ETV Bharat / city

ಸಿಎಂ ದೆಹಲಿ ಪ್ರವಾಸಕ್ಕೆ ಸಿದ್ಧತೆ: ಬೊಮ್ಮಾಯಿ ನಿವಾಸಕ್ಕೆ ಸಚಿವಾಕಾಂಕ್ಷಿಗಳ ದೌಡು

author img

By

Published : Aug 25, 2021, 10:40 AM IST

mlas-meets-cm-basavaraja-bommai-for-ministries
ಸಿಎಂ ದೆಹಲಿ ಪ್ರವಾಸಕ್ಕೆ ಸಿದ್ದತೆ: ಬೊಮ್ಮಾಯಿ ನಿವಾಸಕ್ಕೆ ಸಚಿವಾಕಾಂಕ್ಷಿಗಳ ದೌಡು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ನವದೆಹಲಿ ಪ್ರವಾಸಕ್ಕೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳು ಸಿಎಂ ನಿವಾಸಕ್ಕೆ ಭೇಟಿ ನೀಡುತ್ತಿದ್ದು, ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ‌.

ಬೆಂಗಳೂರು: ಹೈಕಮಾಂಡ್ ನಾಯಕರ ಭೇಟಿಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ನವದೆಹಲಿ ಪ್ರವಾಸಕ್ಕೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳು ಸಿಎಂ ನಿವಾಸಕ್ಕೆ ಭೇಟಿ ನೀಡುತ್ತಿದ್ದು, ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ‌.

ಇಂದು ಮಧ್ಯಾಹ್ನದ ವೇಳೆಗೆ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸಕ್ಕೆ ತೆರಳುತ್ತಿದ್ದು, ಅದಕ್ಕೂ ಮೊದಲೇ ಸಚಿವಾಕಾಂಕ್ಷಿಗಳು ಮುಖ್ಯಮಂತ್ರಿಗಳ ಭೇಟಿ ಮಾಡುತ್ತಿದ್ದಾರೆ. ಆರ್‌ಟಿ ನಗರದಲ್ಲಿರುವ ಸಿಎಂ ಅವರ ಖಾಸಗಿ ನಿವಾಸಕ್ಕೆ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ರಾಜುಗೌಡ ಆಗಮಿಸಿದರು. ಸಿಎಂ ಜೊತೆ ಕೆಲಕಾಲ ಮಾತುಕತೆ ನಡೆಸಿದರು. ಆನಂದ್ ಸಿಂಗ್ ಮುನಿಸು ಶಮನಗೊಳಿಸುವ ವೇಳೆ ಸಿಎಂಗೆ ಸಾತ್ ನೀಡಿ ಸಹಕರಿಸಿದ್ದ ರಾಜೂಗೌಡ ಸಚಿವ ಸ್ಥಾನದ ಕುರಿತು ಹೈಕಮಾಂಡ್ ಜೊತೆ ಮಾತುಕತೆ ನಡೆಸಿ ಸಂಪುಟದಲ್ಲಿ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

ರಾಜೂಗೌಡ ಸಿಎಂ ನಿವಾಸದಿಂದ ಹೊರ ಹೋಗುತ್ತಿದ್ದಂತೆ ಮಾಜಿ ಸಚಿವ ಆರ್.ಶಂಕರ್ ಕೂಡ ಆಗಮಿಸಿದರು. ಬಿಜೆಪಿ ಸರ್ಕಾರ ರಚನೆಗೆ ತಮ್ಮ ಕೊಡುಗೆ ಇರುವುದನ್ನು ನೆನಪು ಮಾಡಿದರು. ಬಿಎಸ್ವೈ ಸಂಪುಟದಲ್ಲಿ ಅವಕಾಶ ನೀಡಿ ಕೊಟ್ಟ ಮಾತು ಉಳಿಸಿಕೊಳ್ಳಲಾಗಿತ್ತು. ಆದರೆ ಹೊಸ ಸರ್ಕಾರದಲ್ಲಿ ಸಂಪುಟಕ್ಕೆ ಸೇರಿಸಿಕೊಂಡಿಲ್ಲ, ಈಗ ಖಾಲಿ ಇರುವ ಸ್ಥಾನಗಳಲ್ಲಿ ಅವಕಾಶ ಕಲ್ಪಿಸಿ ಮಾತು ಉಳಿಸಿಕೊಳ್ಳಬೇಕು. ಈ ಬಗ್ಗೆ ಹೈಕಮಾಂಡ್ ನಾಯಕರ ಜೊತೆ ಮಾತುಕತೆ ನಡೆಸಿ ಹೈಕಮಾಂಡ್ ಮೇಲೆ ಒತ್ತಡ ಹೇರಿ ನನಗೆ ಅವಕಾಶ ಕಲ್ಪಿಸಿ ಎಂದು ಮನವಿ ಮಾಡಿದ್ದಾರೆ.

ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕೂಡ ಸಿಎಂ ಭೇಟಿ ಮಾಡಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ನಿನ್ನೆ ರಾತ್ರಿಯೇ ಸಿಎಂ ಭೇಟಿ ಮಾಡಿ ಚರ್ಚಿಸಿ ಹೋಗಿರುವ ಪೂರ್ಣಿಮಾ ಶ್ರೀನಿವಾಸ್ ಸಂಪುಟ ವಿಸ್ತರಣೆ ವೇಳೆ ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈತಪ್ಪಿತ್ತು. ಈಗ ಅವಕಾಶ ಕಲ್ಪಿಸಬೇಕು ಎಂದಿದ್ದಾರೆ.

ಸಚಿವ ಸ್ಥಾನದ ಆಕಾಂಕ್ಷಿಗಳ ಮನವಿ ಆಲಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಎಲ್ಲರಿಗೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.‌ ದೆಹಲಿ ಭೇಟಿ ವೇಳೆ ಹೈಕಮಾಂಡ್ ನಾಯಕರೊಂದಿಗೆ ಮಾತುಕತೆ ನಡೆಸಲು ಸಮಯಾವಕಾಶ ಕೋರಿದ್ದೇನೆ. ಸಮಯ ನೀಡಿದರೆ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಸಿ ವಿಷಯ ಪ್ರಸ್ತಾಪಿಸುತ್ತೇನೆ ಎಂದು ಅಭಯ ನೀಡಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆಯಲ್ಲಿ ಗದ್ದಲ ಮಾಡಿದವರ ವಿರುದ್ಧ ಕ್ರಮ: ಉಪರಾಷ್ಟ್ರಪತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.