ಬಾಗಲಕೋಟೆ : ಜಿಲ್ಲೆಯಲ್ಲಿ ಬಿಸಿಲ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯನವರ ಕ್ಷೇತ್ರ ಬಾದಾಮಿ ತಾಲೂಕಿನಲ್ಲಿ ಹರಿಯುತ್ತಿರುವ ಮಲಪ್ರಭಾ ನದಿಯಲ್ಲಿ ನೀರು ಕಡಿಮೆ ಆಗುತ್ತಿದೆ. ಈ ಹಿನ್ನೆಲೆ ಸಿದ್ದರಾಮಯ್ಯನವರು ನವಿಲು ತೀರ್ಥದಿಂದ ನೀರು ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಈಗ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿ ಮತ್ತು ಎಡದಂಡೆ ಕಾಲುವೆಗೆ ನೀರು ಬಿಡುಗಡೆ ಮಾಡುವಂತೆ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯಕ್ತರು ಆದೇಶ ಹೊರಡಿಸಿದ್ದಾರೆ.
ಕ್ಷೇತ್ರದ ಶಾಸಕರೂ ಆಗಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಮನವಿ ಮೇರೆಗೆ ನೀರು ಬಿಡುಗಡೆಗೆ ಪ್ರಾದೇಶಿಕ ಆಯಕ್ತರು ಆದೇಶಿಸಿದ್ದು, ಇಂದು ರಾತ್ರಿಯಿಂದಲೇ ನದಿ ಮತ್ತು ಕಾಲುವೆಗೆ ನೀರು ಹರಿಯಲಿದೆ.
ಬಾದಾಮಿಯ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೀವ್ರ ಅಭಾವ ತಲೆದೋರಿದೆ. ಕೊಳವೆ ಬಾವಿಗಳಲ್ಲಿ ಅಂತರ್ಜಲ ಬತ್ತಿರುವುದರಿಂದ ಕುಡಿಯುವ ನೀರಿಗಾಗಿ ಜನತೆ ಪರದಾಡುವಂತಾಗಿದೆ.
ಈ ಹಿನ್ನೆಲೆ ನವಿಲುತೀರ್ಥ ಜಲಾಶಯದಿಂದ ನೀರು ಬಿಡುಗಡೆ ಮಾಡುವಂತೆ ಸಿದ್ದರಾಮಯ್ಯ ಅವರು ಪ್ರಾದೇಶಿಕ ಆಯಕ್ತರಾದ ಆದಿತ್ಯ ಆಮ್ಲಾ ಬಿಸ್ವಾಸ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಮನವಿ ಮಾಡಿದ್ದರು. ಸಿದ್ದರಾಮಯ್ಯ ಅವರ ಮನವಿಗೆ ತಕ್ಷಣ ಸ್ಪಂದಿಸಿದ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.