ಹುಬ್ಬಳ್ಳಿ: ರಾಜ್ಯದಲ್ಲಿ ಇರೋದು ಸ್ಥಿರ ಸರ್ಕಾರವಲ್ಲ. ಶೀಘ್ರದಲ್ಲೇ ವಿಧಾನಸಭೆ ಚುನಾವಣೆ ಬಂದರೂ ಆಶ್ಚರ್ಯವಿಲ್ಲ ಎಂದು ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗಿರುವ ಸರ್ಕಾರದಲ್ಲಿ ಸಾಕಷ್ಟು ಗೊಂದಲಗಳಿವೆ. ಅಲ್ಲದೇ ಬಹಳ ದಿನಗಳ ನಂತರ ಸಚಿವ ಸಂಪುಟ ವಿಸ್ತರಣೆಯಾಗಿದೆ. ಇಂದಿನಿಂದ ಬಿಜೆಪಿಯಲ್ಲಿ ಆಂತರಿಕ ಜಗಳ ಶುರುವಾಗಲಿದೆ. ಸಚಿವ ಸಂಪುಟದಲ್ಲಿ ಹಿರಿಯರಿಗೆ ಸ್ಥಾನ ಕೊಟ್ಟಿಲ್ಲ. ಈ ಹಿನ್ನೆಲೆಯಲ್ಲಿ ಖಾತೆ ಹಂಚಿಕೆಯ ನಂತರ ಜಗಳ ಜೋರಾಗಲಿದೆ. ಇದನ್ನು ಮುಖ್ಯಮಂತ್ರಿ ಯಡಿಯೂರಪ್ಪ ಹೇಗೆ ನಿಭಾಯಿಸುತ್ತಾರೆ ಎಂಬುದನ್ನು ನೋಡೋಣ. ಒಂದು ವೇಳೆ ಸರ್ಕಾರ ಪತನವಾದ್ರೆ ಚುನಾವಣೆಗೆ ಹೋಗಲು ಸಿದ್ಧರಾಗಿರಬೇಕಾಗಿದೆ ಎಂದರು.
ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಸರಿಯಾದ ಸಮಯಕ್ಕೆ ಆಗಲಿದೆ. ಮುಂದಿನ ವಾರ ಅಥವಾ 15 ದಿನಗಳಲ್ಲಿ ಎಲ್ಲವೂ ಬಗೆಹರಿಯಲಿದೆ. ಕಾಂಗ್ರೆಸ್ನಲ್ಲಿ ಮೂಲ ಮತ್ತು ವಲಸಿಗರು ಎನ್ನುವ ಭಾವನೆ ಇಲ್ಲ. ಕಾಂಗ್ರೆಸ್ ಪಕ್ಷ ಸೇರಿದ ಎಲ್ಲರೂ ಕಾಂಗ್ರೆಸ್ಸಿಗರೇ.. ಪಕ್ಷ ಸಂಘಟನೆ ಹಾಗೂ ಚುನಾವಣೆಗಳನ್ನು ಗಮನದಲ್ಲಿರಿಸಿಕೊಂಡು ಕೆಪಿಸಿಸಿ ಅಧ್ಯಕ್ಷರ ಆಯ್ಕೆ ನಡೆಯಲಿದೆ ಎಂದರು.