ಬೆಂಗಳೂರು: ಒನ್ ವೇನಲ್ಲಿ ಬರುತ್ತಿದ್ದ ಕಾರನ್ನು ತಡೆದು ಪ್ರಶ್ನಿಸಿದ ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ಇಬ್ಬರು ಯುವಕರನ್ನು ಯಲಹಂಕ ನ್ಯೂಟೌನ್ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಸ್ಥಳೀಯ ನಿವಾಸಿಗಳಾದ ಮನೋಜ್ ಹಾಗೂ ಧೀರಜ್ ಬಂಧಿತರಾಗಿದ್ದಾರೆ. ಇಬ್ಬರು ಸಹೋದರರಾಗಿದ್ದಾರೆ. ಮನೋಜ್ ಖಾಸಗಿ ಕಂಪನಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದು, ಧೀರಜ್ ಸ್ವಿಗ್ಗಿ ಫುಡ್ ಡೆಲಿವರಿ ಕಂಪನಿಯ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ. ಯಲಹಂಕ 5ನೇ ಹಂತದಲ್ಲಿ ವಾಸವಿದ್ದರು.
ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಯಲಹಂಕ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕ್ಕಬೆಟ್ಟಹಳ್ಳಿ ಸರ್ಕಲ್ ಬಳಿ ಒನ್ವೇಯಲ್ಲಿ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಅಡ್ಡಗಟ್ಟಿದ ಪೊಲೀಸರು ಇದನ್ನು ಪ್ರಶ್ನಿಸಿದ್ದರು. ಈ ವೇಳೆ ಪೊಲೀಸರ ಜೊತೆ ಕಿತ್ತಾಡಿಕೊಂಡಿದ್ದ ಸಹೋದರರು ಪೊಲೀಸ್ ಸಿಬ್ಬಂದಿ ಮೇಲೆಯೇ ಹಲ್ಲೆ ಮಾಡಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ಪತ್ತೆ ಹಚ್ಚಿ, ಬಂಧಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಘಟನೆ ಬಗ್ಗೆ ಗೃಹಸಚಿವ ಖಂಡನೆ
ಇನ್ನು ಘಟನೆಯ ಬಗ್ಗೆ ಪ್ರತಿಕ್ರಿಯಿಸುವ ಗೃಹಸಚಿವ ಆರಗ ಜ್ಞಾನೇಂದ್ರ, ರಕ್ಷಣೆ ನೀಡುವ ಪೊಲೀಸರ ಮೇಲೆ ಯುವಕರು ಹಲ್ಲೆ ಮಾಡಿರುವುದು ಖಂಡನೀಯ. ಯುವಕರ ಮೇಲೆ ಕಾನೂನುರೀತ್ಯಾ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದ್ದಾರೆ.
ಇದನ್ನೂ ಓದಿ: ಯುವಕರ ಗೂಂಡಾಗಿರಿ.. ಪೊಲೀಸರ ಮೇಲೆ ಹಲ್ಲೆ.. ವಿಡಿಯೋದಲ್ಲಿ ಕೃತ್ಯ ಸೆರೆ
ಪೊಲೀಸ್ ಆಯುಕ್ತ ಕಮಲ್ ಪಂತ್ ಅವರ ಜೊತೆ ದೂರವಾಣಿ ಮೂಲಕ ಸಂಪರ್ಕಿಸಿರುವ ಸಚಿವರು, ಮಾಧ್ಯಮಗಳಲ್ಲಿ ಪ್ರಸಾರವಾದ ದೃಶ್ಯಗಳನ್ನು ನೋಡಿದ್ದೇನೆ. ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಹಲ್ಲೆಗೊಳಗಾದ ಪೊಲೀಸರಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಸೂಚನೆ ನೀಡಿದ್ದಾರೆ.