ETV Bharat / state

ಚುನಾವಣಾ ನೀತಿ ಸಂಹಿತೆ : ಎಬಿ-ಪಿಎಂಜೆಎವೈ-ಎಆರ್​ಕೆ ಗುರುತಿನ ಚೀಟಿ ಕುರಿತ ಎಲ್ಲಾ ಪ್ರಕ್ರಿಯೆ ಸ್ಥಗಿತ

author img

By

Published : Mar 30, 2023, 10:49 PM IST

ಮೇ ತಿಂಗಳಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿವೆ. ಹೀಗಾಗಿ ಬುಧವಾರದಿಂದ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ಈ ನಿಟ್ಟಿನಲ್ಲಿ ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ-ಆರೋಗ್ಯ ಕರ್ನಾಟಕ' ಕಾರ್ಡ್​ ವಿತರಣೆಯನ್ನು ಸ್ಥಗಿತಗೊಳಿಸಲಾಗಿದೆ.

ಆರೋಗ್ಯ ಇಲಾಖೆ
ಆರೋಗ್ಯ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಎಬಿ-ಪಿಎಂಜೆಎವೈ-ಎಆರ್​ಕೆ ಗುರುತಿನ ಚೀಟಿ ಕುರಿತ ಎಲ್ಲಾ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಲಾಗಿದೆ.

ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಈ ಕುರಿತು ಆರೋಗ್ಯ ಇಲಾಖೆ ಆಯುಕ್ತ ಡಿ ರಂದೀಪ್ ಆದೇಶ ಹೊರಡಿಸಿದ್ದಾರೆ. ಬುಧವಾರದಿಂದ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ಈ ನಿಟ್ಟಿನಲ್ಲಿ ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ-ಆರೋಗ್ಯ ಕರ್ನಾಟಕ' ಕಾರ್ಡ್​ ವಿತರಣೆಯನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೇ ಈ ಕಾರ್ಡ್​ ನೋಂದಣಿ, ಹಂಚಿಕೆ ಸೇರಿದಂತೆ ಕಾರ್ಡ್​ಗೆ ಸಂಬಂಧಿಸಿದಂತೆ ಯಾವುದೇ ಚಟುವಟಿಕೆಯನ್ನು ದಿನಾಂಕ 29-03-2023 ರಿಂದ ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸುವಂತೆ ಸುತ್ತೋಲೆ ಹೊರಡಿಸಿದ್ದಾರೆ.

ಈ ಸುತ್ತೋಲೆಯನ್ನು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ, ಆರೋಗ್ಯ ಇಲಾಖೆ ಅಧಿಕಾರಿಗಳು ಸೇರಿದಂತೆ ಆಯುಷ್ಮಾನ್ ಭಾರತ್ ಗುರುತಿನ ಚೀಟಿ ಆಯೋಜಕರಿಗೂ ಕಳುಹಿಸಿದ್ದಾರೆ. ಅಲ್ಲದೇ, ಮುಂದಿನ ಆದೇಶದವರೆಗೆ ಆಯುಷ್ಮಾನ್ ಭಾರತ್ ಗುರುತಿನ ಚೀಟಿಯ ಎಲ್ಲಾ ಚಟುವಿಟಕೆಗಳು ಮುಂದಿನ ಆದೇಶದವರೆಗೂ ಸ್ಥಗಿತವಾಗಲಿದೆ.

ಎಬಿ-ಪಿಎಂಜೆಎವೈ-ಎಆರ್​ಕೆ ಗುರುತಿನ ಚೀಟಿ ಕುರಿತ ಎಲ್ಲಾ ಪ್ರಕ್ರಿಯೆ ಸ್ಥಗಿತ
ಎಬಿ-ಪಿಎಂಜೆಎವೈ-ಎಆರ್​ಕೆ ಗುರುತಿನ ಚೀಟಿ ಕುರಿತ ಎಲ್ಲಾ ಪ್ರಕ್ರಿಯೆ ಸ್ಥಗಿತ

