ETV Bharat / state

ಕೆಪಿಎಸ್​​ಸಿ ಅಧ್ಯಕ್ಷ, ಸದಸ್ಯರ ನೇಮಕ ಪಾರದರ್ಶಕವಾಗಿರಬೇಕು: ಹೈಕೋರ್ಟ್

author img

By

Published : Aug 2, 2023, 6:52 AM IST

appointment-of-kpsc-chairman-members
ಕೆಪಿಎಸ್​​ಸಿ ಅಧ್ಯಕ್ಷ, ಸದಸ್ಯರ ನೇಮಕ ಪಾರದರ್ಶಕವಾಗಿರಬೇಕು : ಹೈಕೋರ್ಟ್

ಕೆಪಿಎಸ್‌ಸಿ ಅಧ್ಯಕ್ಷ ಮತ್ತು ಸದಸ್ಯರ ನೇಮಕದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಿಳಿಸಿದೆ.

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷ ಮತ್ತು ಸದಸ್ಯರ ನೇಮಕದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಕೆಪಿಎಸ್‌ಸಿ ಅಧ್ಯಕ್ಷ ಮತ್ತು 11 ಮಂದಿ ಸದಸ್ಯರ ನೇಮಕಾತಿ ಆದೇಶ ರದ್ದುಪಡಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಟಿ. ನರಸಿಂಹಮೂರ್ತಿ ಮತ್ತು ಶಶಿಪ್ರಸಾದ್ ಗಾಂಧಿ ಎಂಬುವರು ಸಲ್ಲಿಸಿದ್ದ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಈ ಎರಡು ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ಪೀಠ ಪ್ರಕಟಿಸಿದೆ. ಅಲ್ಲದೇ, ಕೆಪಿಎಸ್‌ಸಿ ಅಧ್ಯಕ್ಷ ಹಾಗೂ ಸದಸ್ಯರ ಹುದ್ದೆಗಳು ಉನ್ನತಮಟ್ಟದ ಮತ್ತು ಅತಿ ಸೂಕ್ಷ್ಮ ಸಾಂವಿಧಾನಿಕ ಹುದ್ದೆಗಳಾಗಿವೆ. ಅವುಗಳಿಗೆ ನೇಮಕ ಮಾಡುವ ವೇಳೆ ರಾಜ್ಯ ಸರ್ಕಾರ ಸಂಪೂರ್ಣವಾಗಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು.

ಯಾವುದೇ ಆಕ್ಷೇಪಣೆ, ಆರೋಪ ಮತ್ತು ನಿರಂಕುಶತ್ವ ಮತ್ತು ಸ್ವೇಚ್ಛೆಯಿಂದ ಅಧಿಕಾರ ಬಳಕೆ ಮಾಡುವುದಕ್ಕೆ ಅವಕಾಶ ಕಲ್ಪಿಸಬಾರದು. ಲೋಕಸೇವಾ ಆಯೋಗದ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ ಅನುಸರಿಸಬೇಕಾದ ಪ್ರಕ್ರಿಯೆ ಕುರಿತಂತೆ ಪಂಜಾಬ್ ಸರ್ಕಾರ ಮತ್ತು ಸಲೀಲ್ ಸಬ್‌ಲೋಕ್ ನಡುವಿನ ಪ್ರಕರಣದಲ್ಲಿ ಸುಪ್ರಿಂಕೋರ್ಟ್ ನೀಡಿರುವ ನಿರ್ದೇಶನಗಳು ಪಾಲನೆ ಆಗುವಂತೆ ರಾಜ್ಯ ಸರ್ಕಾರ ಎಲ್ಲ ಪ್ರಯತ್ನ ನಡೆಸಬೇಕು ಎಂದು ಆದೇಶದಲ್ಲಿ ನ್ಯಾಯಪೀಠ ನಿರ್ದೇಶಿಸಿದೆ.

