ಮಂಗಳೂರು: ಭೂ ಪರಿವರ್ತನೆ ಮಾಡಲು ಲೋಕಾಯುಕ್ತ ಬಲೆಗೆ ಬಿದ್ದಿದ್ದ ಸರ್ವೇಯರ್ ಮೇಲಿನ ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ 2 ವರ್ಷ ಜೈಲು ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
2013ರಲ್ಲಿ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸರ್ವೇಯರ್ ಆಗಿದ್ದ ಟಿ.ಪಿ.ಹಿರೇಗೌಡ ಭೂ ಪರಿವರ್ತನೆ ಮಾಡಲೆಂದು ಎ.ಕುಟ್ಟಿಚ್ಚ ಮೊಗೇರ ಎಂಬವರಿಗೆ 5 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ಎ.ಕುಟ್ಟಿಚ್ಚ ಮೊಗೇರ ಅವರು ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆತ ಲಂಚ ಸ್ವೀಕರಿಸುತ್ತಿರುವಾಗಲೇ ಲೋಕಾಯುಕ್ತ ತಂಡ ದಾಳಿ ಮಾಡಿ ಆರೋಪಿಯನ್ನು ಹಾಗೂ ಲಂಚದ ಹಣವನ್ನು ವಶಕ್ಕೆ ತೆಗೆದುಕೊಂಡಿತ್ತು.
ಈ ಬಗ್ಗೆ ಲೋಕಯುಕ್ತದ ಅಂದಿನ ಪೊಲೀಸ್ ನಿರೀಕ್ಷಕ ತನಿಖಾಧಿಕಾರಿ ದಿಲೀಪ್ ಕುಮಾರ್ ಕೆ.ಹೆಚ್ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ವಿಚಾರಣೆ ನಡೆಸಿ, ಆರೋಪಿ ಲಂಚ ತೆಗೆದುಕೊಂಡ ಆರೋಪ ಸಾಬೀತಾಗಿದೆ ಎಂದು ಆದೇಶಿಸಿ, ಅಪರಾಧಿಗೆ 2 ವರ್ಷಗಳ ಜೈಲು ಶಿಕ್ಷೆ, 5 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ದಂಡ ತೆರಲು ತಪ್ಪಿದ್ದಲ್ಲಿ ಮತ್ತೆ ಆರು ತಿಂಗಳು ಸಾದಾ ಸಜೆ ಅನುಭವಿಸುವಂತೆ ತೀರ್ಪು ನೀಡಿದೆ. ನ್ಯಾಯಾಧೀಶ ಬಿ.ಬಿ.ಜಕಾತಿಯವರು ಈ ತೀರ್ಪು ನೀಡಿದರು.
ಸರ್ಕಾರದ ಪರವಾಗಿ ಮಂಗಳೂರು ಲೋಕಾಯುಕ್ತದ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪಾಡಿ ವಾದಿಸಿದ್ದಾರೆ.
(ಇದನ್ನೂ ಓದಿ: ಪ್ರೇಯಸಿಗಾಗಿ 35 ವರ್ಷ ಕಾದ ಪ್ರಿಯತಮ: 65ನೇ ವಯಸ್ಸಿನಲ್ಲಿ ಸಪ್ತಪದಿ ತುಳಿದ ಸಖತ್ ಜೋಡಿ)