ಬೆಂಗಳೂರು: ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ 220 ಕೋಟಿ ರೂ.ಗೂ ಹೆಚ್ಚಿನ ಮೊತ್ತದ ವಂಚನೆ ಪ್ರಕರಣದ ಆರೋಪಿಯಾಗಿರುವ ಶೋಭಾ ಡೆವಲಪರ್ಸ್ ಉಪಾಧ್ಯಕ್ಷ ಹಾಗೂ ಮ್ಯಾನೇಜಿಂಗ್ ಡೈರೆಕ್ಟರ್ ಜಗದೀಶ್ ಚಂದ್ರ ಶರ್ಮಾ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದೆ.
ಪ್ರಕರಣದಲ್ಲಿ ಆರೋಪಿಯಾಗಿರುವ ಜಗದೀಶ್ ಚಂದ್ರ ಶರ್ಮಾ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಕೆ. ನಟರಾಜನ್ ಅವರಿದ್ದ ಪೀಠ ಮನವಿ ವಜಾಗೊಳಿಸಿ ಆದೇಶಿಸಿದೆ. ಪೀಠ ತನ್ನ ಆದೇಶದಲ್ಲಿ, ಪ್ರಕರಣದಲ್ಲಿ ಆರೋಪಿತರ ವಿರುದ್ಧ ದಾಖಲಿಸಿರುವ ಆರೋಪಗಳು ದೇಶದ ಆರ್ಥಿಕತೆನ್ನು ದುರ್ಬಲಗೊಳಿಸುವ ಗುರುತರ ಅಪರಾಧಗಳಾಗಿವೆ. ಹೀಗಾಗಿ ಸಕ್ಷಮ ಪ್ರಾಧಿಕಾರ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುವ ಅವಶ್ಯಕತೆ ಇರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.
ಇದನ್ನೂ ಓದಿ: ಬಳ್ಳಾರಿ ರಸ್ತೆ ಅಗಲೀಕರಣ: ಸುಪ್ರೀಂನಲ್ಲಿ ಬಗೆಹರಿಸಿಕೊಳ್ಳುವುದಾಗಿ ಹೈಕೋರ್ಟ್ಗೆ ಸರ್ಕಾರದ ಮಾಹಿತಿ
ಪ್ರಕರಣ ಸಂಬಂಧ ಜಗದೀಶ ಚಂದ್ರ ಶರ್ಮಾ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಈ ಹಿನ್ನೆಲೆ ಬಂಧನ ಭೀತಿ ಎದುರಿಸುತ್ತಿರುವ ಶರ್ಮಾ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.