ಟೆಕ್ಸ್‌ಟೈಲ್‌ ಅಂಗಡಿ ಮಾಲೀಕನ ಗುಂಡಿಟ್ಟು ಹತ್ಯೆ: ಪ್ರತೀಕಾರದ ಕೊಲೆ?

author img

By

Published : Aug 17, 2021, 11:16 PM IST

Updated : Aug 17, 2021, 11:41 PM IST

Textile shop owner Murder in Chitradurga

ಬಟ್ಟೆ ಅಂಗಡಿಯ ವ್ಯಾಪಾರಿಯ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದ್ದು, ಪ್ರತೀಕಾರದ ಕೊಲೆ ಎಂಬ ಸಂಶಯ ಪೊಲೀಸರಲ್ಲಿ ಮೂಡಿದೆ.

ಚಿತ್ರದುರ್ಗ: ಬಟ್ಟೆ ಅಂಗಡಿಯ ವ್ಯಾಪಾರಿಯ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಪಟ್ಟಣದಲ್ಲಿ ನಡೆದಿದೆ. ಗುಂಡಿನ ಸದ್ದಿಗೆ ಪಟ್ಟಣ ಬೆಚ್ಚಿ ಬಿದ್ದಿದೆ.

ಮೂಲ್‌ಸಿಂಗ್‌ (35) ಕೊಲೆಯಾದ ವ್ಯಾಪಾರಿಯಾಗಿದ್ದು, ಹೊಳಲ್ಕೆರೆ ಪಟ್ಟಣದ ಹೊಸದುರ್ಗ ರಸ್ತೆಯ ಅನ್ನಪೂರ್ಣೇಶ್ವರಿ ಹೋಟೆಲ್‌ ಸಮೀಪದಲ್ಲಿರುವ ‘ಪ್ರಿಯದರ್ಶಿನಿ ಟೆಕ್ಸ್‌ಟೈಲ್‌’ ಎಂಬ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದರು.

ರಾತ್ರಿ 9.30ರ ಸುಮಾರಿಗೆ ಅಂಗಡಿಯ ಮುಂಭಾಗದಲ್ಲಿ ಇಟ್ಟಿದ್ದ ಬಟ್ಟೆಗಳನ್ನು ಒಳಗೆ ಎತ್ತಿ ಇಡುವಾಗ ಗುಂಡು ಹಾರಿಸಲಾಗಿದೆ. ಇಬ್ಬರು ದುಷ್ಕರ್ಮಿಗಳು ಈ ಕೃತ್ಯ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹತ್ಯೆ ನಡೆದ ಸ್ಥಳ

ವ್ಯಾಪಾರಿಯ ಕೊಲೆಗೆ ದುಷ್ಕರ್ಮಿಗಳು ಬಹುದಿನಗಳಿಂದ ಹೊಂಚು ಹಾಕಿರುವ ಸಾಧ್ಯತೆ ಇದೆ. ಕೆಸರಗಟ್ಟೆ ಕೆರೆ ಪಕ್ಕದಲ್ಲೇ ಬಟ್ಟೆ ಅಂಗಡಿ ಇರುವುದರಿಂದ ವ್ಯಾಪಾರಿ ಹೊರಗೆ ಬರುವ ಸಮಯಕ್ಕೆ ದುಷ್ಕರ್ಮಿಗಳು ಕಾದಿದ್ದಾರೆ. ಗುಂಡು ಹಾರಿಸಿ ಕಾಲ್ನಡಿಗೆಯಲ್ಲಿಯೇ ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ವಿವರಿಸಿದ್ದಾರೆ.

ಪ್ರತೀಕಾರದ ಕೊಲೆ..?

2018ರ ನವೆಂಬರ್​​ 28ರಂದು ರಾಮಗಿರಿಯಲ್ಲಿ ನಡೆದ ಚಿನ್ನದ ವ್ಯಾಪಾರಿ ಕಲ್ಯಾಣ ಸಿಂಗ್‌ ಕೊಲೆ ಪ್ರಕರಣದಲ್ಲಿ ಮೂಲ್​ಸಿಂಗ್‌ನನ್ನು ಪೊಲೀಸರು ಬಂಧಿಸಿದ್ದರು. ಬಾಡಿಗೆ ಮನೆಯ ವಿಚಾರದಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿತ್ತು. ಮೂಲ್‌ಸಿಂಗ್ ಹಾಗೂ ಇಬ್ಬರು ಸಹೋದರರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.

ಈ ಪ್ರಕರಣದಲ್ಲಿ ಜೈಲು ಸೇರಿದ್ದ ಮೂಲ್‌ಸಿಂಗ್‌ ಜಾಮೀನು ಮೇಲೆ ಹೊರಗೆ ಬಂದಿದ್ದನು. ಕಲ್ಯಾಣ್‌ಸಿಂಗ್‌ ಹತ್ಯೆಗೆ ಪ್ರತೀಕಾರವಾಗಿ ಈ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ರಾಧಿಕಾ, ಡಿವೈಎಸ್‌ಪಿ ಪಾಂಡುರಂಗ, ಸಿಪಿಐ ರವೀಶ್‌ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗಾರರಿಗೆ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ: ನನ್ನ ಕೊಂದರೂ ಸರಿ ಆಫ್ಘನ್​ ತೊರೆಯಲ್ಲ: ಪಟ್ಟು ಹಿಡಿದ ಏಕೈಕ ಹಿಂದೂ ಅರ್ಚಕ

Last Updated :Aug 17, 2021, 11:41 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.