ETV Bharat / city

ಸಾಂಕ್ರಾಮಿಕವಲ್ಲದ ರೋಗಗಳ ಬಗ್ಗೆ ಜಾಗೃತಿ ಮೂಡಿಸಿ: ಅಧಿಕಾರಿಗಳಿಗೆ ಸಚಿವ ಸುಧಾಕರ್ ತಾಕೀತು

author img

By

Published : Aug 11, 2021, 10:15 PM IST

ಸಾಂಕ್ರಾಮಿಕವಲ್ಲದ ರೋಗಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸ ಆಗಬೇಕಿದೆ. ಇದಕ್ಕಾಗಿ ಇಲಾಖೆಯ ಮಾಹಿತಿ ವಿಭಾಗವು ಹೆಚ್ಚು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕಿದೆ. ಅದಕ್ಕೆ ಬೇಕಿರುವ ಸಂಪನ್ಮೂಲ ಹಾಗೂ ಸಿಬ್ಬಂದಿ ನಿಯೋಜನೆ ಮಾಡುವಂತೆ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಸಚಿವ ಸುಧಾಕರ್ ಸೂಚನೆ ನೀಡಿದರು.

Minister k Sudhakar
ಅಧಿಕಾರಿಗಳೊಂದಿಗೆ ಸಚಿವ ಸುಧಾಕರ್​ ಸಭೆ

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಾರಿಗೊಳಿಸುತ್ತಿರುವ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ನೀಲನಕ್ಷೆ ರೂಪಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ವಿಧಾನಸೌಧದಲ್ಲಿ ಇಂದು ಸಂಜೆ ಪ್ರಸಕ್ತ ವರ್ಷದ ಕಾರ್ಯಕ್ರಮಗಳು ಮತ್ತು ಅನುದಾನದ ಪ್ರಸ್ತಾವನೆಗಳ ಬಗ್ಗೆ ಪರಿಶೀಲನೆ ನಡೆಸಿದ ಸಚಿವ ಸುಧಾಕರ್​​, ಗ್ರಾಮೀಣ ಜನರು ಅದರಲ್ಲಿಯೂ ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಬೇಕಿದೆ. ಅದಕ್ಕಾಗಿ ಪ್ರತಿಯೊಂದು ಕಾರ್ಯಕ್ರಮಗಳನ್ನು ಜನಸ್ನೇಹಿಯಾಗಿ ಮರು ವಿನ್ಯಾಸಗೊಳಿಸುವ ಅಗತ್ಯವಿದೆ ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

Minister k Sudhakar
ಅಧಿಕಾರಿಗಳೊಂದಿಗೆ ಸಚಿವ ಸುಧಾಕರ್​ ಸಭೆ

ಸಾಂಕ್ರಾಮಿಕವಲ್ಲದ ರೋಗಗಳಿಂದ ಸಾವಿನ ಪ್ರಮಾಣ ಹೆಚ್ಚುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ರೋಗದ ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಕೆಲಸ ಆಗಬೇಕು. ಅದಕ್ಕಾಗಿ ತೃತೀಯ ಹಂತದಲ್ಲೇ ಇತರ ಚಿಕಿತ್ಸೆಗೆ ಆಗಮಿಸುವವರಿಗೆ ರಕ್ತ ಹಾಗೂ ಇತರ ಪರೀಕ್ಷೆಗಳ ಮೂಲಕ ರೋಗಗಳನ್ನು ಪತ್ತೆ ಹಚ್ಚಿ ಅದನ್ನು ದಾಖಲಿಸುವ ಕೆಲಸ ಆಗಬೇಕಿದೆ. ಅದಕ್ಕಾಗಿ ಕೆಲ ಕಾರ್ಯಕ್ರಮಗಳ ಮರು ವಿನ್ಯಾಸ ಮಾಡಿಕೊಳ್ಳುವ ಅಗತ್ಯವಿದೆ. ಕೇಂದ್ರವು ಪ್ರಸ್ತಾವನೆಗಳಿಗೆ ಅನುಮತಿ ನೀಡಿದ ಬಳಿಕ ಈ ಪ್ರಕ್ರಿಯೆ ಪೂರ್ಣಗೊಳಿಸಿ ಎಂದು ತಾಕೀತು ಮಾಡಿದರು.

