ಆರ್ಥಿಕವಾಗಿ ಹಿಂದುಳಿದವರಿಗೆ ಉದ್ಯಮ ಸ್ಥಾಪಿಸಲು ಸಬ್ಸಿಡಿ : ಸಚಿವ ಮುರುಗೇಶ್ ನಿರಾಣಿ

author img

By

Published : Apr 29, 2022, 12:50 PM IST

Minister Murugesh Nirani

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉದ್ಯಮಶೀಲರಿಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ (ಕೆಐಎಡಿಬಿ)ಯಿಂದ ಕೈಗಾರಿಕೆ ನಿವೇಶನಕ್ಕೆ ಶೇ.75ರಷ್ಟು ರಿಯಾಯಿತಿ ನೀಡಲಾಗುತ್ತದೆ. ಅದೇ ರೀತಿ ಆರ್ಥಿಕವಾಗಿ ಹಿಂದುಳಿದವರಿಗೂ ಶೇ.75ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಸಚಿವ ಮುರುಗೇಶ್​​. ಆರ್‌ ನಿರಾಣಿ ತಿಳಿಸಿದ್ದಾರೆ..

ಮೈಸೂರು : ಆರ್ಥಿಕವಾಗಿ ಹಿಂದುಳಿದ ವರ್ಗದವರು ಉದ್ಯಮ ಸ್ಥಾಪಿಸಲು ಅನುವಾಗುವಂತೆ ಕೆಐಎಡಿಬಿಯಿಂದ ಕೈಗಾರಿಕಾ ನಿವೇಶನಕ್ಕೆ ಶೇ.75ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್​ ಆರ್‌ ನಿರಾಣಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಗುರುವಾರ 'ಉದ್ಯಮಿಯಾಗು ಉದ್ಯೋಗ ನೀಡು' ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉದ್ಯಮಶೀಲರಿಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ (ಕೆಐಎಡಿಬಿ)ಯಿಂದ ಕೈಗಾರಿಕೆ ನಿವೇಶನಕ್ಕೆ ಶೇ.75ರಷ್ಟು ರಿಯಾಯಿತಿ ನೀಡಲಾಗುತ್ತದೆ. ಅದೇ ರೀತಿ ಆರ್ಥಿಕವಾಗಿ ಹಿಂದುಳಿದವರಿಗೂ ಶೇ.75ರಷ್ಟು ರಿಯಾಯಿತಿ ನೀಡಲಾಗುವುದು ಎಂದು ತಿಳಿಸಿದರು.

Minister Murugesh Nirani
'ಉದ್ಯಮಿಯಾಗು ಉದ್ಯೋಗ ನೀಡು' ಕಾರ್ಯಕ್ರಮ ಉದ್ಘಾಟಿಸಿದ ಸಚಿವ ಮುರುಗೇಶ್

ಮೈಸೂರು ಅಲ್ಲದೇ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮಂಡ್ಯದ ವಿದ್ಯಾರ್ಥಿಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸುಮಾರು 5000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ಬಹಳ ಸಂತಸದ ವಿಚಾರ. ಕಾರ್ಯಕ್ರಮಕ್ಕೆ ನೋಂದಣಿ ಮಾಡಿಕೊಂಡಿರುವವರ ಪೈಕಿ ಉದ್ಯಮ ಸ್ಥಾಪಿಸುವ ಆಸಕ್ತಿ ತೋರುವವರಿಗೆ ಅವರ ಆಯ್ಕೆಯ ಕ್ಷೇತ್ರದಲ್ಲಿ ಒಂದು ತಿಂಗಳವರೆಗೆ ವಿಶೇಷ ತರಬೇತಿ ನೀಡಲಾಗುತ್ತದೆ.

ಬ್ಯಾಂಕ್‌ ಲೋನ್‌, ಪ್ರಾಜೆಕ್ಟ್‌ ರಿಪೋರ್ಟ್‌ ಸಲ್ಲಿಸುವವರೆಗೆ ಆರಂಭದಿಂದ ಕೊನೆಯವರೆಗೆ ಎಲ್ಲ ರೀತಿಯ ಸಹಕಾರ ಒದಗಿಸಲಾಗುವುದು ಎಂದು ನಿರಾಣಿ ಭರವಸೆ ನೀಡಿದರು. ಬೇರೆಯವರ ಕೈಕೆಳಗೆ ನೀವು ದುಡಿಯಬೇಕಿಲ್ಲ. ಛಲ ಬಿಡದೆ ಸಾಧಿಸಿದರೆ ನೀವೇ ಉದ್ಯಮ ಸ್ಥಾಪಿಸಿ ಇತರರಿಗೆ ಕೆಲಸ ಕೊಡಬಹುದು. ಈ ಕಾರ್ಯಕ್ರಮದಲ್ಲಿ ಉದ್ಯಮಿಗಳಾಗುವುದು ಹೇಗೆ?, ಎಲ್ಲಿ ಮತ್ತು ಹೇಗೆ ಸಾಲ ಸೌಲಭ್ಯ ದೊರೆಯುತ್ತದೆ?, ಯಾವ ಯಾವ ಕ್ಷೇತ್ರಗಳಲ್ಲಿ ಹೂಡಿಕೆಗೆ ಅವಕಾಶ ಇದೆ ಎಂಬುದನ್ನು ತಜ್ಞರು ವಿವರಿಸಿದರು.