ಇದರಿಂದ ರಾಜ್ಯದ ಎಲ್ಲಾ ಅರ್ಹ ಫಲಾನುಭವಿಗಳಿಗೆ ಆಯುಷ್ಮಾನ್ ಭಾರತ್ ಕಾರ್ಡ್ ಸದ್ಯಕ್ಕೆ ಸಿಗುವುದಿಲ್ಲ ಎಂಬಂತಾಗಿದೆ. ರಾಜ್ಯಾದ್ಯಂತ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ಅಡಿಯಲ್ಲಿ ಎಬಿ-ಎಆರ್‌ಕೆ ಕಾರ್ಡನ್ನು ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ರೂ. 10 ಶುಲ್ಕದೊಂದಿಗೆ ನೀಡಲಾಗುತ್ತಿತ್ತು. ಬೆಂಗಳೂರು ಒನ್ ಕರ್ನಾಟಕ ಒನ್ ಮತ್ತು ಸೇವಾ ಸೀಂಧು ಕೇಂದ್ರಗಳಲ್ಲಿ 35 ರೂ. ಶುಲ್ಕದೊಂದಿಗೆ ಎಬಿ-ಎಆರ್‌ಕೆ ಕಾರ್ಡ್ ನೀಡಲಾಗುತ್ತಿತ್ತು. ಆದರೆ, ಈಗ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆ ಆಯುಷ್ಮಾನ್​ ಕಾರ್ಡ್‌ ವಿತರಣೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಿದೆ.

ಇದನ್ನೂ ಓದಿ : ಆಯುಷ್ಮಾನ್ ಕಾರ್ಡ್ ಉಪಯೋಗಗಳು ಹಾಗೂ ಯೋಜನೆಯ ಸೌಲಭ್ಯ ಪಡೆಯುವುದು ಹೇಗೆ?

ಎರಡು ಯೋಜನೆಗಳ ಸಂಯೋಜನೆ: ರಾಜ್ಯದ ಎಲ್ಲ ನಿವಾಸಿಗಳಿಗೂ ಆರೋಗ್ಯ ಕರ್ನಾಟಕ ಎಂಬ ಸಾರ್ವತ್ರಿಕ ಆರೋಗ್ಯ ರಕ್ಷಣಾ ಯೋಜನೆಯನ್ನು ರಾಜ್ಯ ಸರ್ಕಾರವು ದಿನಾಂಕ 02.03.2018 ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಿತ್ತು. ನಂತರ ಭಾರತ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಿತ್ತು. ಈ ಎರಡೂ ಯೋಜನೆಗಳ ಉದ್ದೇಶ, ವ್ಯಾಪ್ತಿಗಳಲ್ಲಿ ಹೋಲಿಕೆ ಇರುವುದರಿಂದ ಎರಡೂ ಯೋಜನೆಗಳನ್ನು ಸಂಯೋಜಿಸಿ 'ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಎಂಬ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಹಾಜರುಪಡಿಸಿ ಚಿಕಿತ್ಸೆ: ಬಿಪಿಎಲ್ ಪಡಿತರ ಕಾರ್ಡ್​ನ್ನು ಹೊಂದಿರುವವರು ಹಾಗೂ ರಾಷ್ರ್ಟೀಯ ಸ್ವಾಸ್ಥ್ಯ ಭೀಮಾ ಯೋಜನೆಯಲ್ಲಿ ನೋಂದಾಯಿತವಾಗಿರುವ ಫಲಾನುಭವಿಗಳಿಗೆ ಒಂದು ವರ್ಷಕ್ಕೆ ರೂ.5.00 ಲಕ್ಷಗಳವರೆಗೆ ಉಚಿತ ಚಿಕಿತ್ಸೆ ಲಭ್ಯ. ಎಪಿಎಲ್ ಕಾರ್ಡುದಾರರು ಆಥವಾ ಬಿಪಿಎಲ್ ಕಾರ್ಡ್​ ಹೊಂದಿಲ್ಲದವರಿಗೆ ಸಹ ಪಾವತಿ ಆಧಾರದ ಮೇಲೆ ಸರ್ಕಾರಿ ಪ್ಯಾಕೇಜ್ ದರದ 30% ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದೆ. ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ರೂ.1.50 ಲಕ್ಷ ಇರುತ್ತದೆ. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಹಾಜರುಪಡಿಸಿ ಚಿಕಿತ್ಸೆ ಪಡೆದುಕೊಳ್ಳಬಹುದು.

ಇದನ್ನೂ ಓದಿ : 'ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಇದ್ದರೆ ಚಿಕಿತ್ಸೆಗೆ ಮತ್ಯಾವುದೇ ದಾಖಲೆಗಳ ಅವಶ್ಯಕತೆಯಿಲ್ಲ'

ETV Bharat Logo

Copyright © 2024 Ushodaya Enterprises Pvt. Ltd., All Rights Reserved.