ETV Bharat / state

ಸಿದ್ದರಾಮಯ್ಯ ವಿರುದ್ಧ ಹೇಳಿಕೆ ಪ್ರಕರಣ: ಎಫ್​​ಐಆರ್ ರದ್ದು ಕೋರಿ ಹೈಕೋರ್ಟ್​ಗೆ ಅಶ್ವತ್ಥ ನಾರಾಯಣ ಅರ್ಜಿ

author img

By

Published : May 29, 2023, 5:25 PM IST

ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ ಸಂಬಂಧ ದಾಖಲಾಗಿರುವ ಎಫ್​ಐಆರ್ ರದ್ದುಗೊಳಿಸುವಂತೆ ಮಾಜಿ ಸಚಿವ ಡಾ ಸಿ ಎನ್ ಅಶ್ವತ್ಥ ನಾರಾಯಣ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಮಂಡ್ಯದ ಸಾತನೂರಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಟಿಪ್ಪುವನ್ನು ಹೊಡೆದುಹಾಕಿದ್ದಂತೆ ಹೊಡೆದು ಹಾಕಿ ಎಂದು ಕರೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ಐಆರ್ ರದ್ದುಕೋರಿ ಮಾಜಿ ಸಚಿವ, ಮಲ್ಲೇಶ್ವರ ವಿಧಾನಸಭಾ ಶಾಸಕ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಗೆ ಸಂಬಂಧಿಸಿದಂತೆ ಸೋಮವಾರ ಹಿರಿಯ ವಕೀಲರಾದ ಲಕ್ಷ್ಮೀ ಅಯ್ಯಂಗಾರ್ ಅವರು, ಅರ್ಜಿಯನ್ನು ಇಂದೇ ವಿಚಾರಣೆಗೆ ಪರಿಗಣಿಸಬೇಕು ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠಕ್ಕೆ ಮನವಿ ಮಾಡಿದರು.

ಅಲ್ಲದೇ, ಘಟನೆ ನಡೆದು ಕೆಲವು ತಿಂಗಳುಗಳು ಕಳೆದಿವೆ. ರಾಜ್ಯದಲ್ಲಿ ಸರ್ಕಾರ ಬದಲಾಗುತ್ತಿದ್ದಂತೆ ದೂರು ನೀಡಲಾಗಿದೆ.‌ ಜೊತೆಗೆ ಈ ಸಂಬಂಧ ಎಫ್​ಐಆರ್ ದಾಖಲಿಸಲಾಗಿದೆ. ಹೀಗಾಗಿ ಇಂದು ಮಧ್ಯಾಹ್ನ ವಿಚಾರಣೆಗೆ ಪರಿಗಣಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಮಂಗಳವಾರ(ನಾಳೆ)ಗೆ ವಿಚಾರಣೆಗೆ ಪರಿಗಣಿಸಲಾಗುವುದು ಎಂದು ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು.

ಅರ್ಜಿಯಲ್ಲಿ ಏನೆಂದು ಕೋರಲಾಗಿದೆ? ಅರ್ಜಿದಾರ ಅಶ್ವತ್ಥ ನಾರಾಯಣ್ ವಿರುದ್ಧ ದಾಖಲಾಗಿರುವ ಪ್ರಕರಣ ಸಂವಿಧಾನದ ಪರಿಚ್ಛೇದ 14 ಮತ್ತು 21ಕ್ಕೆ ವಿರುದ್ಧವಾಗಿದ್ದು, ಕಾನೂನು ಬಾಹಿರವಾಗಿ ಪ್ರಕರಣ ದಾಖಲಿಸಲಾಗಿದೆ. ಕ್ರಿಮಿನಲ್ ಬೆದರಿಕೆ, ದಂಗೆ ಉಂಟು ಮಾಡುವುದು, ಉದ್ದೇಶಪೂರ್ವಕವಾಗಿ ಪ್ರಚೋದನೆ ನೀಡಿರುವ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಇದಕ್ಕೆ ಸೂಕ್ತ ಪುರಾವೆಗಳು ಇಲ್ಲವಾಗಿದೆ. ಅಲ್ಲದೆ, ದೂರುದಾರರು ಘಟನಾ ಸ್ಥಳದಲ್ಲಿ ಇರಲಿಲ್ಲ. ಅರ್ಜಿದಾರರ ಭಾಷಣದಿಂದ ಈವರೆಗೂ ಯಾವುದೇ ಗಲಭೆ ನಡೆದಿಲ್ಲ. ಅಲ್ಲದೇ ಅರ್ಜಿದಾರರ ಹೇಳಿಕೆಯಿಂದ ಯಾವ ವ್ಯಕ್ತಿಯ ಮೇಲೆ ನೇರವಾಗಿ ಪರಿಣಾಮ ಬೀರಲಿದೆ ಎಂಬುದನ್ನು ಸ್ಪಷ್ಟಪಡಿಸಿಲ್ಲ.

