿ. ದೇವೇಗೌಡ ಬುಧವಾರದಿಂದಲೇ ಸಿಂದಗಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ನಾಜೀಯಾ ಅಂಗಡಿ ಅವರ ಪರವಾಗಿ ಸ್ಥಳೀಯ ಮುಖಂಡರೊಂದಿಗೆ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಅಕ್ಟೋಬರ್ 16 ರಿಂದ ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಬಹಿರಂಗ ಸಭೆ ಸೇರಿದಂತೆ ಹಲವು ಕಡೆ ಪ್ರಚಾರ ಸಭೆಗಳಲ್ಲಿ ಭಾಗವಹಿಸಿ ತಮ್ಮ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ. ಇದರ ಜತೆಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಹೆಚ್​​ಡಿಕೆ ಮಾರ್ಗದರ್ಶನ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೊದಲು ಸಿಂದಗಿ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯ ಪರ ಕುಮಾರಸ್ವಾಮಿ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ. ನಂತರ ಹಾನಗಲ್ ಕ್ಷೇತ್ರದ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

20 ಮಂದಿ ತಾರಾ ಪ್ರಚಾರಕರ ನೇಮಕ :

ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಪಕ್ಷದ ಪರ ಪ್ರಚಾರಕ್ಕಾಗಿ 20 ಮಂದಿ ತಾರಾ ಪ್ರಚಾರಕರನ್ನು ಜೆಡಿಎಸ್ ನಿಯೋಜಿಸಿದೆ. ಎರಡು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ತಾರಾ ಪ್ರಚಾರಕರಾಗಿ 20 ಮಂದಿ ನಾಯಕರು ಮತ್ತು ಮುಖಂಡರು ಪ್ರಚಾರ ನಡೆಸಲಿದ್ದಾರೆ.

ತಾರಾ ಪ್ರಚಾರಕರ ಪಟ್ಟಿ ಈ ಕೆಳಕಂಡಂತಿದೆ..

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ, ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಹ್ಮದ್ ಜಫ್ರುಲ್ಲಾ ಖಾನ್, ಮಾಜಿ ಸಚಿವರಾದ ಹೆಚ್.ಡಿ. ರೇವಣ್ಣ, ಬಂಡೆಪ್ಪ ಕಾಶೆಂಪೂರ್, ವೆಂಕಟರಾವ್ ನಾಡಗೌಡ, ಸಂಸದ ಪ್ರಜ್ವಲ್ ರೇವಣ್ಣ, ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಶಾಸಕರಾದ ಡಾ. ಕೆ. ಅನ್ನದಾನಿ, ಡಾ. ದೇವಾನಂದ್ ಚವ್ಹಾಣ್, ಬಿ.ಎಂ. ಫಾರೂಖ್, ರಾಜ ವೆಂಕಟಪ್ಪ ನಾಯಕ, ಮಾಜಿ ಶಾಸಕ ಎನ್.ಎಚ್. ಕೋನರೆಡ್ಡಿ, ಮುಖಂಡರಾದ ಬಿ.ಜಿ. ಪಾಟೀಲ್, ಮಲ್ಲಿಕಾರ್ಜುನ ಯಂಡಿಗೇರಿ, ನಾಜೀರ್ ಹುಸೇನ್ ಉಸ್ತಾದ್, ಸಯ್ಯದ್ ಮೋಹಿದ್ ಅಲ್ತಾಫ್, ರಾಜುಗೌಡ ಪಾಟೀಲ್ ಹಾಗೂ ಬಿ.ಡಿ. ಪಾಟೀಲ್ ಇಂಡಿ ಇವರನ್ನು ಚುನಾವಣಾ ತಾರಾ ಪ್ರಚಾರಕನ್ನಾಗಿ ಬಳಸಿಕೊಳ್ಳಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.