ರಾಜ್ಯದಲ್ಲಿರುವುದು ಹಿಂದಿ ಮತ್ತು ಸಂಸ್ಕೃತಿ ಇಲಾಖೆಯೇ?: ಸಿದ್ದರಾಮಯ್ಯ

ರಾಜ್ಯದಲ್ಲಿರುವುದು ಹಿಂದಿ ಮತ್ತು ಸಂಸ್ಕೃತಿ ಇಲಾಖೆಯೇ?: ಸಿದ್ದರಾಮಯ್ಯ
ಸಂಕಲ್ಪ್ ಸೆ ಸಿದ್ಧಿ ಮತ್ತು ಹರ್ ಘರ್ ತಿರಂಗ ಎಂಬ ಹಿಂದಿ ಬ್ಯಾನರ್ಗಳನ್ನು ಗಮನಿಸಿರುವ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ ಮತ್ತು ಸಂಸ್ಕೃತಿ ಇಲಾಖೆಯೇ? ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರ ಕೇಂದ್ರ ಬಿಜೆಪಿ ನಾಯಕರ ಓಲೈಕೆಗಾಗಿ ಮತ್ತೆ ಮತ್ತೆ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಮಾಡುತ್ತಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
-
ರಾಜ್ಯದ @BSBommai ಸರ್ಕಾರ
— Siddaramaiah (@siddaramaiah) August 5, 2022
ಕೇಂದ್ರ @BJP4India ನಾಯಕರ ಓಲೈಕೆಗಾಗಿ ಮತ್ತೆ ಮತ್ತೆ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಮಾಡುತ್ತಿರುವುದು ಖಂಡನೀಯ.
1/6#ಹಿಂದಿಹೇರಿಕೆ pic.twitter.com/P1UiDypU7m
ಕೇಂದ್ರ ಸಚಿವ ಅಮಿತ್ ಶಾ ಭಾಗವಹಿಸಿದ್ದ 'ಸಂಕಲ್ಪ್ ಸೆ ಸಿದ್ಧಿ' ಎಂಬ ಕಾರ್ಯಕ್ರಮದ ಬ್ಯಾನರ್ ಸಂಪೂರ್ಣ ಹಿಂದಿಮಯವಾಗಿತ್ತು. ಇನ್ನೊಂದೆಡೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತನ್ನ ಜಾಲತಾಣದಲ್ಲಿ ಹಿಂದಿಯ ಕಿರೀಟ ಇಟ್ಟುಕೊಂಡು ಮೆರೆಸುತ್ತಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯದ ಬಿಜೆಪಿ ಸರ್ಕಾರ ತನ್ನತನವನ್ನು ಅಡವಿಟ್ಟು ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದೆ ಎಂಬುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣವೇ ಸಾಕ್ಷಿ. ಮೊದಲು ಈ ಜಾಲತಾಣದಿಂದ ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ. ಕನ್ನಡ ಮತ್ತು ಸಂಸ್ಕೃತಿಯ ರಕ್ಷಣೆ ಮತ್ತು ಪೋಷಣೆಗಾಗಿ ಇರುವ ಇಲಾಖೆಯೇ ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡವನ್ನು ಹೊರಗಿಟ್ಟು ಹಿಂದಿ ಭಾಷೆಯ ಪ್ರಚಾರಕ್ಕೆ ಇಳಿದರೆ ಕನ್ನಡ ಭಾಷೆಯನ್ನು ರಕ್ಷಿಸಿವವರು ಯಾರು ಎಂದು ಅವರು ಕೇಳಿದ್ದಾರೆೆ.
ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ಕನ್ನಡಿಗರ ಸ್ವಾಭಿಮಾನವನ್ನು 'ಉತ್ತರ ಕುಮಾರ'ರ ಕಾಲಡಿ ಯಾಕೆ ಅಡವು ಇಡುತ್ತೀರಾ?. ಶರಣಾಗತಿ ಕನ್ನಡದ ಮಣ್ಣಿನ ಗುಣವಲ್ಲ, ವೀರರಾಣಿ ಅಬ್ಬಕ್ಕನ ನೆಲದಿಂದ ಬಂದ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು ಎಂದು ಸರಣಿ ಟ್ವಿಟ್ ಮಾಡಿ ಸರ್ಕಾರದ ನಡೆಯನ್ನು ವಿರೋಧಿಸಿದ್ದಾರೆ.
ಇದನ್ನೂ ಓದಿ : ಸಿದ್ದರಾಮಯ್ಯಗೆ ಬಂತು ಮತ್ತೊಂದು ಕ್ಷೇತ್ರದ ಆಫರ್: ಕಾಫಿನಾಡಿಗೆ ಬರುವಂತೆ ಮೀಗಾ ಮನವಿ
