ETV Bharat / city

ವಿದ್ಯುತ್ ದರ ಹೆಚ್ಚಿಸುವ ಸರ್ಕಾರದ ನಿರ್ಧಾರ ಸಮಂಜಸವಲ್ಲ: ಸಿದ್ದರಾಮಯ್ಯ

author img

By

Published : Jun 29, 2022, 7:02 AM IST

ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ನಾಗರಿಕರಿಗೆ ಸರ್ಕಾರ ವಿದ್ಯುತ್ ದರ ಹೆಚ್ಚಳದ ಬರೆ ನೀಡಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್​ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಪೆಟ್ರೋಲ್, ಡೀಸೆಲ್ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ರಾಜ್ಯ ಬಿಜೆಪಿ ಸರ್ಕಾರ ವಿದ್ಯುತ್ ದರ ಹೆಚ್ಚಿಸುವ ಮೂಲಕ ಚೇತರಿಸಿಕೊಳ್ಳಲಾಗದಂತಹ ಹೊಡೆತ ನೀಡಲು ಹೊರಟಿದೆ. ಇದು ಬಿಜೆಪಿ ಆಡಳಿತದ ವೈಫಲ್ಯಕ್ಕೆ ರಾಜ್ಯದ ಜನತೆ ತೆರಬೇಕಾಗಿರುವ ಬೆಲೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್​ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

ಕಲ್ಲಿದ್ದಲು ದರ ಏರಿಕೆ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಕುಂಟು ನೆಪಮಾತ್ರ. ಈ ಏರಿಕೆ ತಾತ್ಕಾಲಿಕ ಸ್ವರೂಪದ್ದು ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ. ಹೀಗಿದ್ದರೂ, ತಾತ್ಕಾಲಿಕ ಏರು - ಪೇರುಗಳನ್ನ ಸ್ವಲ್ಪ ಕಾಲ ತಾಳಿಕೊಳ್ಳುವ ಆರ್ಥಿಕ ಚೈತನ್ಯ ಇಲ್ಲ ಎನ್ನುವುದು ರಾಜ್ಯ ಬಿಜೆಪಿ ಸರ್ಕಾರದ ದಿವಾಳಿತನಕ್ಕೆ ಸಾಕ್ಷಿ. ಏಪ್ರಿಲ್ ತಿಂಗಳಲ್ಲಿ ವಿದ್ಯುತ್ ದರ ಹೆಚ್ಚಿಸಿರುವ ರಾಜ್ಯ ಸರ್ಕಾರ, ಮೂರು ತಿಂಗಳ ಅವಧಿಯಲ್ಲಿ ಮತ್ತೊಮ್ಮೆ ದರ ಏರಿಕೆ ಮಾಡಿದೆ. ಈ ದರ ಏರಿಕೆಯ ಸರಣಿ ನಿಲ್ಲುವ ಹಾಗೆ ಕಾಣುತ್ತಿಲ್ಲ, ಶೀಘ್ರದಲ್ಲಿಯೇ ಇನ್ನೊಮ್ಮೆ ದರ ಏರಿಕೆಯ ಆದೇಶ ಹೊರಬಿದ್ದರೂ ಆಶ್ಚರ್ಯವಿಲ್ಲ ಎಂದಿದ್ದಾರೆ.

ಸಿದ್ದರಾಮಯ್ಯ ಟ್ವೀಟ್
ಸಿದ್ದರಾಮಯ್ಯ ಟ್ವೀಟ್

ಎಸ್ಕಾಂಗಳು ಸಲ್ಲಿಸುವ ಪ್ರಸ್ತಾವಗಳನ್ನು ಕಣ್ಣುಮುಚ್ಚಿ ಒಪ್ಪಿಕೊಳ್ಳಲು ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್ ಸಿ) ರಚನೆಯಾಗಿಲ್ಲ. ಎಸ್ಕಾಂಗಳು ನಷ್ಟದಲ್ಲಿದ್ದರೆ, ಅದಕ್ಕೆ ಅದಕ್ಷತೆ ಮತ್ತು ಭ್ರಷ್ಟಾಚಾರವೂ ಕಾರಣ. ಕೆಇಆರ್​ಸಿ ರಾಜ್ಯದ ಜನತೆಯ ಹಿತ ಗಮನದಲ್ಲಿಟ್ಟುಕೊಂಡು ತೀರ್ಮಾನಿಸಬೇಕೇ ಹೊರತು ಎಸ್ಕಾಂಗಳ ಹಿತವನ್ನಲ್ಲ. ಒಂದೆಡೆ, ನಿರುದ್ಯೋಗದಿಂದಾಗಿ ಪ್ರತಿಯೊಂದು ಕುಟುಂಬದ ಆದಾಯ ಗಣನೀಯವಾಗಿ ಕಡಿಮೆಯಾಗಿದೆ. ಇನ್ನೊಂದೆಡೆ, ಅಗತ್ಯವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯುತ್ ದರ ಏರಿಕೆಯ ನಿರ್ಧಾರವನ್ನು ಕೈಬಿಡಬೇಕೆಂದು ರಾಜ್ಯ ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ ಎಂದಿದ್ದಾರೆ.

ಸಿದ್ದರಾಮಯ್ಯ ಟ್ವೀಟ್
ಸಿದ್ದರಾಮಯ್ಯ ಟ್ವೀಟ್

ಹತ್ಯೆ ಖಂಡನೀಯ: ಇನ್ನೊಂದು ಟ್ವೀಟ್​ ಮಾಡಿ, 'ಉದಯಪುರದಲ್ಲಿ ಧರ್ಮಾಂಧನೊಬ್ಬ ನಡೆಸಿರುವ ಬರ್ಬರ ಹತ್ಯೆ ಖಂಡನೀಯ. ಹಿಂಸೆ ಪರಿಹಾರ ಅಲ್ಲ, ಉತ್ತರವೂ ಅಲ್ಲ. ಕುರುಡು ಹಿಂಸೆಗೆ ಬಲಿಯಾದ ವ್ಯಕ್ತಿಯ ಕುಟುಂಬಕ್ಕೆ ನನ್ನ ಸಂತಾಪಗಳು. ಅಲ್ಲಿನ ರಾಜ್ಯ ಸರ್ಕಾರ ಕಾನೂನು ಕ್ರಮದ ಮೂಲಕ ಕೊಲೆಗಡುಕನಿಗೆ ಅತ್ಯುಗ್ರ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು' ಎಂದಿದ್ದಾರೆ.

ಸಿದ್ದರಾಮಯ್ಯ ಟ್ವೀಟ್
ಸಿದ್ದರಾಮಯ್ಯ ಟ್ವೀಟ್

ಇದನ್ನೂ ಓದಿ: ನಿರುದ್ಯೋಗಕ್ಕೆ ಮದ್ದು ಅರೆಯದ ಕೇಂದ್ರ ಸರ್ಕಾರ.. ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.