ಶಿವಮೊಗ್ಗ: ರಾಷ್ಟ್ರಕ್ಕೆ ಮಾದರಿಯಾಗುವ ಕಾರ್ಯಕ್ರಮಗಳು ಶಿವಮೊಗ್ಗ ಜಿಲ್ಲೆಯಿಂದ ಶುರು ಆಗಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಅಭಿವೃದ್ಧಿ, ಸಮನ್ವಯತೆ ಹಾಗೂ ಮೇಲ್ವಿಚಾರಣಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಕೇಂದ್ರದ ಯೋಜನೆಗಳನ್ನು ಹೆಚ್ಚಿನ ಪ್ರಗತಿ ಸಾಧಿಸುವ ಮೂಲಕ ದೇಶದಲ್ಲೇ ಮಾದರಿ ಜಿಲ್ಲೆಯನ್ನಾಗಿ ಶಿವಮೊಗ್ಗವನ್ನು ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ನೆಟ್ವರ್ಕ್ ಸಮಸ್ಯೆ ಕುರಿತು ಪ್ರತಿಭಟನೆಗಳು ನಡೆಯುತ್ತಿವೆ. ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೆ ಶೀಘ್ರದಲ್ಲೇ ಕಾಮಗಾರಿ ಪ್ರಾರಂಭ ಮಾಡಿ ಸರ್ಕಾರಿ ಶಾಲೆಗಳಿಗೆ ನೆಟ್ವರ್ಕ್ ಸೇವೆಯನ್ನು ಒದಗಿಸುವುದರ ಜೊತೆಗೆ ಅಲ್ಲಿನ ಬಳಕೆದಾರರಿಗೆ ಸೌಲಭ್ಯ ಕಲ್ಪಿಸಿಕೊಡುವ ಬಗ್ಗೆಯೂ ಗಮನಹರಿಸಬೇಕು. ಅದಕ್ಕಾಗಿ ಅಗತ್ಯವಿರುವ ಅನುದಾನವನ್ನು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ 20 ಲಕ್ಷ ರೂ. ಹಾಗೂ ಜಿಲ್ಲೆಯ ಶಾಸಕರ ನಿಧಿಯಿಂದ ಹಣವನ್ನು ಕ್ರೊಢೀಕರಿಸಿ ಮುಂದಿನ ಒಂದು ತಿಂಗಳೊಳಗಾಗಿ ಶಾಲೆಗಳಿಗೆ ನೆಟ್ವರ್ಕ್ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ: Covid report : ರಾಜ್ಯದಲ್ಲಿಂದು 332 ಮಂದಿಗೆ ಸೋಂಕು,11 ಮಂದಿ ಸಾವು
ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನದಲ್ಲಿ ಜಿಲ್ಲೆಯ ಪ್ರಗತಿ ತೃಪ್ತಿಕರವಾಗಿದೆ. ಅಲ್ಲದೇ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಅಧಿಕಾರಿಗಳು ಸೂಕ್ತ ಮಾಹಿತಿ ಒದಗಿಸಿದಲ್ಲಿ ಕೇಂದ್ರ ಸಂಪುಟ ಸಭೆಯಲ್ಲಿ ಚೆರ್ಚಿಸಿ ಅನುಮೋದನೆ ಪಡೆದು ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ದೇಶದಲ್ಲೇ ಮಾದರಿ ಜಿಲ್ಲೆ ನಿರ್ಮಾಣ ಮಾಡುವಲ್ಲಿ ಅಗತ್ಯ ಸಲಹೆ ಸೂಚನೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.