ಜನರಿಗೆ ಅರಿವು ಮೂಡಿಸಲು ಸಿಬ್ಬಂದಿ ನೇಮಕ:

ಸಾಂಕ್ರಾಮಿಕವಲ್ಲದ ರೋಗಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸ ಆಗಬೇಕಿದೆ. ಇದಕ್ಕಾಗಿ ಇಲಾಖೆಯ ಮಾಹಿತಿ ವಿಭಾಗವು ಹೆಚ್ಚು ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಬೇಕಿದೆ. ಅದಕ್ಕೆ ಬೇಕಿರುವ ಸಂಪನ್ಮೂಲ ಹಾಗೂ ಸಿಬ್ಬಂದಿಯನ್ನು ನಿಯೋಜನೆ ಮಾಡುವಂತೆ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದರು.

ಜೀವ ಸಾರ್ಥಕತೆ ವಿಭಾಗವು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕಿದೆ. ಅಂಗಾಂಗ ದಾನ ಮತ್ತು ಚಿಕಿತ್ಸೆ ಎಲ್ಲ ಬಡವರಿಗೂ ಕೈಗೆಟಕುವ ರೀತಿಯಲ್ಲಿ ಜಾರಿಗೊಳ್ಳಬೇಕಿದೆ. ನೆರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಈ ಕಾರ್ಯಕ್ರಮ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಹೆಚ್ಚಿನ ಸಂಖ್ಯೆಯಲ್ಲಿ ದಾನಿಗಳು ಮುಂದೆ ಬರುವಂತೆ ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಬೇಕು. ಅದರ ಜತೆಯಲ್ಲಿ ಎಲ್ಲ ವರ್ಗದ ಬಡವರಿಗೂ ಉತ್ತಮ ಮಟ್ಟದ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕು ಎಂದರು.

ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ:

ಕಾರ್ಯಕ್ರಮಗಳ ಹೊಣೆ ಹೊತ್ತಿರುವ ಅಧಿಕಾರಿಗಳು ಹೆಚ್ಚು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಣೆ ಮಾಡಬೇಕು. ಇಲ್ಲವಾದರೆ ಸರ್ಕಾರ ವೆಚ್ಚ ಮಾಡುವ ಹಣ ಸಾರ್ಥಕ ಉದ್ದೇಶಗಳಿಗೆ ಬಳಕೆ ಆಗುವುದಿಲ್ಲ. 15ನೇ ಹಣಕಾಸು ಆಯೋಗದ ಅನುದಾನದ ವಿಷಯಕ್ಕೆ ಸಂಬಂಧಿಸಿದಂತೆ ಕೆಲ ಗೊಂದಲಗಳಿವೆ. ಕೆಲ ಕಾರ್ಯಕ್ರಮಗಳಿಗೆ ನೀಡುತ್ತಿದ್ದ ಅನುದಾನ ಕಡಿತಗೊಳಿಸಿ, ಮತ್ತೆ ಕೆಲ ಕಾರ್ಯಕ್ರಮಗಳಿಗೆ ನೀಡಿದಂತೆ ಮಾಡಲಾಗಿದೆ. ಈ ಲೋಪಗಳ ನಿವಾರಣೆಗೆ ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ ಬರೆಯುವ ಜತೆಗೆ ಖುದ್ದು ಭೇಟಿ ಮಾಡಿ ಚರ್ಚಿಸುವುದಾಗಿ ತಿಳಿಸಿದರು.