ಆದರೆ, ಕೆಪಿಎಸ್‌ಸಿ ಅಧ್ಯಕ್ಷ ಹಾಗೂ ಸದಸ್ಯರ ನೇಮಕಾತಿ ವೇಳೆ ಶೋಧನಾ ಸಮಿತಿ ರಚನೆ ಮಾಡಬೇಕು ಎಂಬ ಪಿ.ಸಿ. ಹೋಟಾ ಸಮಿತಿಯ ಶಿಫಾರಸು ಕೈ ಬಿಡಲು ರಾಜ್ಯ ಸಚಿವ ಸಂಪುಟವು 2013ರ ಆಗಸ್ಟ್ 23ರಂದು ನಿರ್ಣಯ ಕೈಗೊಂಡಿದೆ. ಇದರಿಂದ 2021ರಲ್ಲಿ ಶಿವಶಂಕರ ಎಸ್. ಸಾಹುಕಾರ್ ಅವರನ್ನು ಸದಸ್ಯರಾಗಿ ನಂತರ ಅವರನ್ನೇ ಅಧ್ಯಕ್ಷರಾಗಿ ಹಾಗೂ ಡಾ.ಚಂದ್ರಕಾಂತ್ ಡಿ. ಶಿವಕೇರಿ ಸೇರಿದಂತೆ 11 ಮಂದಿ ಸದಸ್ಯರನ್ನು ನೇಮಿಸಿದ ವೇಳೆ ಹೋಟಾ ಸಮಿತಿ ಮಾರ್ಗಸೂಚಿ ಅನುಸರಿಸಬೇಕಿತ್ತು ಎಂಬ ನಿಯಮ ಪ್ರಚಲಿತದಲ್ಲಿ ಇರಲಿಲ್ಲ. ಹಾಗಾಗಿ, ಕೆಪಿಎಸ್‌ಸಿ ಅಧ್ಯಕ್ಷರ ಹಾಗೂ ಸದಸ್ಯರ ನೇಮಕಕ್ಕೆ ಹೋಟಾ ಸಮಿತಿಯ ಮಾರ್ಗಸೂಚಿ ಪಾಲಿಸಬೇಕು ಮತ್ತು ನಿರ್ದಿಷ್ಟ ನಿಯಮ ರೂಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂಬ ಅರ್ಜಿದಾರರ ಮನವಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಆದೇಶದಲ್ಲಿ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಅರ್ಜಿದಾರರ ಮನವಿ ಏನಿತ್ತು?: ಕೆಪಿಎಸ್‌ಸಿ ಅಧ್ಯಕ್ಷ ಹಾಗೂ ಸದಸ್ಯರ ನೇಮಕಾತಿಗೆ ನಿರ್ದಿಷ್ಟ ನಿಯಮಗಳನ್ನು ರೂಪಿಸಬೇಕು. ಆ ನಿಯಮಗಳನ್ನು ರೂಪಿಸುವವರೆಗೆ ಕೇಂದ್ರ ಲೋಕಸೇವಾ ಆಯೋಗದ ನಿವೃತ್ತ ಅಧ್ಯಕ್ಷ ಹೋಟಾ ಅವರ ನೇತೃತ್ವದ ಸಮಿತಿ ಶಿಫಾರಸು ಮಾಡಿರುವ ಮಾಗಸೂರ್ಚಿಗಳನ್ನು ಪಾಲಿಸಬೇಕು ಎಂದು 2016ರಲ್ಲಿ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿತ್ತು. ಆದರೆ, ಹೋಟಾ ಸಮಿತಿ ಮಾರ್ಗಸೂಚಿಯಂತೆ ಶೋಧನಾ ಸಮಿತಿ ರಚಿಸದೆ ಮತ್ತು ಯಾವುದೇ ನಿಯಮ ರೂಪಿಸದೇ ರಾಜ್ಯ ಸರ್ಕಾರವು ಕೆಪಿಎಸ್‌ಎಸಿಗೆ ಸದಸ್ಯರನ್ನು ನೇಮಿಸಿದೆ. ಹಾಗಾಗಿ, ಕೆಪಿಎಸ್‌ಸಿ ಸದಸ್ಯರನ್ನು ನೇಮಕಾತಿ ಆದೇಶ ರದ್ದುಪಡಿಸಬೇಕು. ಹೋಟಾ ಸಮಿತಿ ಅನುಸಾರ ಹೊಸದಾಗಿ ಸದಸ್ಯರನ್ನು ನೇಮಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂಬುದು ಅರ್ಜಿದಾರರ ಮನವಿಯಾಗಿತ್ತು.

ಇದನ್ನೂ ಓದಿ: ಒತ್ತುವರಿ ತೆರವು ಕಾರ್ಯಕ್ಕೆ ಮುಂದಾಗದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಿ : ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.