ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಜನ್ಮದಿನವನ್ನು ಯುವ ಕಾಂಗ್ರೆಸ್ 'ರಾಷ್ಟ್ರೀಯ ನಿರುದ್ಯೋಗ' ದಿನವಾಗಿ ಆಚರಿಸಿದೆ. ಯುವ ಕಾಂಗ್ರೆಸ್ ಕಾರ್ಯಕರ್ತರು ರೈಲ್ವೇ ನಿಲ್ದಾಣದಿಂದ ಫ್ರೀಡಂ ಪಾರ್ಕ್ವರೆಗೆ ಬೃಹತ್ ಪ್ರತಿಭಟನಾ ಜಾಥಾ ನಡೆಸಿದರು.
![Youth congress protest in Bangalore](https://etvbharatimages.akamaized.net/etvbharat/prod-images/kn-bng-03-youth-congress-protest-7202707_17092021161410_1709f_1631875450_910.jpg)
ದೇಶದ ಯುವಜನ ಹಾಗೂ ಎಲ್ಲಾ ವರ್ಗದ ಜನರನ್ನು ಸಂಕಷ್ಟಕ್ಕೆ ತಳ್ಳಿ, ಹೆಚ್ಚು ನಿರುದ್ಯೋಗ ಸಮಸ್ಯೆ ಉಂಟಾಗುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಕಾರಣ. ಹೀಗಾಗಿ 'ನರೇಂದ್ರ ಮೋದಿ ಉದ್ಯೋಗ ಕೊಡಿ' ಎಂದು ವಿವಿಧ ಪದವೀಧರರು, ಆಟೋ ಚಾಲಕರು, ಕಾರ್ಮಿಕರು ಆಗ್ರಹಿಸಿದರು.
ಯುವ ಕಾಂಗ್ರೆಸ್ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಮತ್ತು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಪ್ರತಿಭಟನೆಯ ನೇತೃತ್ವವಹಿಸಿದ್ದರು. ಉದ್ಯೋಗ ಸೃಷ್ಟಿ ಮತ್ತು ಉದ್ಯೋಗ ನಷ್ಟ ತಪ್ಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿ ಪ್ರತಿಭಟನಾಕಾರರು ಘೋಷಣೆ ಕೂಗಿದರು.
![Youth congress protest in Bangalore](https://etvbharatimages.akamaized.net/etvbharat/prod-images/kn-bng-03-youth-congress-protest-7202707_17092021161410_1709f_1631875450_503.jpg)
ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಮಾತನಾಡಿ, ಪ್ರಧಾನಿ ಅವರ ಹುಟ್ಟುಹಬ್ಬವನ್ನು ಯುವ ಕಾಂಗ್ರೆಸ್ ದೇಶದ್ಯಂತ ನಿರುದ್ಯೋಗ ದಿನವನ್ನಾಗಿ ಆಚರಿಸುತ್ತಿರುವುದು ಈ ದೇಶದ ದುರಂತ. ಈ ಸರ್ಕಾರದಿಂದ ಜನ ಸಾಮಾನ್ಯರಿಗೆ ನ್ಯಾಯ ದೊರೆಯುವುದಿಲ್ಲ. ಸ್ವಾತಂತ್ರ್ಯ ಪೂರ್ವದಲ್ಲಿ ನಡೆದ ಕ್ವಿಟ್ ಇಂಡಿಯಾ ಮಾದರಿಯಲ್ಲಿ ಹಾಲಿ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲಾಗುವುದು ಎಂದರು.
ಮೋದಿ ಅವರು ನೀಡಿದ ಭರವಸೆಯಂತೆ 2014 ರಿಂದ ಈವರೆಗೆ ನಮಗೆ 14 ಕೋಟಿ ಉದ್ಯೋಗ ಸೃಷ್ಟಿ ಮಾಡಬೇಕಾಗಿತ್ತು. ಆದರೆ ನಾವು 20 ಕೋಟಿ ಉದ್ಯೋಗ ಕಳೆದುಕೊಂಡಿದ್ದೇವೆ. ನಿರುದ್ಯೋಗ ಸಮಸ್ಯೆಯಿಂದ ಬಹಳಷ್ಟು ಮಂದಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಯುವ ಜನರ ಧ್ವನಿಯಾಗಿ ನಾವು ಹೋರಾಟ ಮಾಡುತ್ತೇವೆ. ಜನರ ಪರಿವಾಗಿ ನಾವು ನಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುತ್ತೇವೆ ಎಂದರು.
ಎಂ.ಎಸ್. ರಕ್ಷಾ ರಾಮಯ್ಯ ಮಾತನಾಡಿ, ದೇಶದಲ್ಲಿ ಶೇ 33 ರಷ್ಟು ಅಪರಾಧ ಪ್ರಕರಣಗಳು ಹೆಚ್ಚಾಗಿದ್ದು, ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗುತ್ತಿದೆ. ಇದಕ್ಕೆಲ್ಲ ನಿರುದ್ಯೋಗ ಸಮಸ್ಯೆಯೇ ಕಾರಣ. ಹೀಗಾಗಿ ನಿರುದ್ಯೋಗದ ವಿರುದ್ಧ ನಮ್ಮ ಹೋರಾಟ ತೀವ್ರಗೊಳಿಸಲಾಗುವುದು ಎಂದರು.
![Youth congress protest in Bangalore](https://etvbharatimages.akamaized.net/etvbharat/prod-images/kn-bng-03-youth-congress-protest-7202707_17092021161410_1709f_1631875450_830.jpg)
ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಶ್ವಾಸನೆ ಕಾಗದಗಳಲ್ಲೇ ಉಳಿದಿದೆ. ಯುವ ಸಮೂಹಕ್ಕೆ ಉದ್ಯೋಗ ಒದಗಿಸಲು ಕೇಂದ್ರ ಸರ್ಕಾರ ಯಾವುದೇ ಕಾರ್ಯಕ್ರಮ ಕೈಗೊಂಡಿಲ್ಲ. ಸಣ್ಣ ಮತ್ತು ಮಧ್ಯಮ ವರ್ಗದ ಉದ್ಯಮ ನೆಲಕಚ್ಚುವಂತೆ ಮಾಡಿದ್ದು, ಇದರ ಪರಿಣಾಮ ಜನ ಜೀವನ ತೀವ್ರ ಕಷ್ಟದಲ್ಲಿದೆ. ದೇಶದ ಎಲ್ಲಾ ಸಂಕಟಗಳಿಗೂ ಮೋದಿ ಸರ್ಕಾರವೇ ಕಾರಣ ಎಂದು ದೂರಿದರು.