ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸೋನಿಯಾ ಗಾಂಧಿ ನಾಯಕತ್ವದ ಅನಿವಾರ್ಯತೆಯಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜ್ಯ ಕಾಂಗ್ರೆಸ್ ಸಂಪೂರ್ಣವಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಾಯಕತ್ವವನ್ನು ಒಪ್ಪಿಕೊಂಡಿದೆ. ಸೋನಿಯಾ ಗಾಂಧಿ ಹಾಗೂ ಗಾಂಧಿ ಕುಟುಂಬದ ನಾಯಕತ್ವವನ್ನು ನಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ಅತ್ಯಂತ ಕಷ್ಟದ ಸಂದರ್ಭದಲ್ಲಿ ಪಕ್ಷವನ್ನು ಉಳಿಸಿ ಬೆಳೆಸಿದ ಕೀರ್ತಿ ಸೋನಿಯಾಗಾಂಧಿ ಅವರಿಗೆ ಸಲ್ಲುತ್ತದೆ. ಪಕ್ಷಕ್ಕೆ ಅವರ ಅನಿವಾರ್ಯತೆ ಇದೆ. ನಾಯಕತ್ವ ಬದಲಾವಣೆ ಸೇರಿದಂತೆ ಪಕ್ಷಕ್ಕೆ ಸಂಬಂಧಿಸಿದ ಯಾವುದೇ ವಿಚಾರವಿರಲಿ, ಅದನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ನಿರ್ಧರಿಸಬೇಕೇ ಹೊರತು ಮಾಧ್ಯಮದ ಮುಂದೆ ತೆರಳುವುದು ಸರಿಯಲ್ಲ ಎಂದಿದ್ದಾರೆ.
ನಾಳೆ ನವದೆಹಲಿಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಪಕ್ಷವನ್ನು ಗಾಂಧಿ ಕುಟುಂಬವೇ ಮುಂದುವರಿಸಬೇಕೋ ಅಥವಾ ಬೇರೊಬ್ಬ ಕಾಂಗ್ರೆಸ್ ನಾಯಕರಿಗೆ ಪಕ್ಷದ ವಹಿಸಬೇಕೋ ಎಂಬ ಕುರಿತು ಚರ್ಚೆ ನಡೆಯಲಿದೆ. ಇಂತಹ ಮಹತ್ವದ ಘಟ್ಟದಲ್ಲಿ ರಾಜ್ಯ ಕಾಂಗ್ರೆಸ್ ಸದಾ ಗಾಂಧಿ ಕುಟುಂಬದ ಬೆಂಬಲಕ್ಕೆ ಇರಲಿದೆ ಎಂದು ಡಿಕೆಶಿ ಅಭಿಪ್ರಾಯಪಟ್ಟಿದ್ದಾರೆ.
ಈಗಾಗಲೇ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಗಾಂಧಿ ಕುಟುಂಬಕ್ಕೆ ಬೆಂಬಲ ಸೂಚಿಸಿ ಟ್ವೀಟ್ ಮಾಡಿದ್ದು, ಒಟ್ಟಾರೆ ರಾಜ್ಯ ಕಾಂಗ್ರೆಸ್ ಗಾಂಧಿ ಕುಟುಂಬದ ನಾಯಕತ್ವವನ್ನು ಬೆಂಬಲಿಸಲಿದೆ ಎಂಬುದು ಸ್ಪಷ್ಟವಾಗಿದೆ.