ಮೈಸೂರು: ಮಾದಕ ವಸ್ತುಗಳ ಮಾರಾಟ ಹಾಗೂ ಸಂಗ್ರಹದ ವಿರುದ್ದ ಮೈಸೂರು ನಗರ ಪೊಲೀಸರು ವಿಶೇಷ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ.
ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ವಿಶೇಷ ಸೂಚನೆ ಮೇರೆಗೆ ಡಿಸಿಪಿ ಡಾ.ಎ.ಎನ್.ಪ್ರಕಾಶ್ ಗೌಡ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಎಸಿಪಿ ಮರಿಯಪ್ಪರವರ ನೇತೃತ್ವದಲ್ಲಿ 90 ಮಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನೊಳಗೊಂಡ ವಿಶೇಷ ತಂಡ ರಚಿಸಲಾಗಿದೆ.
ಈ ತಂಡವು ಇಂದು ಮೈಸೂರು ನಗರದ ನರಸಿಂಹರಾಜ, ಮಂಡಿ, ಉದಯಗಿರಿ, ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮಾದಕ ವಸ್ತುಗಳ ಬಗ್ಗೆ ಅನುಮಾನವಿರುವ ಹಾಗೂ ಈ ಹಿಂದೆ ಮಾದಕವಸ್ತುಗಳನ್ನು ಮಾರಾಟ ಮಾಡಿ ದಸ್ತಗಿರಿಯಾಗಿರುವ ವೃತ್ತಿಪರ ಆರೋಪಿಗಳ ಮನೆಗಳ ಮೇಲೆ ದಿಢೀರ್ ದಾಳಿ ಮಾಡಿತು. ಆದರೆ, ದಾಳಿಯಲ್ಲಿ ಯಾವುದೇ ಮಾದಕ ವಸ್ತುಗಳು ಪತ್ತೆಯಾಗಿಲ್ಲ.
ಮಾಧ್ಯಮಗಳಲ್ಲಿ ಡ್ರಗ್ ಪ್ರಕರಣಗಳ ಬಗ್ಗೆ ಪ್ರಸಾರವಾಗುತ್ತಿರುವ ಹಿನ್ನೆಲೆ, ಕೆಲವು ವೃತ್ತಿಪರ ಆರೋಪಿಗಳು ತಮ್ಮ ಮನೆಗಳಿಗೆ ಬೀಗ ಹಾಕಿ, ಮನೆ ಖಾಲಿ ಮಾಡಿರುವುದಾಗಿ ತಿಳಿದುಬಂದಿದೆ. ಮಾದಕ ವಸ್ತುಗಳ ಮಾರಾಟ ಹಾಗೂ ಸಂಗ್ರಹದ ಬಗ್ಗೆ ಮಾಹಿತಿ ಇದ್ದಲ್ಲಿ ಸಾರ್ವಜನಿಕರು ಪೊಲೀಸ್ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ 100, 2418339ಗೆ ಮಾಹಿತಿ ನೀಡುವಂತೆ ಆಯುಕ್ತರು ಕೋರಿದ್ದಾರೆ.