Minister k Sudhakar
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌

ಮೂರನೇ ಹಂತದ ಕೋವಿಡ್‌ ಅಲೆ ನಿರ್ವಹಣೆಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ನೀಡಲಾಗುವ ಅನುದಾನವನ್ನು ಸರಿಯಾಗಿ ಬಳಕೆ ಮಾಡಬೇಕು. ಹೆಚ್ಚುವರಿ ಲ್ಯಾಬ್‌, ಅಗತ್ಯ ಪ್ರಮಾಣದ ಔಷಧಗಳ ಖರೀದಿ, ಮಕ್ಕಳ ವಾರ್ಡ್​​​ಗಳ ನಿರ್ಮಾಣ, ಹೆಚ್ಚುವರಿ ಐಸಿಯುಗಳು, ಆಕ್ಸಿಜನ್‌ ಘಟಕಗಳ ಸ್ಥಾಪನೆ ಸಹಿತ ಇತರೆ ಮೂಲ ಸೌಲಭ್ಯಗಳನ್ನು ಒದಗಿಸಲು ಯೋಜನೆ ರೂಪಿಸಿಕೊಳ್ಳಬೇಕು. ಕೇಂದ್ರದಿಂದ ಅನುಮೋದನೆ ದೊರೆತ ಬಳಿಕ ರಾಜ್ಯದ ಯೋಜನೆಗಳ ಜತೆಗೆ ಅದನ್ನು ಹೊಂದಾಣಿಕೆ ಮಾಡಿಕೊಂಡು ಅನುಷ್ಠಾನಗೊಳಿಸಬೇಕು ಎಂದು ಸಲಹೆ ನೀಡಿದರು.

ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ಸೇವೆ:

ರಾಜ್ಯದ ಎಲ್ಲ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರತಿಯೊಂದು ಕಾರ್ಯಕ್ರಮವನ್ನೂ ಖುದ್ದು ಪರಿಶೀಲನೆ ನಡೆಸಿ ಪರಿಣಾಮಕಾರಿ ಜಾರಿಗೆ ಅನುಗುಣವಾಗಿ ಮರು ವಿನ್ಯಾಸಗೊಳಿಸಲಾಗುತ್ತಿದೆ. ವೆಚ್ಚ ಮಾಡುವ ಪ್ರತಿ ಪೈಸೆಯೂ ಅರ್ಹ ವ್ಯಕ್ತಿಗೆ ತಲುಪಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಆರೋಗ್ಯ ಸೇವೆ ಸಿಗುವಂತೆ ಮಾಡುವುದು ನಮ್ಮ ಆಶಯ. ಇದಕ್ಕಾಗಿ ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಕಚೇರಿಯಲ್ಲಿ ಪೂಜೆ: ಇದಕ್ಕೂ ಮೊದಲು ವಿಧಾನಸೌಧದ ಮೂರನೇ ಮಹಡಿಯಲ್ಲಿ ಹಂಚಿಕೆ ಆಗಿರುವ ಕಚೇರಿ ಪೂಜೆಯನ್ನು ಸಚಿವರು ನೆರವೇರಿಸಿದರು. ಇಲಾಖೆಯ ಅನೇಕ ಅಧಿಕಾರಿಗಳು ಸಿಬ್ಬಂದಿ ಈ ಸಂದರ್ಭದಲ್ಲಿ ಹಾಜರಿದ್ದರು.

Minister k Sudhakar
ಕಚೇರಿ ಪೂಜೆ ನೆರವೇರಿಸಿದ ಸಚಿವ ಸುಧಾಕರ್

ರಾಜ್ಯಪಾಲರ ಭೇಟಿ: ಬಿಆರ್‌ ಶೆಟ್ಟಿ ಒಡೆತನದ ಸಂಸ್ಥೆಗೆ ನೀಡಿರುವ ಉಡುಪಿ ಜಿಲ್ಲಾಸ್ಪತ್ರೆ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಉದ್ಭವಿಸಿರುವ ಬಿಕ್ಕಟ್ಟು ನಿವಾರಣೆ ನಿಟ್ಟಿನಲ್ಲಿ ಸಚಿವ ಸುಧಾಕರ್‌ ಅವರು ಉನ್ನತ ಮಟ್ಟದ ಸಭೆ ನಡೆಸಿದರು. ಬಳಿಕ ರಾಜಭವನಕ್ಕೆ ತೆರಳಿದ ಸಚಿವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಅರ್ಧ ಗಂಟೆ ಮಾತುಕತೆ ನಡೆಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.