ಉದ್ದಿಮೆ ಸ್ಥಾಪಿಸಲು ಹಣ ಮುಖ್ಯವಲ್ಲ. ಸಾಧಿಸುವ ಛಲ, ಗುರಿ ಇರಬೇಕು. ಅದಕ್ಕೆ ಪೂರಕವಾಗಿ ನಮ್ಮ ಇಲಾಖೆಯಿಂದ ಎಲ್ಲ ಅಗತ್ಯ ಮಾರ್ಗದರ್ಶನ ನೀಡಲು ಸಿದ್ಧ. ಮುಂದಿನ ದಿನಗಳಲ್ಲಿ ಕರಾವಳಿ ಹಾಗೂ ಬೆಂಗಳೂರಿನ ಕಂದಾಯ ವಿಭಾಗ 2ರಲ್ಲಿ ಈ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ಹೇಳಿದರು.

Minister Murugesh Nirani
'ಉದ್ಯಮಿಯಾಗು ಉದ್ಯೋಗ ನೀಡು' ಕಾರ್ಯಕ್ರಮ ಉದ್ಘಾಟಿಸಿದ ಸಚಿವ ಮುರುಗೇಶ್

ಬೆಂಗಳೂರು ನಗರದಂತೆಯೇ ರಾಜ್ಯದ ಎರಡನೇ ಹಾಗೂ ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹಾಗೂ ಬಂಡವಾಳ ಹೂಡಿಕೆಗೆ ಉತ್ತಮ ವಾತಾವರಣ ನಿರ್ಮಾಣವಾಗಿದೆ. ನೂತನ ಕೈಗಾರಿಕಾ ನೀತಿಯಲ್ಲಿ ಸಾಕಷ್ಟು ವಿಶೇಷ ಅನುಕೂಲಗಳನ್ನು ಮಾಡಲಾಗಿದೆ. ಹೂಡಿಕೆ ಮಾಡುವ ಕೈಗಾರಿಕೆಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡಲಾಗುವುದು.

ನಮ್ಮವರೇ ಆದ ಇನ್ಫೋಸಿಸ್‍ನ ಶ್ರೀಮತಿ ಸುಧಾ ನಾರಾಯಣಮೂರ್ತಿ, ಏಕಸ್ ಅರವಿಂದ್‌ ಮೆಳ್ಳಗೇರಿ, ಉದ್ಯಮಿ ವಿದ್ಯಾ ಮರಕುಂಬಿ ಮುಂತಾದವರೇ ನಮಗೆ ಪ್ರೇರಣೆಯಾಗಬೇಕು. ಮೈಸೂರು ಸಂಸ್ಥಾನದ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ರಾಜ್ಯದ ಇತಿಹಾಸದಲ್ಲಿ ಅಭಿವೃದ್ಧಿಗೆ ಹೊಸ ವ್ಯಾಖ್ಯಾನ ಬರೆದವರು. ಆಗಿನ ಕಾಲದಲ್ಲೇ ಪ್ರಾಂತ್ಯವಾರು ಕೈಗಾರಿಕೆಗಳಿಗೆ ಆದ್ಯತೆ ನೀಡಿದ್ದು, ಮಹಾರಾಜರ ದೂರದೃಷ್ಟಿಯ ಪ್ರತೀಕ. ಹಾಗಾಗಿ, ನನ್ನ ಪಾಲಿಗೆ ಅವರೇ 'ರೋಲ್‌ ಮಾಡಲ್‌'. ಇಂದು ನಾನು 21 ಕಾರ್ಖಾನೆ ಸ್ಥಾಪಿಸಿ 72 ಸಾವಿರ ಮಂದಿಗೆ ಉದ್ಯೋಗ ನೀಡಿದ್ದೇನೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದರು.

ಇದನ್ನೂ ಓದಿ: ಕನ್ನಡ ಪ್ರಾದೇಶಿಕ ಭಾಷೆ, ಹಿಂದಿ ರಾಷ್ಟ್ರೀಯ ಭಾಷೆ: ಸಚಿವ ಮುರುಗೇಶ್ ನಿರಾಣಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.