ಈ ದೂರು ಒಂದು ಕಾಲ್ಪನಿಕವಾಗಿದೆ. ಅರ್ಜಿದಾರರು ಈ ಹೇಳಿಕೆ ನೀಡುವುದಕ್ಕೂ ಮುನ್ನ ಕೊಡಗಿನಲ್ಲಿ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದಿರುವುದನ್ನು ದೂರಿನಲ್ಲಿ ಪ್ರಸ್ತಾಪಿಸಿದ್ದಾರೆ. ಜೊತೆಗೆ ಅರ್ಜಿದಾರರ ಹೇಳಿಕೆ ಸಮಾಜದಲ್ಲಿ ಅಶಾಂತಿ ಉಂಟು ಮಾಡಿ ಸಿದ್ದರಾಮಯ್ಯ ವಿರುದ್ಧ ಪ್ರಚೋದನೆ ಮಾಡಿದ್ದಾರೆ ಎಂಬುದಾಗಿ ಆರೋಪಿಸಲಾಗಿದೆ.

ಅರ್ಜಿದಾರರು ಕಳೆದ ಎರಡು ದಶಕಗಳಿಂದ ಸಾರ್ವಜನಿಕ ಜೀವನದಲ್ಲಿದ್ದು, ಸಮಾಜದ ಭಾವನೆಗಳಿಗೆ ಧಕ್ಕೆಯಾಗುವ ಯಾವುದೇ ಹೇಳಿಕೆ ನೀಡಿಲ್ಲ. ಸರ್ಕಾರದ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದಾರೆ. ಹೀಗಾಗಿ ಅವರ ಘನತೆಗೆ ಧಕ್ಕೆಯಾಗುವಂತೆ ಮಾಡುವುದಕ್ಕಾಗಿ ದೂರು ದಾಖಲಿಸಲಾಗಿದೆ. ಅಲ್ಲದೇ, ಸಿದ್ದರಾಮಯ್ಯ ಅವರ ಕುರಿತು ಗೌರವವಿದ್ದು, ಅವರ ಮತ್ತು ನನ್ನ ನಡುವೆ ಯಾವುದೇ ವೈಯಕ್ತಿಕ ಭಿನ್ನಾಭಿಪ್ರಾಯ ಇಲ್ಲ.

ಆದರೆ, ಸೈದ್ಧಾಂತಿಕ ಭಿನ್ನಾಭಿಪ್ರಾಯಗಳು ಇವೆ. ಮುಂದಿನ ಚುನಾವಣೆಯಲ್ಲಿ ಅವರನ್ನು ಸೋಲಿಸಬೇಕು ಎಂಬ ರೀತಿಯಲ್ಲಿ ಹೇಳಿದ್ದೇನೆ. ಅವರ ವಿರುದ್ಧ ಪ್ರಚೋದನೆ ನೀಡುವ ಉದ್ದೇಶವಿಲ್ಲ ಎಂದು ಮಾಧ್ಯಮಗಳು ಮತ್ತು ವಿಧಾನ ಮಂಡಲ ಅಧಿವೇಶನದಲ್ಲಿ ಘಟನೆ ಸಂಬಂಧ ಅರ್ಜಿದಾರರು ವಿಷಾದ ವ್ಯಕ್ತ ಪಡಿಸಿದ್ದಾರೆ.

ಆದರೂ ಅರ್ಜಿದಾರರಿಗೆ ಮಾನಸಿಕ ಹಿಂಸೆ ನೀಡುವು ಉದ್ದೇಶದಿಂದ ದೂರು ನೀಡಿದ್ದು, ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿದ್ದಾರೆ.

ಪ್ರಕರಣದ ಹಿನ್ನೆಲೆ ಏನು ? 2023 ರ ಫೆಬ್ರವರಿ 15 ರಂದು ಸಚಿವರಾಗಿದ್ದ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರು ಮಂಡ್ಯದ ಸಾತನೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉರಿಗೌಡ-ನಂಜೆಗೌಡ ಟಿಪ್ಪುವನ್ನು ಕೊಂದಿದ್ದರು. ಅದೇ ರೀತಿಯಲ್ಲಿ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂದಿದ್ದರು. ಈ ಸಂಬಂಧ ಕೆಪಿಸಿಸಿ ವಕ್ತಾರಾ ಲಕ್ಷ್ಮಣ ಅವರು ಮೇ 24 ರಂದು ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇದನ್ನೂ ಓದಿ: ಸಿದ್ದು, ಡಿಕೆಶಿ ದ್ವೇಷದ ರಾಜಕಾರಣಕ್ಕೆ ಹೆದರಲ್ಲ, ಹೋರಾಡುವ ಶಕ್ತಿ ಭಗವಂತ ನಮಗೂ ಕೊಟ್ಟಿದ್ದಾನೆ: ಅಶ್ವತ್ಥನಾರಾಯಣ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.